ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌‍ನಿಂದ ಜಾಮೀನು

Janardhana Reddy granted bail by Telangana High Court

ಹೈದರಾಬಾದ್ 11: ಓಬಳಾಪುರಂ ಮೈನಿಂಗ್‌ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಜತೆಗೆ, ರೆಡ್ಡಿಗೆ ಸಿಬಿಐ ನ್ಯಾಯಾಲಯವು ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.

ಈ ಪ್ರಕರಣದಲ್ಲಿ ರೆಡ್ಡಿ ಸೇರಿದಂತೆ ಶಿಕ್ಷೆಗೊಳಗಾಗಿರುವ ಇತರ ಮೂವರ ಜಾಮೀನು ಅರ್ಜಿಗಳನ್ನು ಸಹ ಹೈಕೋರ್ಟ್ ಅಂಗೀಕರಿಸಿದೆ.

ಮೇ 6ರಂದು ಓಬಳಾಪುರಂ ಮೈನಿಂಗ್ ಕಂಪನಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯವು ಅಂತಿಮ ತೀರ್ಪು ನೀಡಿ ಏಳು ವರ್ಷಗಳ ಶಿಕ್ಷೆ ವಿಧಿಸಿತ್ತು. ಜನಾರ್ದನ ರೆಡ್ಡಿ ಜತೆಗೆ, ಶ್ರೀನಿವಾಸ್ ರೆಡ್ಡಿ, ವಿ.ಡಿ.ರಾಜಗೋಪಾಲ್ ಮತ್ತು ಅಲಿ ಖಾನ್ ದೋಷಿಗಳೆಂದು ಘೋಷಿಸಿತ್ತು. ಈ ತೀರ್ಪು ಪ್ರಶ್ನಿಸಿ ರೆಡ್ಡಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದರು.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್, ಜರ್ನಾದನ ರೆಡ್ಡಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜತೆಗೆ, ತಲಾ ₹10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶ ಬಿಟ್ಟು ಹೋಗುವಂತಿಲ್ಲ. ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆಯೂ ಆದೇಶಿಸಿದೆ.