ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್‌: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್‌: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ Lakshmi Hebbalkar listens to public grievances; instructs officials to resolve issues promptly

ಬೆಳಗಾವಿ 11: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿದರು. ವಿವಿಧ ಗ್ರಾಮಗಳು ಹಾಗೂ ನಗರದ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದರು.

ಜನರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರತಿಯೊಬ್ಬರ ಅಹವಾಲನ್ನು ತಾಳ್ಮೆಯಿಂದ ಆಲಿಸಿ, ಸಂಬಂಧಿತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ತಕ್ಷಣದ ಕ್ರಮ ಕೈಗೊಳ್ಳಬೇಕಾದ ವಿಷಯಗಳ ಕುರಿತು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ ಅವರು, ಉಳಿದ ಸಮಸ್ಯೆಗಳನ್ನೂ ಆದ್ಯತೆಯ ಮೇರೆಗೆ ಬಗೆಹರಿಸುವಂತೆ ಸೂಚಿಸಿದರು. 

ಭೂಮಿ, ಕಂದಾಯ, ರಸ್ತೆ, ಕುಡಿಯುವ ನೀರು, ವಿದ್ಯುತ್, ಸಾಮಾಜಿಕ ಭದ್ರತಾ ಯೋಜನೆಗಳು, ಪಿಂಚಣಿ, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳೊಂದಿಗೆ ಸಾರ್ವಜನಿಕರು ಗೃಹ ಕಚೇರಿಗೆ ಆಗಮಿಸಿದ್ದರು. ಪ್ರತಿಯೊಂದು ಅರ್ಜಿಯನ್ನು ಪರೀಶೀಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಜನರಿಗೆ ಅಗತ್ಯ ನೆರವು ದೊರೆಯುವಂತೆ ಕ್ರಮವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಯ ಪ್ರಮುಖ ಕರ್ತವ್ಯವಾಗಿದೆ. ಜನರು ಕಚೇರಿಗೆ ಬಂದಾಗ ಸಾಧ್ಯವಾದಷ್ಟು ಬೇಗ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದೇವೆ. ಅಧಿಕಾರಿಗಳು ಕೂಡ ಸಾರ್ವಜನಿಕರ ಅಹವಾಲುಗಳಿಗೆ ಮಾನವೀಯತೆ ಹಾಗೂ ಜವಾಬ್ದಾರಿಯಿಂದ ಸ್ಪಂದಿಸಿ ತ್ವರಿತವಾಗಿ ಕಾರ್ಯನಿರ್ವಹಿಸಬೇಕು," ಎಂದು ಹೇಳಿದರು. ಗೃಹ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ತಕ್ಷಣ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯವೈಖರಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.