ಬೀದಿನಾಯಿಗಳ ಸಂತಾನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಬೀದಿನಾಯಿಗಳ ಸಂತಾನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ District Collector issues instructions for controlling the breeding of stray dogs

ಹಾವೇರಿ 20 :  ಜಿಲ್ಲೆಯಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕಾಗಿ ಸಂಬಂಧಪಟ್ಟ-ಸ್ಥಳೀಯ ನಗರ ಹಾಗೂ ಗ್ರಾಮೀಣ ಸಂಸ್ಥೆಯ ಅಧಿಕಾರಿಗಳು ಮತ್ತು ಪಶುಪಾಲನಾ ಇಲಾಖೆಯ ಪಶುವೈದ್ಯಾಧಿಕಾರಿಗಳು ಜಂಟಿಯಾಗಿ ಕಾರ್ಯೋನ್ಮುಖರಾಗಿ ಕಾರ್ಯನಿರ್ವಹಿಸುವಂತೆ  ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ  ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ  ಜಿಲ್ಲಾ ಮಟ್ಟದ ಪ್ರಾಣಿ ಸಂತಾನ  ನಿಯಂತ್ರಣ ಮತ್ತು ಮೇಲ್ವಿಚಾರಣಾ ಸಮಿತಿ ಸಭೆ ಹಾಗೂ ಸಂಚಾರಿ ಪಶು ಚಿಕಿತ್ಸಾ ಘಟಕದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಬೀದಿ ನಾಯಿಗಳ ಸಂತಾನ ನಿಯಂತ್ರಣ: ಅನಿಯಂತ್ರಿತ ನಾಯಿಗಳ ಸಂತಾನ ಉತ್ಪತ್ತಿಯಿಂದ ಜಿಲ್ಲೆಯಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಜನರು ಮನೆಯಿಂದ ಹೊರ ಬರುವುದಕ್ಕೂ ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಮಾಜಿಕವಾಗಿ ಇದು ತುಂಬಾ ಅಪಾಯಕಾರಿ ಬೆಳವಣೆಯಾಗಿದ್ದು,  ಈ ಪರಿಸ್ಥಿತಿ ನಿಯಂತ್ರಿಸುವುದು ಅತೀ ಅವಶ್ಯಕವಾಗಿದೆ.  ಸ್ಥಳೀಯ ನಗರ ಹಾಗೂ ಗ್ರಾಮೀಣ ಸಂಸ್ಥೆಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಯೋಗದಲ್ಲಿ ತುರ್ತಾಗಿ ಬೀದಿ ನಾಯಿಗಳ ಸಂತಾನ ನಿಯಂತ್ರಣ (ಎಬಿಸಿ) ಕಾರ್ಯಕ್ರಮ  ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. 

ರೇಬಿಸ್ ಲಸಿಕಾ ಕಾರ್ಯಕ್ರಮ: ವಿಶ್ವ ರೇಬಿಸ್ ದಿನದ ಅಂಗವಾಗಿ ಸೆಪ್ಟಂಬರ್ 28 ರಂದು ಜಿಲ್ಲೆಯಾದ್ಯಂತ ರೇಬಿಸ್ ಲಸಿಕಾ ಕಾರ್ಯಕ್ರಮ ಹಾಗೂ ರೇಬಿಸ್ ಜಾಗೃತಿ ಶಿಬಿರಗಳನ್ನು ಶಾಲೆಗಳಲ್ಲಿ ಮತ್ತು ಸಾರ್ವಜನಿಕರಿಗೆ ಹಮ್ಮಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.  

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ, ಪ್ರತಿ ವಾರ್ಡ, ಪಂಚಾಯತ್ ವ್ಯಾಪ್ತಿಯ ಬೀದಿ ನಾಯಿಗಳ ಸಾಂದ್ರತೆ ಅನುಗುಣವಾಗಿ ಸಾರ್ವಜನಿಕ ಸ್ಥಳಗಳನ್ನು ಹೊರತುಪಡಿಸಿ ಇತರೆ ನಿರ್ದಿಷ್ಟ ಸ್ಥಳವನ್ನು ಆಹಾರ ವಿತರಣೆಗಾಗಿ ಗುರುತಿಸಿಕೊಂಡು ಸಾರ್ವಜನಿಕರಿಗೆ ಪ್ರಚಾರ ಪಡಿಸಿ ಪೋಷಿಸಲು ಅನುವು ಮಾಡಿಕೊಡುವುದು ಎಂದು ತಿಳಿಸಿದರು.  

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ,  ಜಿಲ್ಲಾ ಯೋಜನಾ ನಿರ್ದೇಶಕರು, ನಗರಾಭಿವೃದ್ದಿ ಕೋಶ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು, ಎಲ್ಲ ಮುಖ್ಯ ಪಶುವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ನಗರ/ಪುರಸಭೆ/ಪಟ್ಟಣ ಪಂಚಾಯತಿಯ ಆಯುಕ್ತರು, ಮುಖ್ಯಾಧಿಕಾರಿಗಳು, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.