ಕಣ್ಣಿನ ಉಚಿತ ತಪಾಸಣೆ-ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ

ಕಣ್ಣಿನ ಉಚಿತ ತಪಾಸಣೆ-ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ  Free eye check-up and surgery camp a success

ತಾಳಿಕೋಟಿ  28: ತಾಲೂಕಿನ ಬಂಡೆಪ್ಪನಹಳ್ಳಿ ಗ್ರಾಮದ ಮಹಾ ತಪಸ್ವಿ ಬಂಡೆಪ್ಪಸ್ವಾಮಿ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ, ಅನುಗ್ರಹ ವಿಷನ್ ಫೌಂಡೇಶನ್ ಟ್ರಸ್ಟ್‌ ಮತ್ತು ಜಿಲ್ಲಾ ಅಂಧತ್ವ ನಿವಾರಣೆ ಸಂಸ್ಥೆ ವಿಜಯಪುರ ಹಾಗೂ ಜಾತ್ರಾ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿಯಾಯಿತು. ಮಂಗಳವಾರ ದೇವಸ್ಥಾನದ ಆವರಣದಲ್ಲಿ ಬೆಳಿಗ್ಗೆ 10 ಘಂಟೆಯಿಂದ ಆರಂಭವಾದ ಈ ಉಚಿತ ಚಿಕಿತ್ಸಾ ಶಿಬಿರದಲ್ಲಿ ಬಂಡೆಪ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸುಮಾರು 135ಕ್ಕಿಂತಲೂ ಹೆಚ್ಚು ಜನರು ತಮ್ಮ ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಂಡರು.

ಇದರಲ್ಲಿ 30 ಜನರನ್ನು ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಪ್ರತಿಯೊಬ್ಬ ಅರ್ಹ ರೋಗಿಯನ್ನು ಅನುಗ್ರಹ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಯನ್ನು ಮಾಡಿ ಲೆನ್ಸ್‌ ಅಳವಡಿಸಲಾಗುವುದೆಂದು ಆಸ್ಪತ್ರೆಯ ಮುಖ್ಯಸ್ಥರು ಪತ್ರಿಕೆಗೆ ತಿಳಿಸಿದ್ದಾರೆ. ಶಿಬಿರದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ.ಪ್ರವೀಣಕುಮಾರ ಹಿರೇಮಠ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ಸಿಬ್ಬಂದಿಗಳು ಕಾರ್ಯನಿರ್ವಹಿಸಿದರು. ಈ ಸಮಯದಲ್ಲಿ ಜಾತ್ರಾ ಸಮಿತಿಯ ಪದಾಧಿಕಾರಿಗಳು ಗ್ರಾಮದ ಗಣ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದರು.