ಕರಪತ್ರ, ಭಿತ್ತಿಪತ್ರ ಬಿಡುಗಡೆಗೊಳಿಸಿ, ಸಿದ್ಧತೆ ಪರೀಶೀಲಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು

 ಕರಪತ್ರ, ಭಿತ್ತಿಪತ್ರ ಬಿಡುಗಡೆಗೊಳಿಸಿ, ಸಿದ್ಧತೆ ಪರೀಶೀಲಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು District Collector Divya Prabhu released pamphlets and posters and reviewed the preparations.

 ಕರಪತ್ರ, ಭಿತ್ತಿಪತ್ರ ಬಿಡುಗಡೆಗೊಳಿಸಿ, ಸಿದ್ಧತೆ ಪರೀಶೀಲಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು 

ಧಾರವಾಡ 31: ಪ್ರಸಕ್ತ ಸಾಲಿನ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ಮುಖ್ಯವಾಗಿ ಯುವ ಸಮೂಹದಲ್ಲಿ ಸ್ವಾತಂತ್ರ್ಯೋತ್ಸವದ ದೇಶ ಪ್ರೇಮವನ್ನು ಬೆಳೆಸುವ ಮತ್ತು ಸ್ವಾತಂತ್ರ್ಯ ಘಳಿಗೆಯನ್ನು ಸ್ಮರಿಸುವ ಉದ್ದೇಶದಿಂದ ಅವಳಿ ನಗರದ ವಿವಿಧ ಪದವಿ ಕಾಲೇಜುಗಳು, ವಿಶ್ವವಿದ್ಯಾಲಯಗಳು, ಸ್ವಾಯತ್ತ ವಿಶ್ವವಿದ್ಯಾಲಯಗಳು ತಮ್ಮ ವಿದ್ಯಾರ್ಥಿಗಳ ಮೂಲಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.  

ಅವರು ನಿನ್ನೆ ದಿನ (ಜು.30) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಗಂಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮದ ಭಿತ್ತಿಪತ್ರ, ಕರಪತ್ರ ಬಿಡುಗಡೆ ಮತ್ತು ವಿವಿಧ ಕಾಲೇಜು, ವಿಶ್ವವಿದ್ಯಾಲಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು.   

ಸ್ವಾತಂತ್ರ್ಯ ದಿನಾಚರಣೆಯು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಲ್ಲ. ಇದು ದೇಶದ ಪ್ರತಿಯೊಬ್ಬ ಪ್ರಜೆಯ ಹೆಮ್ಮೆಯ ಪ್ರತೀಕ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಬಿಟ್ಟ ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುವ ಈ ಪವಿತ್ರ ದಿನವನ್ನು ಅತ್ಯಂತ ಗೌರವಯುತವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯ. ಮತ್ತು ಅತ್ಯಂತ ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.   

ಆಗಸ್ಟ್‌ 14 ರ ಸಂಜೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳು ಸಿದ್ಧತೆಯನ್ನು ಮಾಡಿಕೊಳ್ಳಲು ಅವರು ಹೇಳಿದರು.  

79ನೇ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಯುವ ಸಂಭ್ರಮವು ಯುವಕ, ಯುವತಿಯರಲ್ಲಿ ರಾಷ್ಟ್ರ ಪ್ರೇಮವನ್ನು ಬೆಳೆಸುವಂತಹ ಕಾರ್ಯಕ್ರಮವಾಗಬೇಕು. ಮತ್ತು ಅದು ನಮ್ಮ ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರೀಯತೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತುವ ಒಂದು ಮಹತ್ವದ ಘಟ್ಟವಾಗಬೇಕು. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಬೇಕಿದೆ ಎಂದು ಅವರು ತಿಳಿಸಿದರು. 

ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಅವರಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಿಕೊಡಲಾಗಿದೆ ಎಂದು ಅವರು ಹೇಳಿದರು. 

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸುವಂತಹ ಜ್ಞಾನವರ್ಧಕ ಕಾರ್ಯಕ್ರಮಗಳನ್ನೂ ಆಯೋಜಿಸಬೇಕು. ಜಿಲ್ಲೆಯ ಜಾನಪದ ಕಲೆಗಳು, ಸ್ಥಳೀಯ ಪ್ರತಿಭೆಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಇದರಿಂದ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ಅವರು ತಿಳಿಸಿದರು. 

ಪೊಲೀಸ್ ಇಲಾಖೆಯು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. 

ಸಮೂಹ ನೃತ್ಯ, ಜಾನಪದ ನೃತ್ಯ, ನೃತ್ಯ ರೂಪಕ, ಸಮೂಹ ದೇಶಭಕ್ತಿ ಗೀತೆ, ಸ್ವಾತಂತ್ರ್ಯ ಹೋರಾಟಗಾರರ ಕುರಿತ ರೂಪಕ ಮತ್ತು ಇತರೆ ಹಾಸ್ಯಮಯ ಪ್ರದರ್ಶನಗಳು ಈ ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಇರುತ್ತವೆ.  

ಆಗಸ್ಟ್‌ 15 ರಂದು ಧ್ವಜಾರೋಹಣ: ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಅದ್ಧೂರಿಯಾಗಿ ಆಯೋಜಿಸಬೇಕು. ಪೊಲೀಸ್, ಗೃಹರಕ್ಷಕ ದಳ, ಎನ್‌.ಸಿ.ಸಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಆಯೋಜಿಸಬೇಕು. ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮಕ್ಕಳಿಂದ ಏರಿ​‍್ಡಸಲು ಶಿಕ್ಷಣ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. 

ಸಭೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರದ ವಿವಿಧ ವಿಶ್ವವಿದ್ಯಾಲಯಗಳ, ಮಹಾವಿದ್ಯಾಲಯಗಳ ಮುಖ್ಯಸ್ಥರು, ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.