ಬೆಳೆ ಹಾನಿಯಾದ ರೈತರಿಗೆ ಪರಿಹಾರ ವಿತರಣೆಗೆ ಎಚ್‌.ಕೆ.ಪಾಟೀಲ ಚಾಲನೆ

ಬೆಳೆ ಹಾನಿಯಾದ ರೈತರಿಗೆ ಪರಿಹಾರ ವಿತರಣೆಗೆ ಎಚ್‌.ಕೆ.ಪಾಟೀಲ ಚಾಲನೆ  H.K. Patil launches compensation distribution for farmers whose crops were damaged

ಗದಗ 4: ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ 91 ಕೋಟಿ ರೂ ಪರಿಹಾರ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಿಬಿಟಿ ಮುಖಾಂತರ ಬೆಳೆ ಹಾನಿ ಪರಿಹಾರ ವಿತರಣೆಗೆ ಚಾಲನೆ ನೀಡಿದರು. 

ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿರುವ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ಡಿಬಿಟಿ ಮುಖಾಂತರ ವಿತರಿಸಲಾಗುತ್ತಿದೆ. ಜಿಲ್ಲೆಗೆ ಒಟ್ಟಾರೆ 91 ಕೋಟಿ ರೂ. ಬಿಡುಗಡೆಯಾಗಿದೆ. ಗದಗ ಮತ್ತು ಶಿರಹಟ್ಟಿ ತಾಲೂಕಿನ ರೈತರಿಗೆ 21 ಕೋಟಿ ರೂ. ಪರಿಹಾರ ಡಿಬಿಟಿ ಮುಖಾಂತರ ವಿತರಿಸಲಾಗುತ್ತಿದೆ. ನಂತರ ನರಗುಂದ, ರೋಣ ತಾಲೂಕಿನ ರೈತರಿಗೆ 55 ಕೋಟಿ ರೂ. ವಿತರಿಸಿ ನಂತರ ಉಳಿದ ತಾಲೂಕುಗಳಿಗೆ ಬೆಳೆ ಹಾನಿ ಪರಿಹಾರವನ್ನು ಡಿಬಿಟಿ ಮೂಲಕ ವಿತರಿಸಲಾಗುತ್ತಿದೆ ಎಂದು ರಾಜ್ಯದ ಕಾನೂನು, ನ್ಯಾಯ , ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಕೆ.ಪಾಟೀಲ ಅವರು ತಿಳಿಸಿದರು.ತೋಟಗಾರಿಕೆ ಬೆಳೆ ಹಾನಿ ಸಮೀಕ್ಷೆ ಕೈಗೊಂಡು ಜಿಲ್ಲೆಯ 18540 ರೈತರಿಗೆ ಇಂದು ಪರಿಹಾರ ವಿತರಣೆಗೆ ಚಾಲನೆ ನೀಡಲಾಯಿತು. 

ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಮೆಣಸಿನಕಾಯಿ, ಸೇವಂತಿಗೆ ಬೆಳೆಗಳು ಪ್ರಮುಖ ಹಾನಿಯಾದ ಬೆಳೆಗಳಾಗಿವೆ. ಅದರಂತೆ ಕೃಷಿ ಬೆಳೆಗಳಾದ ಹೆಸರು, ಗೋವಿನಜೋಳ , ಶೇಂಗಾ ಹಾನಿಯಾದ ಪ್ರಮುಖ ಬೆಳೆಗಳಾಗಿವೆ.ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಇತರರು ಹಾಜರಿದ್ದರು.