ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ಆಯೋಜನೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ಆಯೋಜನೆ: ಜಿಲ್ಲಾಧಿಕಾರಿ ದಿವ್ಯ ಪ್ರಭು Free skill training organized under Yuvanidhi Plus scheme: Deputy Commissioner Divya Prabhu

            ಧಾರವಾಡ  25: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯಡಿ ಅನೇಕ ನಿರುದ್ಯೋಗ ಯುವಕ, ಯುವತಿಯರು ತರಬೇತಿಯನ್ನು ಪಡೆಯುತ್ತಿದ್ದು, ರಾಜ್ಯ ಸರ್ಕಾರವು ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ಆಯೋಜಿಸಲು ನಿರ್ಧರಿಸಿದ್ದು, ಜಿಲ್ಲೆಯಲ್ಲಿ ಕೌಶಲ್ಯ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.  

ಅವರು ನಿನ್ನೆ (ನ.24) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯುವನಿಧಿ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ಕುರಿತು ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ಧಾರವಾಡ ಜಿಲ್ಲೆಯಲ್ಲಿ 7,920 ಯುವನಿಧಿ ಫಲಾನುಭವಿಗಳಿದ್ದು, ಸದರಿ ಫಲಾನುಭವಿಗಳಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಐಟಿಐ, ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್ ತರಬೇತಿ ಸಂಸ್ಥೆಗಳಲ್ಲಿ ವಿವಿಧ ಜಾಬ್ ರೋಲ್‌ನಲ್ಲಿ ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಫಲಾನುಭವಿಗಳು ಈ ಯೋಜನೆಯಿಂದ ತಮ್ಮ ಮುಂದಿನ ಜೀವನೋಪಾಯಕ್ಕಾಗಿ ಉದ್ಯೋಗ, ಸ್ವ-ಉದ್ಯೋಗ, ಉನ್ನತ ಶಿಕ್ಷಣಕ್ಕೆ  ಈ ತರಬೇತಿಯು ಉಪಯುಕ್ತವಾಗಲಿದೆ. ಕಾರಣ ಸದರಿ ಯೋಜನೆಯ ಸದುಪಯೋಗವನ್ನು ಯುವಕ, ಯುವತಿಯರು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.  

                ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ನೀಡುವ ನಿರುದ್ಯೋಗ ಭತ್ಯೆಯನ್ನು ಸದುಪಯೋಗ ಪಡೆಸಿಕೊಂಡು ಉತ್ತಮ ಉದ್ಯೋಗ, ಸ್ವ-ಉದ್ಯೋಗಗಳನ್ನು ಪಡೆದುಕೊಳ್ಳಬೇಕು. ಅಭ್ಯರ್ಥಿಗಳ ಪದವಿಗಳಿಗೆ ಅನುಗುಣವಾಗಿ ಅವರ ವೃತ್ತಿಕೌಶಲ್ಯ, ವೃತ್ತಿ ನೈಪುಣ್ಯತೆ ಹೆಚ್ಚಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ. ಇದು ವ್ಯಕ್ತಿಯ ಸಂಹವನ ಕಲೆ, ಆತ್ಮಸ್ಥೈರ್ಯ, ಉದ್ಯೋಗದ ಅರ್ಹತೆಗಳನ್ನು ಹೆಚ್ಚಿಸುವಲ್ಲಿ ತರಬೇತಿಯು ಸಹಾಯಕವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.  

            ಯುವನಿಧಿ ಯೋಜನೆಯಡಿ ನೋಂದಾಯಿತವಾಗುವ ನಿರುದ್ಯೋಗಿ ಯುವಕ, ಯುವತಿಯರು ಪ್ರಸ್ತುತ ಸಾಮಾಜದಲ್ಲಿ ಅಗತ್ಯವಿರುವ ಸೇವೆ ಹಾಗೂ ಉದ್ಯೋಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಮತ್ತು ಈ ನಿಟ್ಟಿನಲ್ಲಿ ಅಗತ್ಯ ಅರ್ಹತೆಗಳನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.  ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ ಅವರು ಸ್ವಾಗತಿ, ಸಭೆ ನಿರ್ವಹಿಸಿದರು.  

            ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ತೇಜಸ್ವಿನಿ ನಾರಾಯಣಕರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್‌.ಎಸ್‌.ಕೆಳದಿಮಠ ಸೇರಿದಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆಯ ಜಿಲ್ಲಾ ನೊಡಲ್ ಅಧಿಕಾರಿ, ಬೆಳಗಾವಿ ವಿಭಾಗ ಮತ್ತು ಹುಬ್ಬಳ್ಳಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರು, ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕರು, ಜಿಲ್ಲೆಯ ಎಲ್ಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ಸರಕಾರಿ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ತರಬೇತಿ ಸಂಸ್ಥೆಯ ಪ್ರಾಂಶುಪಾಲರುಗಳು ಭಾಗವಹಿಸಿದ್ದರು.