ಕುರುಗೋಡಿನಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜಂಟಿ ದಾಳಿ: ಕಿಶೋರ ಕಾರ್ಮಿಕನ ರಕ್ಷಣೆ

ಕುರುಗೋಡಿನಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜಂಟಿ ದಾಳಿ: ಕಿಶೋರ ಕಾರ್ಮಿಕನ ರಕ್ಷಣೆ Joint raid to eradicate child labor in Kurugode: Protection of a teenage worker

ಬಳ್ಳಾರಿ 24:  ಕುರುಗೋಡು ಪಟ್ಟಣದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಬುಧವಾರ ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿಯು ಹಠಾತ್ ದಾಳಿ ನಡೆಸಿ, ಓರ್ವ ಕಿಶೋರ ಕಾರ್ಮಿಕನನ್ನು ರಕ್ಷಿಸಲಾಗಿದೆ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಚೈಲ್ಡ್‌ಲೈನ್ (ಮಕ್ಕಳ ಸಹಾಯವಾಣಿ) ಇಲಾಖೆಗಳ ಜಂಟಿ ಸಹಯೋಗದೊಂದಿಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

*20ಕ್ಕೂ ಹೆಚ್ಚು ಉದ್ದಿಮೆಗಳ ಪರೀಶೀಲನೆ:* 

ಕುರುಗೋಡು ಪಟ್ಟಣದ ಗೆಣಿಕೆಹಾಳ್ ರಸ್ತೆ, ಬಳ್ಳಾರಿ ರಸ್ತೆ, ಬಾದನಹಟ್ಟಿ ರಸ್ತೆ ಹಾಗೂ ಕಂಪ್ಲಿ ರಸ್ತೆಗಳಲ್ಲಿರುವ ಸುಮಾರು 20ಕ್ಕೂ ಹೆಚ್ಚು ವಾಣಿಜ್ಯ ಮತ್ತು ಕೈಗಾರಿಕಾ ಉದ್ದಿಮೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ತಪಾಸಣೆ ನಡೆಸಿತು.ಈ ವೇಳೆ ಪಟ್ಟಣದ ‘ಶ್ರೀ ವೆಂಕಟೇಶ್ವರ ಆಟೋ ಮೊಬೈಲ್ಸ್‌' ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಕಿಶೋರ ಕಾರ್ಮಿಕನನ್ನು ಅಧಿಕಾರಿಗಳು ರಕ್ಷಿಸಿ, ಬಿಡುಗಡೆಗೊಳಿಸಿದರು. ರಕ್ಷಿಸಲ್ಪಟ್ಟ ಬಾಲಕನನ್ನು ಆತ ಈ ಹಿಂದೆ ವ್ಯಾಸಂಗ ಮಾಡುತ್ತಿದ್ದ ಅದೇ ಶಾಲೆಗೆ ಮರು ದಾಖಲಿಸಿ, ಶಿಕ್ಷಣ ಮುಂದುವರಿಸಲು ಕ್ರಮ ಕೈಗೊಳ್ಳಲಾಗಿದೆ.

*ಮಾಲೀಕರ ವಿರುದ್ಧ ಕಾನೂನು ಕ್ರಮ:* ಮಕ್ಕಳ ವಯಸ್ಸಿನ ಅಧಿಕೃತ ದಾಖಲಾತಿಗಳನ್ನು ಪರೀಶೀಲಿಸಲಾಗುತ್ತಿದ್ದು, ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಮಾಲೀಕರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಬಾಲಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಅಂಗಡಿ ಮತ್ತು ಉದ್ದಿಮೆಗಳ ಮಾಲೀಕರಿಗೆ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿ, ಜಾಗೃತಿ ಪೋಸ್ಟರ್‌ಗಳನ್ನು ವಿತರಿಸಲಾಯಿತು.

ಈ ಜಂಟಿ ಟಾಸ್ಕ್‌ ಫೋರ್ಸ್‌ ಕಾರ್ಯಾಚರಣೆಯಲ್ಲಿ ಬಳ್ಳಾರಿ 2ನೇ ವೃತ್ತದ ಕಾರ್ಮಿಕ ನೀರೀಕ್ಷಕ ಪರಶುರಾಮ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ನಿರ್ದೇಶಕ ಎ.ಮೌನೇಶ್, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಜಡೇಶ್, ಕಂದಾಯ ಇಲಾಖೆಯ ಶಿರಸ್ತೇದಾರ್ ವಿಜಯ ಕುಮಾರ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಮಂಜುಳಾ ಹಾಗೂ ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕ ಆನಂದ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.