ಕುರುಗೋಡು ತಾಲ್ಲೂಕಿನಲ್ಲಿ ಜಾಬ್ ಕಾರ್ಡ್‌ ಮೇಳ

ಕುರುಗೋಡು ತಾಲ್ಲೂಕಿನಲ್ಲಿ ಜಾಬ್ ಕಾರ್ಡ್‌ ಮೇಳ  Job card fair in Kurugodu taluk


 ಬಳ್ಳಾರಿ  22:  ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಕುರುಗೋಡು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ‘ಜಾಬ್ ಕಾರ್ಡ್‌ ಮೇಳ’ ಆಯೋಜಿಸುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ ಅಧಿಕಾರಿಗಳಿಗೆ ಸೂಚಿಸಿದರು.  

ಕುರುಗೋಡು ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಓರ್ವಾಯಿ ಹಾಗೂ ಯರಂಗಳಿಗಿ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಜಾಬ್ ಕಾರ್ಡ್‌ ವಿತರಿಸುವ ಅಭಿಯಾನ ಯಶಸ್ವಿಯಾಗಿ ಆರಂಭವಾಗಿದ್ದು, ಇದೇ ಮಾದರಿಯಲ್ಲಿ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್‌ ವಿತರಿಸಲು ಮೇಳ ಆಯೋಜಿಸಬೇಕು ಎಂದರು.  

ಪ್ರಸಕ್ತ ಸಾಲಿನ ಉದ್ಯೋಗ ಖಾತರಿ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಯನ್ನು ವಿಳಂಬ ಮಾಡದೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ನರೇಗಾ ಸಹಾಯಕ ನಿರ್ದೇಶಕ ಶಿವರಾಮರೆಡ್ಡಿ.ಪಿ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ರೇಣುಕಾಚಾರ್ಯ ಸ್ವಾಮಿ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ರಾಧಿಕಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.