ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸೆ ಅಗತ್ಯ: ಭಾಸ್ಕರ್ ರಾವ್

ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸೆ ಅಗತ್ಯ: ಭಾಸ್ಕರ್ ರಾವ್ First aid is necessary to save lives: Bhaskar Rao

ಬಳ್ಳಾರಿ,ಅ.30: ಜೀವ ರಕ್ಷಣೆಗೆ ಅಗತ್ಯವಾದ ಪ್ರಥಮ ಚಿಕಿತ್ಸಾ ಕೌಶಲ್ಯವನ್ನು ಯುವ ರೆಡ್ ಕ್ರಾಸ್‌ನ ಮೂಲಕ ಪ್ರತಿಯೊಬ್ಬರು ಪಡೆದುಕೊಂಡು ಅಮೂಲ್ಯವಾದ ಜೀವ ರಕ್ಷಣೆ ಮಾಡಬೇಕು ಎಂದು ಭಾರತೀಯ ಯುವ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆ ಉಪಾಧ್ಯಕ್ಷ ಭಾಸ್ಕರ್ ರಾವ್ ಅವರು ಹೇಳಿದರು. 

ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಅಂಬೇಡ್ಕರ್ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. 

ಅಂತರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯ ಸೇವೆಗೆ 4 ಬಾರಿ ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರ ಲಭಿಸಿದೆ. ವಿಶ್ವದ 190 ರಾಷ್ಟ್ರಗಳಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. ಮಾನವೀಯ ಮೌಲ್ಯಗಳನ್ನು ವಿಶ್ವಕ್ಕೆ ತಿಳಿಸುವುದು ರೆಡ್ ಕ್ರಾಸ್‌ನ ಮೂಲ ಉದ್ದೇಶವಾಗಿದೆ ಎಂದರು. 

ವಿಷಮ ಪರಿಸ್ಥಿತಿಗಳಲ್ಲಿ ಧೈರ್ಯ ಮತ್ತು ಕ್ಷಿಪ್ರ ನಿರ್ಧಾರ ತೆಗೆದುಕೊಳ್ಳಲು ರೆಡ್‌ಕ್ರಾಸ್ ತರಬೇತಿ ಪಡೆಯುವುದರಿಂದ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಸಮಾಜಮುಖಿ ಸೇವೆಗಳತ್ತ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ವಿವಿಯ ನಿರ್ವಹಣಾಶಾಸ್ತ್ರ ನಿಕಾಯದ ಡೀನರು ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸದ್ಯೋಜಾತಪ್ಪ.ಎಸ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆ ಬಿಟ್ಟು ದೃಢವಿಶ್ವಾಸದಿಂದ ಕಲಿಕೆ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರಮಬದ್ಧ ಜೀವನಶೈಲಿ ತಮ್ಮದಾಗಿಸಿಕೊಂಡು ರೆಡ್‌ಕ್ರಾಸ್ ಮಾದರಿಯ ಮೌಲ್ಯಯುತವಾದ ಸೇವೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. 

ರೆಡ್‌ಕ್ರಾಸ್ ಸಂಸ್ಥೆಯ ಬಳ್ಳಾರಿ ಶಾಖೆಯ ಕಾರ್ಯದರ್ಶಿ ಎಂ.ಎ.ಶಕೀಬ್ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಇದೇ ಸಂದರ್ಭದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಬಳ್ಳಾರಿಗೆ ಆಗಮಿಸಿ 11 ದಿನಗಳ ರೆಡ್‌ಕ್ರಾಸ್ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. 

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಉಮಾಕಾಂತ್, ವಿವಿಯ ಯುವ ರೆಡ್‌ಕ್ರಾಸ್ ಸಮನ್ವಯಾಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಎನ್‌.ಎಲ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ತುರ್ತು ಸಂದರ್ಭಗಳಲ್ಲಿ ನಿರ್ವಹಿಸಬೇಕಾದ ಪ್ರಥಮ ಚಿಕಿತ್ಸಾ ತಂತ್ರಗಳನ್ನು ತರಬೇತುದಾರರು ಪ್ರಾತ್ಯಕ್ಷಿಕವಾಗಿ ವಿವರಿಸಿದರು. 

ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಶಶಿಧರ್ ಕೆಲ್ಲೂರ್ ನಿರೂಪಿಸಿ ವಂದಿಸಿದರು.