ಜಿಲ್ಲೆಯ ರೈತರನ್ನು ಸಾವಯವ ಕೃಷಿಗೆ ಪ್ರೋತ್ಸಾಹಿಸಿ: ಸಂಸದ ಕೆ.ರಾಜಶೇಖರ ಹಿಟ್ನಾಳ

ಜಿಲ್ಲೆಯ ರೈತರನ್ನು ಸಾವಯವ ಕೃಷಿಗೆ ಪ್ರೋತ್ಸಾಹಿಸಿ: ಸಂಸದ ಕೆ.ರಾಜಶೇಖರ ಹಿಟ್ನಾಳ Encourage farmers in the district to adopt organic farming: MP K. Rajashekar Hitnal

           ಕೊಪ್ಪಳ  29 : ಜಿಲ್ಲೆಯ ತೋಟಗಾರಿಕೆ ಬೆಳೆಗಳಾದ ಮಾವು, ಪೇರಲ ಗಳಿಗೆ ಅಂತರಾಷ್ಟ್ರೀಯ ಮಟ್ಟದ ಬೇಡಿಕೆ ಇದೆ. ಅದರಂತೆ ಸಾವಯವ ಪದ್ಧತಿಯಲ್ಲಿ ಬೆಳೆದ ಬೆಳೆಗಳಿಗೆ ಜಾಗತಿಕ ಬೇಡಿಕೆ ಇರುತ್ತದೆ. ಸಾವಯವ ಬೆಳೆಗಳು ಉತ್ಪನ್ನದ ಮೌಲ್ಯವನ್ನು ವರ್ಧಿಸುತ್ತವೆ. ಆದ್ದರಿಂದ ಉತ್ತಮ ಆದಾಯಕ್ಕಾಗಿ ಜಿಲ್ಲೆಯ ರೈತರನ್ನು ಸಾವಯವ ಕೃಷಿ ಪದ್ಧತಿಗೆ ಪ್ರೋತ್ಸಾಹಿಸಿ, ಅಗತ್ಯ ಬೆಂಬಲ ನೀಡಿ ಎಂದು ಕೊಪ್ಪಳ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಅಧ್ಯಕ್ಷರಾದ ಕೆ.ರಾಜಶೇಖರ ಹಿಟ್ನಾಳ ಅವರು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ಶನಿವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್‌.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ)ಯ 2ನೇ ತ್ರೈಮಾಸಿಕದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾದ ಬಸವರಾಜ ಎಂಬ ರೈತರೊಬ್ಬರು ಸಾವಯವ ಪದ್ಧತಿಯಲ್ಲಿ ನುಗ್ಗೆ ಬೆಳೆ ಬೆಳೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಿಸಿದ್ದಾರೆ ಎಂಬುದು ಹೆಮ್ಮೆಯ ವಿಷಯ. ಅದರಂತೆ ಜಿಲ್ಲೆಯ ಪ್ರತಿ ರೈತರೂ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಕೊಳ್ಳಬೇಕು. ಇದರಿಂದ ರೈತರಿಗೆ ಉತ್ತಮ ಆದಾಯ ದೊರೆಯುವುದಲ್ಲದೆ, ಸಾವಯವ ಉತ್ಪನ್ನಗಳನ್ನು ಬಳಸುವುದರಿಂದ ಗ್ರಾಹಕರ ಆರೋಗ್ಯವೂ ಉತ್ತಮವಾಗಿರುತ್ತದೆ. ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಾವಯವ ಕೃಷಿ ಉತ್ಪನ್ನಗಳು ಪೂರಕವಾಗಿರುತ್ತವೆ. ಆದ್ದರಿಂದ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ರೈತರಿಗೆ ಪ್ರೋತ್ಸಾಹಿಸಿ. ಸಾವಯವ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿರುವ ಬೇಡಿಕೆ, ಹೆಚ್ಚಿನ ಆದಾಯ, ಗುಣಮಟ್ಟ ಕಾಯ್ದುಕೊಳ್ಳುವಿಕೆ ಕುರಿತು ರೈತರಿಗೆ ತರಬೇತಿ ನೀಡಿ ಎಂದು ಸಂಸದರು ಅಧಿಕಾರಿಗಳಿಗೆ ಸೂಚಿಸಿದರು. 

ಪಿಎಂಎಫ್‌ಎಂಇ ಕಾರ್ಯಕ್ರಮದಡಿ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ, ಸಣ್ಣ ಸಂಸ್ಕರಣಾ ಉದ್ಯಮಗಳ ಲಾಭದಾಯಕತೆ ಬಗ್ಗೆ ರೈತರು, ಯುವ ಉದ್ಯಮಿಗಳಿಗೆ ಮತ್ತು ಮಹಿಳಾ ಸ್ವ ಸಹಾಯ ಗುಂಪುಗಳ ಸದಸ್ಯರಿಗೆ ಇನ್ನೂ ಹೆಚ್ಚಿನ ತರಬೇತಿ ನೀಡಿ. ಸ್ಥಳೀಯ ಮಟ್ಟದಲ್ಲಿ ಈ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ. ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮೂಲಕ ತರಬೇತಿ ಆಯೋಜಿಸಿ ಆಸಕ್ತ ಉದ್ಯಮಿಗಳಿಗೆ ಅಗತ್ಯ ಸಹಕಾರ ನೀಡಬೇಕು. ಅಂತಹ ಉದ್ಯಮಗಳಿಗೆ ಪ್ರತಿ ಆರು ತಿಂಗಳಿಗೆ ಬ್ಯಾಂಕ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಯೋಜನೆಯ ಸಮರ​‍್ಕ ಅನುಷ್ಠಾನದ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಈ ಮೂಲಕ ಉದ್ಯೋಗ ಸೃಷ್ಟಿಗೂ ಆದ್ಯತೆ ನೀಡಬೇಕು. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಹಿಂಗಾರು ಬೆಳೆಗಳನ್ನು ವಿಮೆಗೆ ನೋಂದಾಯಿಸಲು ಇನ್ನಷ್ಟು ಪ್ರಚಾರ ನೀಡಿ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗೆ ಸಂಸದರು ಸೂಚನೆ ನೀಡಿದರು. 

ಬೀದಿ ನಾಯಿಗಳ ನಿಯಂತ್ರಣ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಂಡು, ಬೀದಿ ನಾಯಿಗಳಿಗೆ ಅಗತ್ಯ ಲಸಿಕೆಗಳನ್ನು ಹಾಕಿಸಬೇಕು. ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸಬೇಕು. ಬೀದಿಗಳಲ್ಲಿ ಮಕ್ಕಳು, ವಯಸ್ಕರು ಸೇರಿದಂತೆ ಯಾರಿಗೂ ಬೀದಿ ನಾಯಿಗಳಿಂದ ತೊಂದರೆ ಉಂಟಾಗಬಾರದು. ಜಿಲ್ಲೆಯಲ್ಲಿ 22 ಸಾವಿರ ಬೀದಿ ನಾಯಿಗಳಿರುವ ಕುರಿತು ಸಮೀಕ್ಷೆಯಲ್ಲಿ ದತ್ತಾಂಶ ದೊರೆತಿದೆ. ಅವೆಲ್ಲ ಬೀದಿ ನಾಯಿಗಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಬೀದಿನಾಯಿ ಕಡಿತಕ್ಕೆ ಒಳಗಾದ ಯಾರೇ ಬಂದರೂ ತಕ್ಷಣವೇ ಎಲ್ಲ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಬೇಕು. ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಸರ್ವೋಚ್ಛ ನ್ಯಾಯಾಲಯ ನೀಡಿದ ಆದೇಶವನ್ನು ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಪಾಲಿಸಬೇಕು. ಅದರಂತೆ ಹಾವು ಕಡಿತ ಪ್ರಕರಣಗಳಲ್ಲಿಯೂ ಸಹ ಆದ್ಯತೆ ಮೇರೆಗೆ ಹಾವು ಕಡಿತಕ್ಕೊಳಗಾದವರಿಗೆ ತುರ್ತು ಚಿಕಿತ್ಸೆ ನೀಡಬೇಕು. ನಾಯಿ ಕಡಿತ ಹಾಗೂ ಹಾವು ಕಡಿತಕ್ಕೆ ಸಂಬಂಧಿಸಿದ ಓಷಧಿಗಳು ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಿರಬೇಕು. ಇಂತಹ ಪ್ರಕರಣಗಳಲ್ಲಿ ಯಾವುದೇ ಸಾವುಗಳು ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸಂಸದರು ತಿಳಿಸಿದರು. 

ಆರ್‌ಒ ಪ್ಲಾಂಟ್‌ಗಳ ಮೂಲಕ ನೀರು ಪೂರೈಕೆ ಮಾಡುವ ಪ್ರತಿ ಗ್ರಾಮ ಪಂಚಾಯತಿಯೂ ನೀರು ಪೂರೈಕೆಗೂ ಮುನ್ನ ಕಡ್ಡಾಯವಾಗಿ ನೀರಿನ ಪರೀಕ್ಷೆ ಮಾಡಬೇಕು. ಸುರಕ್ಷಿತವೆನಿಸಿದರೆ ಮಾತ್ರ ಕುಡಿಯುವ ನೀರು ಪೂರೈಸಬೇಕು. ಕಾಲಕಾಲಕ್ಕೆ ಆರ್‌ಒ ಪ್ಲಾಂಟ್‌ಗಳ ನಿರ್ವಹಣೆ, ದುರಸ್ಥಿ, ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಜೆಜೆಎಂ ಅಡಿ ಜಿಲ್ಲೆಯ ಬಹುತೇಕ ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ. ಆದರೆ ಇತ್ತೀಚೆಗೆ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ 2ನೇ ಬೆಳೆಗೆ ನೀರು ಪೂರೈಕೆ ಮಾಡದ ಕಾರಣ ಎಡದಂಡೆ ಕಾಲುವೆಗಳಿಗೆ ನೀರು ಹರಿಸುವುದಿಲ್ಲ ಎಂದು ನಿರ್ಧರಿಸಲಾಗಿದ್ದು, ಇದರಿಂದ ಜೆಜೆಎಂ ಅಡಿ ನೀರು ಸರಬರಾಜಾಗುವ ಗ್ರಾಮಗಳಿಗೆ ಬೇಸಿಗೆಯಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಅಗತ್ಯ ಪ್ರಮಾಣದ ನೀರು ಸಂಗ್ರಹಣೆಗೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. 

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರಿಗೆ ಸೂಕ್ತ ತರಬೇತಿ ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಅಧ್ಯಯನ ಸಾಮಗ್ರಿಗಳನ್ನು ಒದಗಿಸಬೇಕು. ಅಂಗನವಾಡಿಗಳಲ್ಲಿ ಅವಧಿ ಮುಗಿದ ಆಹಾರ ಸಾಮಗ್ರಿ ವಿತರಿಸುವ ಕುರಿತು ದೂರುಗಳು ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಿ, ಗುಣಮಟ್ಟದ ಆಹಾರ ಸಾಮಗ್ರಿ ಒದಗಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಜಿಲ್ಲೆಯಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಸಂಸ್ಥೆಗಳ ಆವರಣದಲ್ಲಿರುವ  ನಾಯಿಗಳಿಗೆ ಹಾಗೂ ಬೀದಿ ನಾಯಿಗಳಿಗೆ  ಲಸಿಕೆ ಹಾಕುವ ಕಾರ್ಯ ಚಾಲ್ತಿಯಲ್ಲಿದೆ. ಸಂತಾನ ಹರಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗುತ್ತಿದೆ. ಎಲ್ಲ ಆಸ್ಪತ್ರೆಗಳಲ್ಲಿ ನಾಯಿ ಕಡಿತದ ಓಷಧಿಯನ್ನು ದಾಸ್ತಾನೀಕರಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಈ ಬಗ್ಗೆ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು. 

ಸಭೆಯಲ್ಲಿ ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯರಾದ ಅಂಬಣ್ಣ ನಾಯಕ್, ಸರಸ್ವತಿ ಕೃಷ್ಣಪ್ಪ ಇಟ್ಟಂಗಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಟಿ.ಎಸ್‌., ಜಿ.ಪಂ. ಯೋಜನಾ ನಿರ್ದೇಶಕ ಮಂಜುನಾಥ ಡಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಿಂಗರಾಜು ಟಿ., ತೋಟಗಾರಿಕೆಯ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.