ಕೈ’ ಸರ್ಕಾರದಿಂದ ರೈತರ ಆತ್ಮಹತ್ಯಾ ಭಾಗ್ಯ - ಎಸ್‌.ಗುರುಲಿಂಗನಗೌಡ ಆರೋಪ

ಕೈ’ ಸರ್ಕಾರದಿಂದ ರೈತರ ಆತ್ಮಹತ್ಯಾ ಭಾಗ್ಯ - ಎಸ್‌.ಗುರುಲಿಂಗನಗೌಡ ಆರೋಪ Farmers' suicides are being caused by the government - S. Gurulinganagowda alleges

ಬಳ್ಳಾರಿ: ಕಳೆದ ಎರಡೂವರೆ ವರ್ಷದಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ರೈತರ ಹಿತಾಸಕ್ತಿ ಕಾಪಾಡದೇ ರಾಜ್ಯದ ಕೃಷಿಕರಿಗೆ ಆತ್ಮಹತ್ಯಾ ಭಾಗ್ಯ ಕರುಣಿಸಿದೆ ಎಂದು ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಘಟಕದ ರಾಜ್ಯ ಉಪಾಧ್ಯಕ್ಷ ಎಸ್‌.ಗುರುಲಿಂಗನಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ ಎರಡು ವರ್ಷದಿಂದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿಜೆಪಿ ಸರ್ಕಾರ ನೀಡುತ್ತಿದ್ದ "ರೈತ ವಿದ್ಯಾನಿಧಿ" ಯನ್ನು ಈ ಸರ್ಕಾರ ನಿಲ್ಲಿಸಿದೆ. 52 ಲಕ್ಷ ರೈತರಿಗೆ ಜಿಜೆಪಿ ಸರ್ಕಾರ ನೀಡುತ್ತಿದ್ದ 4000 ರೂಪಾಯಿ ‘ಕಿಸಾನ್ ಸಮ್ಮಾನ್ ನಿಧಿ’ಯನ್ನು ಸ್ಥಗಿತಗೊಳಿಸಿದೆ. ರೈತರ ಕೃಷಿ ಪಂಪ್‌ಸೆಟ್‌ಗೆ ಟ್ರಾನ್ಸ್ಫಾರ್ಮರ್ ಆಳವಡಿಸಲು ಬಿಜೆಪಿ ಸರ್ಕಾರದಲ್ಲಿ 25000 ರೂ ನಿಗದಿಪಡಿಸಿತ್ತು. ಇಂದಿನ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಒಂದು ಪಂಪ್ ಸೆಟ್‌ಗೆ ಟ್ರಾನ್ಸ್ಫಾರ್ಮರ್ ಆಳವಡಿಸಲು 3 ಲಕ್ಷ ರೂ ನೀಡಬೇಕಾಗಿದೆ.  

ಕರ್ನಾಟಕದಲ್ಲಿ ಬಿತ್ತನೆ ಬೀಜದ ಮೇಲಿನ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ ಶೇ.20 ರಷ್ಟು ಏರಿಕೆ ಮಾಡಿರುವ ಈ ಸರ್ಕಾರದಿಂದ ರೈತರಿಗೆ ನಯಾ ಪೈಸೆ ಉಪಯೋಗವಿಲ್ಲವೆಂದು ಅವರು ಕಿಡಿ ಕಾರಿದ್ದಾರೆ. ಭೂ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರಿಗೆ 10000 ರೂ. ನೀಡುವ ಪ್ರೋತ್ಸಾಹ ಧನವನ್ನು ಈ ಸರ್ಕಾರ ನಿಲ್ಲಿಸಿದೆ. ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಹಾವೇರಿ ಮತ್ತು ರಾಣಿಬೆನ್ನೂರಿನಲ್ಲಿ ರಸಗೊಬ್ಬರ ಖರೀದಿಸಲು ಮುಂದಾಗಿದ್ದ ರೈತರ ಮೇಲೆ ಪೊಲೀಸರು ಲಾರಿ ಚಾರ್ಜ್‌ ಮಾಡಿರುವುದನ್ನು  ತೀವ್ರವಾಗಿ ಖಂಡಿಸಿದ ಎಸ್‌.ಗುರುಲಿಂಗನಗೌಡ ಅವರು, ಕರ್ನಾಟಕ ರಾಜ್ಯದಲ್ಲಿ ರಸಗೊಬ್ಬರದ ಅವೈಜ್ಞಾನಿಕವಾಗಿ ದಾಸ್ತಾನು ಶೇಖರಣೆ ಮಾಡಿರುವ ಪರಿಣಾಮ ರಾಜ್ಯದಾದ್ಯಂತ ರಸಗೊಬ್ಬರದ ಅಭಾವ ಉಂಟಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ನೀಡಿದ 3454 ಕೋಟಿ ರೂ. ಅನುದಾನದಲ್ಲಿ ನಯಾಪೈಸೆಯನ್ನು ರಾಜ್ಯದ ರೈತರಿಗೆ ತಲುಪಿಸದೇ ಈ ಸರ್ಕಾರ ಲೂಟಿ ಹೊಡೆದಿದೆ.  

ಇದರಿಂದಾಗಿ ಕಳೆದ 2 ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 3400ಕ್ಕಿಂತ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಸಚಿವರು ಮತ್ತು ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಕರ್ನಾಟಕ ರಾಜ್ಯಕ್ಕೆ ಯೂರಿಯಾ ರಸಗೊಬ್ಬರವು 6.30 ಲಕ್ಷ ಮೆಟ್ರಿಕ್ ಟನ್ ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಅವಶ್ಯಕತೆಗಿಂತ ಹೆಚ್ಚಿಗೆ ಕರ್ನಾಟಕಕ್ಕೆ ನೀಡಿದೆ. ಉಳಿದ 2.43 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರಾಜ್ಯದ ರೈತರಿಗೆ ನೀಡದೇ ಕಾಳಸಂತೆಯಲ್ಲಿ ಕಾಂಗ್ರೆಸ್ ಸರ್ಕಾರ ಮಾರಾಟ ಮಾಡುತ್ತಿದೆಯೇ? ಎಂದು ಅನುಮಾನ ವ್ಯಕ್ತಪಡಿಸಿರುವ ಅವರು, ಈ ಕುರಿತಂತೆ ರಾಜ್ಯದಾದ್ಯಂತ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪತ್ರಿಭಟನೆಯನ್ನು ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ರೈತ ವಿರೋಧಿ ನೀತಿಗಳನ್ನು ಕೈಬಿಟ್ಟು ರೈತರಿಗೆ ಅನುಕೂಲವಾಗುವಂತಹ ನಿಯಮಗಳನ್ನು ಅಳವಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಕ್ರಮಗಳನ್ನು ಖಂಡಿಸಿದ್ದಾರೆ.