ಕುಟುಂಬದ ಮುಖ್ಯಸ್ಥರು ಎಲ್ಲಾ ಮಾಹಿತಿ ನೀಡಿ: ಡಾ. ಸುರೇಶ್ ಇಟ್ನಾಳ

ಕುಟುಂಬದ ಮುಖ್ಯಸ್ಥರು ಎಲ್ಲಾ ಮಾಹಿತಿ ನೀಡಿ: ಡಾ. ಸುರೇಶ್ ಇಟ್ನಾಳ District Collector launches census of social and educational conditions

ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಗಣತಿಗೆ ಜಿಲ್ಲಾಧಿಕಾರಿಗಳಿಂದ ಚಾಲನೆ 

ಕೊಪ್ಪಳ 22 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗಾಗಿ ಗಣತಿದಾರರು ತಮ್ಮ ಮನೆಗೆ ಬಂದಾಗ ಕುಟುಂಬದ ಮುಖ್ಯಸ್ಥರು ಎಲ್ಲಾ ಮಾಹಿತಿ ನೀಡಿ ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.  

ಅವರು ಸೋಮವಾರ ಕೊಪ್ಪಳ ನಗರದ ಬೃಂದಾವನ (ಕವಲೂರು) ಏರಿಯಾ ವಾರ್ಡ್‌ ನಂಬರ್ 29ರ ಶಶೀಧರ್ ಸವಡಿ ಅವರ ಮನೆಯಿಂದ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಮೊಬೈಲ್ ಆ್ಯಪ್ ಮೂಲಕ ಚಾಲನೆ ನೀಡಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿ, ಮಾತನಾಡಿದರು.ಹಿಂದುಳಿದ ವರ್ಗಗಳ ಆಯೋಗದ ನಿರ್ದೇಶನದಂತೆ ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 2969 ಗಣಿತಿದಾರರನ್ನು ಈಗಾಗಲೇ ನೇಮಕ ಮಾಡಿ, ಅವರಿಗೆ ತರಬೇತಿ ನೀಡಲಾಗಿದೆ. ನಮ್ಮ ಜಿಲ್ಲೆಯಲ್ಲಿ ಅಂದಾಜು 3,55,361 ಮನೆಗಳಿವೆ. ಈಗಾಗಲೇ 3,21,980 ಮನೆಗಳಿಗೆ ಜೆಸ್ಕಾಂ ಸಿಬ್ಬಂದಿಗಳ ಮೂಲಕ ಜಿಯೋ ಟ್ಯಾಗ್ ಇನ್ ಮಾಡಲಾಗಿದೆ. ಇಂದಿನಿಂದ ಸಮೀಕ್ಷೆ ಪ್ರಾರಂಭವಾಗಿದ್ದು, ಹೈದಿನೈದು ದಿನಗಳ ಕಾಲ ನಡೆಯುವ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ಸರ್ಕಾರದ ನಿರ್ದೇಶನದಂತೆ ಕೈಗೊಳ್ಳಲಾಗುತ್ತಿದೆ ಎಂದರು.ಗಣತಿದಾರರು ಈ ಸಮೀಕ್ಷೆಯಲ್ಲಿ ವೈಯಕ್ತಿಕವಾಗಿ 30 ಪ್ರಶ್ನೆ ಮತ್ತು ಕುಟುಂಬಕ್ಕೆ 30 ಸೇರಿ ಒಟ್ಟು 60 ಪ್ರಶ್ನೆಗಳನ್ನು ಪ್ರತಿ ಮನೆಯಲ್ಲಿ ಕೇಳಿ, ದಾಖಲಿಸುವರು. ಸಮೀಕ್ಷೆ ಸಂದರ್ಭದಲ್ಲಿ ಸಾರ್ವಜನಿಕರು ಮುಖ್ಯವಾಗಿ ಆಧಾರ್ ಕಾರ್ಡ್‌, ಎಪಿಕ್ ಕಾರ್ಡ್‌, ರೇಶನ್ ಕಾರ್ಡ್‌ ಮತ್ತು ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಇದರ ಜೊತೆ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ, 371(ಜೆ) ಪ್ರಮಾಣ ಪತ್ರ, ಕೌಶಲ್ಯ ಪ್ರಮಾಣ ಪತ್ರ ಅಥವಾ ಇನ್ನಿತರೆ ಪ್ರಮಾಣ ಪತ್ರಗಳಿದ್ದಲ್ಲಿ, ಅವುಗಳನ್ನು ಮಾಹಿತಿಗಾಗಿ ಇಟ್ಟುಕೊಳ್ಳಬಹುದಾಗಿದೆ. ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ ಗಣತಿ ಮಾಡುವಂತೆ ಹಿಂದುಳಿದ ವರ್ಗಗಳ ಆಯೋಗವು ನಿರ್ದೇಶನ ನೀಡಿದೆ. ಯಾವುದೇ ಸಮಸ್ಯೆ ಉಂಟಾದಲ್ಲಿ ಆಯೋಗದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಸಾರ್ವಜನಿಕರು ಈ ಸಮೀಕ್ಷೆಯ ಯಶಸ್ವಿಗೆ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾ.ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ನಾಗಮಣಿ ಹೊಸಮನಿ, ಕೊಪ್ಪಳ ತಹಶಿಲ್ದಾರ ವಿಠಲ ಚೌಗಲಾ., ಗಣತಿದಾರರಾದ ಪೂರ್ಣಿಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು. 

ಕೊಪ್ಪಳ ಜಿಲ್ಲೆಯಾದ್ಯಂತ ಸಮೀಕ್ಷೆ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ಕೊಪ್ಪಳ ಜಿಲ್ಲೆಯಾದ್ಯಂತ ಪ್ರಾರಂಭಿಸಲಾಗಿದ್ದು, ಗಂಗಾವತಿ, ಕನಕಗಿರಿ, ಕಾರಟಗಿ, ಕೊಪ್ಪಳ, ಕುಕನೂರು, ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕುಗಳು ಸೇರಿದಂತೆ ಕೊಪ್ಪಳ ಜಿಲ್ಲೆಯಲ್ಲಿ 3,55,361 ಕುಟುಂಬಗಳಿವೆ. ಈ ಸಮೀಕ್ಷೆಗಾಗಿ 2969 ಬ್ಲಾಕ್‌ಗಳನ್ನು ಗುರುತಿಸಿದ್ದು, ಪ್ರತಿಯೊಂದು ಬ್ಲಾಕ್‌ಗೆ ಒಬ್ಬರಂತೆ 2969 ಗಣತಿದಾರರನ್ನು ನೇಮಕ ಮಾಡಲಾಗಿದೆ.