ನಿಗದಿತ ಅವಧಿಯಲ್ಲಿ ಹಣ ಸಂದಾಯವಾಗದಿದ್ದಲ್ಲಿ ಸಕ್ಕರೆ ಕಾರ್ಖಾನೆ ಹರಾಜಿಗೆ ಕ್ರಮ : ಡಿಸಿ ಟಿ.ಭೂಬಾಲನ್

ವಿಜಯಪುರ, ಜೂ.18: ಕಬ್ಬು ಪೂರೈಕೆ ಮಾಡಿದ ರೈತರಿಗೆ  ಬಾಕಿ ಹಣ ಸಂದಾಯ ಮಾಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಬಸವೇಶ್ವರ ಶುಗರ್ಸ್‌ ಸಕ್ಕರೆ ಕಾರ್ಖಾನೆ ಹರಾಜಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ. 

ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿರುವ ಬಸವೇಶ್ವರ ಶುಗರ್ಸ್‌ ಸಕ್ಕರೆ ಕಾರ್ಖಾನೆಯವರು 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ರೂ.68.44 ಕೋಟಿಗಳನ್ನು ನಿಗದಿತ ಅವಧಿಯಲ್ಲಿ ಪಾವತಿಸದೇ ಇರುವ ಕಾರಣದಿಂದ ಸಕ್ಕರೆ (ನಿಯಂತ್ರಣ) ಆದೇಶ ಹಾಗೂ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಅಡಿಯಲ್ಲಿ ಸದರಿ ಸಕ್ಕರೆ ಕಾರ್ಖಾನೆಯವರಿಂದ ಭೂಬಾಕಿ ರೂಪದಲ್ಲಿ ಬಡ್ಡಿ ಸಮೇತ ವಸೂಲಾತಿ ಮಾಡಲು ಜಿಲ್ಲಾಧಿಕಾರಿಗಳ ವರದಿ ಮೇರೆಗೆ ಆಯುಕ್ತರು, ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶಕರು ಬೆಂಗಳೂರು ಇವರು ಆದೇಶ ಹೊರಡಿಸಿದ್ದಾರೆ.  

ರೈತರಿಗೆ ನೀಡಬೇಕಾದ ಬಾಕಿ ಹಣ ರೂ. 70.80 ಕೋಟಿ (ಬಡ್ಡಿ ಸೇರಿ)ಗಳನ್ನು ಪಾವತಿಸಲು ಕಾಲಾವಕಾಶ ನೀಡಿ ನೋಟಿಸ್ ನೀಡಲಾಗಿದ್ದರೂ ಸಹ ಸದರಿ ಕಾರ್ಖಾನೆಯವರು ಸ್ಪಂದಿಸದೇ ಇರುವುದರಿಂದ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮೇರೆಗೆ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶುಗರ್ಸ್‌ ಸಕ್ಕರೆ ಕಾರ್ಖಾನೆಯ ಆಸ್ತಿಗಳ ಭೂ ದಾಖಲೆಗಳಲ್ಲಿ ರೂ.70.80 ಕೋಟಿ ಹಣವನ್ನು ಬೋಜಾ ದಾಖಲು ಮಾಡಿ ಗೇಣಿ ಮತ್ತು ಪಹಣಿ ಪತ್ರಿಕೆಗಳನ್ನು ಕಚೇರಿ ಸಲ್ಲಿಸುವಂತೆ ಬಬಲೇಶ್ವರ ತಹಶೀಲ್ದಾರರಿಗೆ ಈಗಾಗಲೇ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.  

ನಿಗದಿತ ಅವಧಿಯಲ್ಲಿ ಹಣವನ್ನು ಪಾವತಿಸದೇ ಇದ್ದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರನ್ವಯ ಸಕ್ಕರೆ ಕಾರ್ಖಾನೆಯನ್ನು ಹರಾಜು ಮಾಡಲು ಕ್ರಮ ವಹಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.