ಲಕ್ಷ್ಮೇಶ್ವರದಲ್ಲಿ ರೈತರ ರಸ್ತೆ ತಡೆ ಪ್ರತಿಭಟನೆ

ಲಕ್ಷ್ಮೇಶ್ವರದಲ್ಲಿ ರೈತರ ರಸ್ತೆ ತಡೆ ಪ್ರತಿಭಟನೆ  Farmers' road-blockade protest in Lakshmeshwar


ಲಕ್ಷ್ಮೇಶ್ವರ  29: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ, ರೈತರಿಗೆ ತುರ್ತು ಪರಿಹಾರ ನೀಡುವಂತೆ ಒತ್ತಾಯಿಸಿ ಸಮಗ್ರ ರೈತ ಹೋರಾಟ ಒಕ್ಕೂಟದ ವತಿಯಿಂದ ಪಟ್ಟಣದ ಶಿಗ್ಲಿ ನಾಕಾದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು.  

ಮುಂಗಾರು ಮಳೆಯ ಕೊರತೆಯಿಂದ ಮೂರು ತಾಲೂಕುಗಳಾದ್ಯಂತ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜ, ಗೊಬ್ಬರ, ಉಳುಮೆ ಹಾಗೂ ಕೂಲಿಗಾಗಿ ಮಾಡಿರುವ ಬಂಡವಾಳ ನಷ್ಟವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ಹಲವು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದ್ದರೂ ಈ ಮೂರು ತಾಲೂಕುಗಳನ್ನು ಪಟ್ಟಿಗೆ ಸೇರಿಸದಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.  

ಪ್ರತಿಭಟನಾಕಾರರು, ಮೂರು ತಾಲೂಕುಗಳನ್ನು ಕೂಡಲೇ ಬರಪೀಡಿತವೆಂದು ಘೋಷಿಸಿ, ಜಂಟಿ ಬೆಳೆ ನಷ್ಟ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು. ಪ್ರತಿ ಎಕರೆಗೆ ಕನಿಷ್ಠ ?50 ಸಾವಿರ ಪರಿಹಾರ, ಸಂಕಷ್ಟದಲ್ಲಿರುವ ರೈತರ ?1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ, ಬೆಳೆ ವಿಮೆ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.  

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವುದು, ಅಗತ್ಯವಿರುವ ಕಡೆ ಬೋರ್‌ವೆಲ್ ಹಾಗೂ ಪರ್ಯಾಯ ಜಲಮೂಲ ಕಲ್ಪಿಸುವುದು, ಜಾನುವಾರುಗಳಿಗಾಗಿ ಮೇವು ಬ್ಯಾಂಕ್ ಆರಂಭಿಸುವುದು, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದ ದಿನಗಳನ್ನು ಹೆಚ್ಚಿಸಿ ಕೂಲಿ ಸಕಾಲದಲ್ಲಿ ಪಾವತಿಸುವುದು ಸೇರಿದಂತೆ ಒಟ್ಟು ಹತ್ತು ಬೇಡಿಕೆಗಳನ್ನು ಮುಂದಿಟ್ಟರು.  

ನಂತರ ಉಪ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಮಗ್ರ ರೈತ ಹೋರಾಟ ಒಕ್ಕೂಟದ ಮುಖಂಡರು, ವಿವಿಧ ರಾಜಕೀಯ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.