ಎಚ್‌‌.ಡಿ.ಕುಮಾರಸ್ವಾಮಿ ಬಿಜೆಪಿ ವಾಗ್ದಾಳಿ

ಎಚ್‌‌.ಡಿ.ಕುಮಾರಸ್ವಾಮಿ ಬಿಜೆಪಿ ವಾಗ್ದಾಳಿ

ಬೆಂಗಳೂರು, ಜ.  22 :  ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಘಟನೆ ಅಣಕುಪ್ರದರ್ಶನ, ಹುಡುಗಾಟ ಎಂದು  ಲೇವಡಿ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ  ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

 ಗೃಹ ಸಚಿವ ಬಸವರಾಜ್ ಬೊಮ್ಮಾಯಿ  ಮಾತನಾಡಿ,  ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಈ ರೀತಿ ಬೇಜವಾಬ್ದಾರಿ  ಹೇಳಿಕೆ ನೀಡಬಾರದು. ಅಧಿಕಾರ ಕಳೆದುಕೊಂಡ ಹತಾಷೆಯಿಂದ ಗೊಂದಲ ಸೃಷ್ಟಿಸುವ ಕೆಲಸ ಮಾಡವುದು  ಸರಿಯಲ್ಲ. ಬಾಂಬ್ ಸ್ಫೋಟ ಅಣಕು ಪ್ರದರ್ಶನ ಎಂದು ಹೇಳಿದ್ದಾರೆ. ತನಿಖೆ ನಡೆಯುತ್ತಿರುವ  ಸಂದರ್ಭದಲ್ಲಿ ಅನಗತ್ಯ ಗೊಂದಲ ಮಾಡುವುದು ಬೇಡ. ಪ್ರಕರಣದಲ್ಲಿ ಭಾಗಿಯಾದವರು ಯಾರೇ ಆದರೂ  ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ರಾಜಕಾರಣ ಮಾಡುವ ಬದಲು  ಸರ್ಕಾರದ ಜತೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವಸತಿ ಸಚಿವ ವಿ.ಸೋಮಣ್ಣ  ಮಾತನಾಡಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಮಗ ಕುಮಾರಸ್ವಾಮಿಗೆ ಸರಿಯಾಗಿ  ತರಬೇತಿ ಕೊಟ್ಟಿಲ್ಲ. ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದವರು ಬೇಜವಾಬ್ದಾರಿಯಾಗಿ  ನಡೆದುಕೊಳ್ಳುವುದು ಸರಿಯಲ್ಲ.  ಕುಮಾರಸ್ವಾಮಿಯವರದ್ದು ಹಿಟ್ ಅಂಡ್ ರನ್ ಸಂಸ್ಕೃತಿ.  ಗಂಟೆಗೊಂದು ಹೇಳಿಕೆ ಕೊಡುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ  ಎಂದು ಕಿಡಿಕಾರಿದರು.