ಬಯಲಾಟ ಕಲಾವಿದರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ: ಮೇಯರ್ ಪಿ. ಗಾದೆಪ್ಪ

ಬಯಲಾಟ ಕಲಾವಿದರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ: ಮೇಯರ್ ಪಿ. ಗಾದೆಪ್ಪ  Government committed to resolving issues faced by Bayalata artists: Mayor P. Gadeppa

ಲೋಕದರ್ಶನ ವರದಿ

ಬಳ್ಳಾರಿ 27:  ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿರುವ ದೇಶಿ ಗಂಡು ಕಲೆ ಬಯಲಾಟದ ಉಳಿವಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮಹಾಪೌರ ಪಿ. ಗಾದೆಪ್ಪ ಭರವಸೆ ನೀಡಿದರು.  

ನಗರದ ಜೋಳದ ರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವನಾಥ ಸಾಹುಕಾರ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಬಯಲಾಟ ಕಲಾವಿದರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಕಲಾವಿದರು ಯಾವುದೇ ಆತಂಕ ಪಡಬೇಕಿಲ್ಲ. ಅವರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು, ಹಂತ ಹಂತವಾಗಿ ಪರಿಹರಿಸಲು ಪ್ರಯತ್ನಿಸಲಾಗುವುದು. ಮಾಸಾಶನ, ಪ್ರಶಸ್ತಿ, ಅನುದಾನ ಹಾಗೂ ರಂಗಮಂದಿರಗಳ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.  

ಹಿರಿಯ ಕಲಾವಿದರ ಸಂಘದ ಅಧ್ಯಕ್ಷ ಡಾ. ಪಿ.ಆರ್‌. ಗಾದಿಲಿಂಗನಗೌಡ ಮಾತನಾಡಿ, ಕಲಾವಿದರಿಗೆ ಅಗತ್ಯ ಆರ್ಥಿಕ ನೆರವು ಒದಗಿಸುವ ಜೊತೆಗೆ ದಾಸೋಹ ಸೇರಿದಂತೆ ವಿವಿಧ ವೆಚ್ಚಗಳಿಗೆ ಸಹಕಾರ ನೀಡಲಾಗುತ್ತಿದೆ ಎಂದು ಹೇಳಿದರು.  

ಹಿರಿಯ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ್ ಮಾತನಾಡಿ, ಬಯಲಾಟ ಕಲೆ ತನ್ನ ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಇತ್ತೀಚಿನ ದಿನಗಳಲ್ಲಿ ಸಿನಿಮಾ ಹಾಡುಗಳ ಬಳಕೆ ಹೆಚ್ಚುತ್ತಿರುವುದರಿಂದ ಕಲೆಯ ಸ್ವಾಭಾವಿಕತೆ ಹಾಳಾಗುತ್ತಿದೆ. ಮೂಲ ಪರಂಪರೆಯನ್ನು ಉಳಿಸಿಕೊಂಡು ಬಯಲಾಟವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕೆಂದು ಕರೆ ನೀಡಿದರು.  

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಮಾತನಾಡಿ, ಇಲಾಖೆಯ ವಿವಿಧ ಯೋಜನೆಗಳನ್ನು ಕಲಾವಿದರಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.  

ಕೊಪ್ಪಳ ಜಿಲ್ಲಾ ಬಯಲಾಟ ಕಲಾವಿದರ ಸಂಘದ ಅಧ್ಯಕ್ಷ ನಾಗರಾಜ್ ಇಂಗಳಗಿ ಮಾತನಾಡಿ, ಬಯಲಾಟದ ಪ್ರತಿಗಳನ್ನು ಸಂಗ್ರಹಿಸಿ ಮುದ್ರಣ ಮಾಡಿ ಕಲಾವಿದರಿಗೆ ಕಡಿಮೆ ದರದಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.