ಬೆಳೆಹಾನಿ ಜಂಟಿ ಸಮೀಕ್ಷಾ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

 ಬೆಳೆಹಾನಿ ಜಂಟಿ ಸಮೀಕ್ಷಾ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ District Collector Mohammad Roshan instructed to submit a joint survey report on crop damage

ಬೆಳಗಾವಿ, ಮೇ.19: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ-ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, ಈ ಕುರಿತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ಜರುಗಿಸಿ ಬೆಳೆ ಹಾನಿ ವರದಿಯನ್ನು ಮಾಸಂತ್ಯದೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

  ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ(ಮೇ.19) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ಶಿಥಿಲಾವಸ್ಥೆಯಲ್ಲಿರುವಂತಹ ಮನೆಗಳ ಸಮೀಕ್ಷೆ ಜರುಗಿಸಿ ಸಮೀಕ್ಷಾ ವರದಿಯನ್ನು ತ್ವರಿತವಾಗಿ ಒದಗಿಸಬೇಕು. ಅಲ್ಲದೇ ಶೀಥಿಲಾವಸ್ಥೆ ಮನೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲು ತಿಳಿಸಿದರು. 

ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಂಬಂಧಿಸಿದ ಅಧಿಕಾರಿಗಳು ಕೂಡ ಈ ವರದಿಯನ್ನು ಅದಷ್ಟು ಬೇಗ ನೀಡಬೇಕು. ಬಿಸಿಲಿನ ತಾಪಮಾನ ಹೆಚ್ಚಿರುವ ಕಾರಣ ಜಿಲ್ಲೆಯ ಅಗತ್ಯವಿರುವ ಕಡೆಯಲ್ಲಿ ಕುಡಿಯುವ ನೀರು ಸಮರ​‍್ಕ ಪೂರೈಕೆಯಾಗುವಂತೆ ನಿಗಾವಹಿಸಲು ಸೂಚಿಸಿದರು. 

ಅಗತ್ಯ ಸ್ಥಳಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಪ್ರತಿ ವಾರಕ್ಕೆ ಒಂದು ಬಾರಿ ಮಳೆಯಾಗುತ್ತಿರುವ ಕಾರಣ ಕುಡಿಯುವ ನೀರಿನ ಸಮಸ್ಯೆ ಅಷ್ಟೊಂದು ಕೇಳಿ ಬರುತ್ತಿಲ್ಲ ಒಂದು ವೇಳೆ ಸಮಸ್ಯೆ ಎದುರಾದಲ್ಲಿ ಕೂಡಲೇ ನೀರು ಪೂರೈಕೆ ಕ್ರಮ ವಹಿಸಬೇಕು.  

ಮಳೆಯ ವೇಗ, ಗಾಳಿ ಹೆಚ್ಚಿರುವ ಕಾರಣ ಸಿಡಿಲು ಬರುವ ಸಾಧ್ಯತೆಗಳಿದ್ದು ಸಿಡಿಲಿನಿಂದಾಗಬಹುದಾದ ಸಂಭವನೀಯ ಅನಾಹುತಗಳನ್ನು ತಪ್ಪಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಚ್ಚರಿಕಾ ಕ್ರಮಗಳ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು. ಪ್ರತಿ ಪಂಚಾಯತಿಗಳಿಗೆ ಟ್ಯಾಂಕರ್ ಗಳನ್ನು ಈಗಾಗಲೇ ಖರೀದಿ ಮಾಡಲಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಯಾವುದೇ ರೀತಿಯ ಅನುದಾನದ ಕೊರತೆ ಇರುವುದಿಲ್ಲ ಎಂದು ತಿಳಿಸಿದರು. 

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್‌. ಬಿ ಬಸರಗಿ, ಮಹಾನಗರ ಪಾಲಿಕೆ ಆಯುಕ್ತ ಎಂ. ಕಾರ್ತಿಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಜಿಲ್ಲಾ ಪಂಚಾಯಿತ ಯೋಜನಾ ನಿರ್ದೇಶಕ ರವಿ ಬಂಗಾರ​‍್ಪನವರ, ಜಿಲ್ಲಾ ಆರೋಗ್ಯಾಧಿಕಾರಿ ಈಶ್ವರ ಗಡಾದಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.