ಪ್ರತಿ ಪ್ರಾಣಿಗೂ ಬದುಕುವ ಹಕ್ಕಿದೆ: ಡಾ.ಮಾತಾ ಬಿ.ಮಂಜಮ್ಮ ಜೋಗತಿ

ಬಳ್ಳಾರಿ 12:ಸೃಷ್ಟಿಯಲ್ಲಿ ಯಾರು ಏನಾದರೂ ಆಗಿ ಹುಟ್ಟಬಹುದು. ಮನುಷ್ಯ ಸೇರಿದಂತೆ ಪ್ರತಿಯೊಂದು ಪ್ರಾಣಿಗೂ ಬದುಕುವ ಹಕ್ಕಿದೆ. ಆ ಹಕ್ಕನ್ನು ಯಾರು ಕಸಿದುಕೊಳ್ಳಬೇಡಿ. ಗಂಡು, ಹೆಣ್ಣು, ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನವಾದ ಹಕ್ಕಿದೆ ಎಂದು ಪದ್ಮಶ್ರೀ ಪುರಸ್ಕೃತ ಕಲಾವಿದೆ ಡಾ.ಮಾತಾ ಬಿ.ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು.

ಸಮಾಜ ಕಲ್ಯಾಣ ಇಲಾಖೆ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದಲ್ಲಿ ಗುರುವಾರ ಏರಿ​‍್ಡಸಿದ್ದ ಬಳ್ಳಾರಿ ಜಿಲ್ಲಾ ಕ್ರೈಸ್ ವಸತಿ ಶಾಲೆಗಳ ಶಿಕ್ಷಕರ ದಿನಾಚರಣೆ ಹಾಗೂ ಸ್ಮರಣ ಸಂಚಿಕೆ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಸಮಾಜದಲ್ಲಿ ನಾವು ಹೀಗೆ ಆಗಬೇಕು. ಹೀಗೆ ಹುಟ್ಟಬೇಕು ಎಂದು ಯಾರಿಗೂ ಗೊತ್ತಾಗುವುದಿಲ್ಲ. ನಾನು ಹೆಣ್ಣಾಗಿ ಪರಿವರ್ತನೆಯಾಗಿ ಸಮಾಜದಲ್ಲಿ ಸಾಕಷ್ಟು ನೋವು, ಅವಮಾನ ಅನುಭವಿಸಿದ್ದೇನೆ ಎಂದು ಬದುಕಿನ ಸತ್ಯ ಬಿಚ್ಚಿಟ್ಟರು.ಗಂಡಾಗಲಿ, ಹೆಣ್ಣಾಗಲಿ, ಯಾರೇ ಆಗಲಿ ಪ್ರತಿಯೊಬ್ಬರಿಗೂ ಒಂದು ಬದುಕಿದೆ. ಅದನ್ನು ಹುಡುಕಿಕೊಂಡು ಧೈರ್ಯವಾಗಿ ಬದುಕು ಕಟ್ಟಿಕೊಳ್ಳಬೇಕಿದೆ. ಪೋಷಕರು ಆಸೆ, ಆಕಾಂಕ್ಷೆ ಬದಿಗೊತ್ತಿ ಮಕ್ಕಳಿಗಾಗಿ ಜೀವನ ಸವೆಸುತ್ತಾರೆ. ಅದಕ್ಕೆ ಮೋಸ ಮಾಡಬಾರದು ಎಂದು ಹೇಳಿದರು.ಕುಟುಂಬದಿಂದ ತಿರಸ್ಕೃತ ಆದ ಮೇಲೆ ಗುರುಗಳ ಆಶೀರ್ವಾದದೊಂದಿಗೆ ಹಳ್ಳಿಯಿಂದ ದೆಹಲಿವರೆಗೆ ಹೋಗಿ ಪದ್ಮಶ್ರೀ ಪ್ರಶಸ್ತಿ ಪಡೆದ ಹಾದಿ ಬಗ್ಗೆ ವಿವರಿಸಿದರು.ನಮ್ಮ ಸುತ್ತಮುತ್ತ ಯಾರಾದರೂ ಪರಿವರ್ತನೆಯಾದರೆ ಅದನ್ನು ಅಪಹಾಸ್ಯ ಮಾಡಬೇಡಿ. ಅವಮಾನಿಸಬೇಡಿ, ಬದಕಲು ಅವಕಾಶ ಮಾಡಿಕೊಡಿ. ನಿಮ್ಮ ಕುಟುಂಬದಲ್ಲಿ ನನ್ನಂತೆ ಯಾವುದಾದರೂ ಮಗು ಹುಟ್ಟಿದರೆ ಹಣ, ಆಸ್ತಿ ಮಾಡಬೇಡಿ. ವಿದ್ಯಾಭ್ಯಾಸ ಕೊಡಿ. ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ. ಮುಂದೆ ಕೀರ್ತಿ ಹೆಚ್ಚಿಸುವ ಕೆಲಸ ಮಾಡುತ್ತಾರೆ ಎಂದರು.ನಾವು ಎಷ್ಟು ಓದಿದ್ದೇವೆ ಎನ್ನುವುದು ಮುಖ್ಯವಲ್ಲ. ನಾವು ಮಾಡುವ ಕೆಲಸ, ಅದರಲ್ಲಿ ನಾವು ಪಾಲ್ಗೊಳ್ಳುವಿಕೆ ಮುಖ್ಯವಾಗುತ್ತದೆ. ಸಮಯಕ್ಕೆ ಬೆಲೆ ಕೊಡಿ. ಮುಂದೊಂದು ದಿನ ಅದೇ ಸಮಯ ನಿಮಗೆ ದೊಡ್ಡ ಬೆಲೆ ಕೊಡುತ್ತದೆ ಎಂದು ಕಿವಿಮಾತು ಹೇಳಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಅಂದಿನ ಶಿಕ್ಷಣಕ್ಕೂ ಇಂದಿನ ಶಿಕ್ಷಣಕ್ಕೂ ತುಂಬಾ ವ್ಯತ್ಯಾಸವಿದೆ. ಮುಂದೆ ಉನ್ನತ ಶಿಕ್ಷಣದ ಜತೆಗೆ ಕೌಶಲ್ಯ ಆಧಾರಿತ ಶಿಕ್ಷಣಬೇಕಿದೆ. ಹಾಗಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಅಂದಾಗ ಮಕ್ಕಳು ಗುರಿ ಹೊಂದುತ್ತಾರೆ. ಗುರಿ ಸರಿಯಾಗಿದ್ದರೆ ಸಾಧನೆ ಮಾಡಬಹುದು ಎಂಬುದಕ್ಕೆ ಮಂಜಮ್ಮ ಜೋಗತಿ ಉದಾಹರಣೆಎಂದುತಿಳಿಸಿದರು.ವಸತಿ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳಿದ್ದು, ಶಿಕ್ಷಕರ ವ್ಯಕ್ತಿತ್ವವು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ವಸತಿ ಶಾಲೆಗಳಲ್ಲಿ ಅಭ್ಯಸಿಸಿದ ಮಕ್ಕಳು ಎಲ್ಲಾ ರಂಗಗಳಲ್ಲಿ ಬೆಳೆದಿದ್ದಾರೆ. ಆ ವಿಧದಲ್ಲಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಸಂಕ್ಷಿಪ್ತ ಮಾಹಿತಿಯುಳ್ಳ ಸ್ಮರಣ ಸಂಚಿಕೆ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು.ಇದಕ್ಕೂ ಮುನ್ನ ಸಂಡೂರು ತಾಲ್ಲೂಕಿನ ಮೆಟ್ರಿಕಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಸೊಬಗಿನ ಸ್ವಾಗತ ನೃತ್ಯ ನಡೆಸಿಕೊಟ್ಟರು.ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗದ ನಿರ್ದೇಶಕ ಡಾ.ಅಮರೇಶ ಯತಗಲ್ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಳಿಕ 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಎಎಸ್ಪಿ ನವೀನ್‌ಕುಮಾರ್, ರಾಜ್ಯ ಕ್ರೈಸ್ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಗದೀಶ ಕಣಕಾಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ದಿವಾಕರ, ಜಿಲ್ಲಾ ಸಮನ್ವಯಾಧಿಕಾರಿ ಹಾಗೂ ಬಂಡ್ರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪ್ರಸನ್ನ ಕುಮಾರ್‌.ಟಿ.ವೈ ಸೇರಿದಂತೆ ಜಿಲ್ಲಾ ಕ್ರೈಸ್ ವಸತಿ ಶಾಲೆಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಅನೇಕರು ಉಪಸ್ಥಿತರಿದ್ದರು.