ವಿಜಯಪುರ ಮಾ.12: ಶ್ರೀ ಜಗದ್ಗುರು ರೇಣುಕಾಚಾರ್ಯ ಅವರು ತಮ್ಮ ತತ್ವ ಸಿದ್ಧಾಂತಗಳ ಮೂಲಕ ಸಮಾಜದ ಓರೆಕೋರೆಗಳನ್ನು ಹೋಗಲಾಡಿಸಲು ತಮ್ಮ ಮೂಲಕ ತತ್ವಸಿದ್ದಾಂತಗಳ ಮೂಲಕ ಸಂದೇಶ ಸಾರಿ ಇಡೀ ಸಮಾಜಕ್ಕೆ ಬೆಳಕಾದವರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.
ನಗರದ ಶ್ರೀ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದ್ಗುರು ರೇಣುಕಾಚಾರ್ಯರು ತಮ್ಮ ತತ್ವ, ಸಿದ್ದಾಂತಗಳಿಂದ ಈ ಜಗತ್ತಿಗೆ ಶಾಂತಿ ಹಾಗೂ ಸಹಬಾಳ್ವೆಯ ಸಂದೇಶ ಸಾರಿದಾರೆ ಎಂದರು.
ಮಾನವ ಜನಾಂಗದ ಏಳಿಗೆಗಾಗಿ, ಸಮಾಜದಲ್ಲಿನ ನ್ಯೂನ್ಯತೆಗಳನ್ನು,ಮೌಢ್ಯತೆಗಳನ್ನು ತೊಲಗಿಸಲು, ಜಗದ್ಗುರು ರೇಣುಕಾಚಾರ್ಯರು ಸಮಾಜಕ್ಕೆ ಸನ್ಮಾರ್ಗ ತೋರಿದರು. ಈ ಮಹನೀಯರ ತತ್ವಾದರ್ಶ ಅವರ ವಿಚಾರಗಳು ಸಾರ್ವಕಾಲಿಕವಾಗಿಯೂ ಇಂದಿಗೂ ಪ್ರಸ್ತುತವಾಗಿದ್ದು, ಇಂದಿನ ಯುವ ಪೀಳಿಗೆ ಮಹನೀಯರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು.ಸಮಾಜದಲ್ಲಿ ಸುಖ-ಶಾಂತಿ ನೆಮ್ಮದಿಯಿಂದ ಉತ್ತಮ ಜೀವನ ಕಟ್ಟಿಕೊಳ್ಳಲು ದಾರ್ಶನಿಕರು ನೀಡಿದ ಉಪದೇಶಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಮಹಾದೇವಯ್ಯ ಶಾಸ್ತ್ರೀಯವರು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಜಗದ್ಗುರು ರೇಣುಕಾಚಾರ್ಯರು ಸರ್ವರ ಒಳಿತನ್ನು ಬಯಸಿದ ಅವರು ಆ ದಿಸೆಯಲ್ಲಿ ಶ್ರಮಿಸಿದ್ದರು. ಮೌಢ್ಯತೆಯ ತೊರೆದು ಉತ್ತಮ ಬದುಕು ಕಟ್ಟಿಕೊಳ್ಳುವ ದಿಸೆಯಲ್ಲಿನ ಅವರ ಚಿಂತನೆಗಳನ್ನು ಅರಿತುಕೊಳ್ಳಬೇಕು. ನಾವೆಲ್ಲ ಸಹಬಾಳ್ವೆಯಿಂದ ಬದುಕುವ ನಿಟ್ಟಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಸಮಾಜಕ್ಕೆ ಅವರ ಚಿಂತನೆಗಳ ಮೂಲಕ ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದರು. ಶ್ರೀಮತಿ ಮಾಳವಿಕಾ ಜೋಶಿ ಸುಗಮ ಸಂಗೀತ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ವೈ.ಎ.ನಾರಾಯಣಕರ, ಜಿಲ್ಲಾ ಪಂಚಾಯತಿಯ ಯೋಜನಾ, ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಡಿವೈಎಸ್ಪಿ ಡಿ.ಎಸ್.ಧನಗರ ಸೇರಿದಂತೆ ಸಂಜೀವ ಹಿರೇಮಠ, ಎಸ್.ಎಸ್.ಹಿರೇಮಠ, ಗುರು ಗಚ್ಚೀನಮಠ, ಎನ್.ಆರ್.ಮಠ, ವಿಜಯಕುಮಾರ ಹಿರೇಮಠ ಹಿರೂರು, ಚಿದಾನಂದ ಹಿರೇಮಠ, ಶ್ರೀಮತಿ ಪುಷ್ಪಾ ಹಿರೇಮಠ ಸೇರಿದ್ದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಮೆರವಣಿಗೆಗೆ ಚಾಲನೆ: ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆಗೆ ಚುನಾವಣಾ ವಿಭಾಗದ ತಹಶೀಲ್ದಾರ ಪವಾರ ಹಾಗೂ ಜಿಲ್ಲಾ ಪಂಚಾಯತಿಯ ಯೋಜನಾ, ಅಂದಾಜು ಮತ್ತು ಮೌಲ್ಯ ಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಸಾಗಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ವಿದ್ಯಾವತಿ ಅಂಕಲಗಿ, ದೇವೆಂದ್ರ ಮಿರೇಕರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರು, ಗೀರೀಶ ಕುಲಕರ್ಣಿ ಇದ್ದರು.