ದುಂಡಿ ಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ

ದುಂಡಿ ಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ  Dundi Basaveshwara Jatra Mahotsava flagged off


ಲಕ್ಷ್ಮೇಶ್ವರ, ಸೆ. 07: ಸಮೀಪದ ಶ್ರೀ ದುಂಡಿ ಬಸವೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಹಾಗೂ ಎರಡನೇ ವರ್ಷದ ರಥೋತ್ಸವದ ಅಂಗವಾಗಿ ಶಾಸಕ ಡಾ. ಚಂದ್ರು ಲಮಾಣಿ ಅವರು ಶ್ರೀ ದುಂಡಿ ಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.  

ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶ್ರೀ ದುಂಡಿ ಬಸವೇಶ್ವರ ದೇವರು ಮಹಾನ್ ಶಕ್ತಿಸ್ವರೂಪಿಯಾಗಿದ್ದು, ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮಹಾದೇವರಾಗಿದ್ದಾರೆ. ದೇವಸ್ಥಾನಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಭಕ್ತರ ನಂಬಿಕೆಯ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದೆ ಎಂದರು.  

ಶ್ರೀ ದುಂಡಿ ಬಸವೇಶ್ವರ ದೇವಸ್ಥಾನದ ಟ್ರಸ್ಟ್‌ ಕಮಿಟಿಯವರು ನಿರಂತರ ಪರಿಶ್ರಮದಿಂದ ಹಾಗೂ ಹಲವು ದಾನಿಗಳ ಸಹಕಾರದೊಂದಿಗೆ ಸುಂದರವಾದ ದೇವಸ್ಥಾನ ನಿರ್ಮಿಸಿರುವುದು ಶ್ಲಾಘನೀಯ. ಇದರೊಂದಿಗೆ ಎರಡನೇ ವರ್ಷದ ಮಹಾರಥೋತ್ಸವ ನಡೆಯುತ್ತಿರುವುದು ಭಕ್ತರಲ್ಲಿ ಸಂತಸ ಮೂಡಿಸಿದೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕೆರೇವಾಡಿ ಮಠದ ಶ್ರೀ ಮಳೆ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಜಾತ್ರಾ ಮಹೋತ್ಸವದ ಕುರಿತು ಆಶೀರ್ವಚನ ನೀಡಿದರು.  

ಈ ಸಂದರ್ಭದಲ್ಲಿ ಮಾಜಿ ಸಂಸದ ಮಂಜುನಾಥ ಕುನ್ನೂರ, ಮಾಜಿ ಶಾಸಕ ರಾಮಣ್ಣ ಲಮಾಣಿ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ದೇವಸ್ಥಾನ ಟ್ರಸ್ಟ್‌ ಕಮಿಟಿಯ ಸರ್ವ ಸದಸ್ಯರು ಹಾಗೂ ಶ್ರೀ ದುಂಡಿ ಬಸವೇಶ್ವರ ದೇವರ ಸಾವಿರಾರು ಭಕ್ತರು ಭಾಗವಹಿಸಿದ್ದರು.