ಕುಷ್ಠರೋಗ ನಿರ್ಮೂಲನೆಗೆ ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಅತ್ಯಗತ್ಯ

ಕುಷ್ಠರೋಗ ನಿರ್ಮೂಲನೆಗೆ ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಅತ್ಯಗತ್ಯ Early detection is essential for leprosy eradication

ಕುಷ್ಠರೋಗ ನಿರ್ಮೂಲನೆಗೆ ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಅತ್ಯಗತ್ಯ 

ಹಾವೇರಿ16: ಕುಷ್ಠರೋಗ ನಿರ್ಮೂಲನೆಗಾಗಿ ಆರಂಭಿಕ ಹಂತದಲ್ಲಿ ರೋಗ ಪತ್ತೆಹಚ್ಚುವುದು ಅತ್ಯಗತ್ಯವಾಗಿದ್ದು,  ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣ ಪತ್ತೆ  ಹಚ್ಚುವ  ಅಭಿಯಾನ ಕಾರ್ಯಕ್ರಮ ಯಶಸ್ವಿಗೆ ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಲ್ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅಂತರ್ ಇಲಾಖೆ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಈ ಅಭಿಯಾನದ ಅಂಗವಾಗಿ ಮನೆ ಮನೆಗೆ ಭೇಟಿ ನೀಡುವ  ಸಮೀಕ್ಷೆ ತಂಡಕ್ಕೆ  ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದರು. 

ಜಾಗೃತಿ ಮೂಡಿಸಿ: ಅಭಿಯಾನದ ಕುರಿತು ಎಲ್ಲ  ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಸ ವಿಲೇವಾರಿ ವಾಹನಗಳ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು. ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಲ್ಲಿ ಅಗತ್ಯ ಪ್ರಚಾರ ಮಾಡಬೇಕು.  ಶಾಲೆಗಳಿಗೆ, ಆಶ್ರಮಶಾಲೆಗಳಿಗೆ ಹಾಗೂ ವಸತಿ ನಿಲಯಗಳ  ಮಕ್ಕಳ ಪರೀಕ್ಷೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಆರೋಗ್ಯ ಶಿಕ್ಷಣದ ಪ್ರಚಾರ ಸಾಮಗ್ರಿಗಳನ್ನು  ವಿತರಣೆ ಮೂಲಕ ಕುಷ್ಠರೋಗ ನಿರ್ಮೂಲನಾ ಆಂದೋಲನ ಕುರಿತು ಜಾಗೃತಿ ಮೂಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ  ಹಾಗೂ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಚನ್ನವೀರಯ್ಯ ವಿರಕ್ತಮಠ ಅವರು ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನವೆಂಬರ್ 3 ರಿಂದ ನ.19ರವರೆಗೆ ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣ ಪತ್ತೆ  ಹಚ್ಚುವ  ಅಭಿಯಾನ ಜರುಗಲಿದೆ. ವಿವಿಧ ಇಲಾಖೆಗಳ ಮೂಲಕ  ಈ ಅಭಿಯಾನದ ಕುರಿತು ಜಾಗೃತಿ ಮೂಡಿಸಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಪುನಿತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್‌.ಹಾವನೂರ, ತಾಲೂಕಾ ಆರೋಗ್ಯಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.