ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಲಕ್ಷ್ಮಣ ಸವದಿ ಭೂಮಿಪೂಜೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಲಕ್ಷ್ಮಣ ಸವದಿ ಭೂಮಿಪೂಜೆ  MLA Laxman Savadi performs groundbreaking ceremony for various development works

ಅಥಣಿ  11 : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿದರು.  ಸುಮಾರು 25 ಲಕ್ಷ ವೆಚ್ಚದಲ್ಲಿ ನಂದಿ ಬಸವೇಶ್ವರ ದೇವಸ್ಥಾನದ ಸಮುದಾಯ ಭವನ ನಿರ್ಮಾಣ, 20 ಲಕ್ಷ ವೆಚ್ಚದಲ್ಲಿ ಶಿವಯೋಗಿಗಳ ತಪೋವನದಲ್ಲಿ ಸಮುದಾಯ ಭವನ ನಿರ್ಮಾಣ ಹಾಗೂ ನದಿ ಇಂಗಳಗಾವ ಹಿಮದನಮಟ್ಟಿ ಸಂಪರ್ಕದ ಸುಮಾರು 2.5 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಗ್ರಾಮಸ್ಥರ ಮನವಿಯ ಮೇರೆಗೆ ದೇವಸ್ಥಾನ ಹಾಗೂ ತಪೋವನದ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ರಸ್ತೆ ಅಭಿವೃದ್ಧಿಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.  ನದಿ ಇಂಗಳಗಾಂವ ಗ್ರಾಮದ ಅಭಿವೃದ್ಧಿಗೆ ಹಂತ ಹಂತವಾಗಿ ಇನ್ನಷ್ಟು ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಗ್ರಾಮಸ್ಥರ ಸಹಕಾರದೊಂದಿಗೆ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.  ಈ ವೇಳೆ ಗ್ರಾಮಸ್ಥರು ಶಾಸಕ ಲಕ್ಷ್ಮಣ ಸವದಿ ಅವರನ್ನು ಸನ್ಮಾನಿಸಿ ಗೌರವಿಸಿದರು.  

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿ ವೀರಣ್ಣ ವಾಳಿ, ಗ್ರಾಮದ ಮುಖಂಡರಾದ ಶಿವರುದ್ರ ಘೂಳಪ್ಪನವರ, ಪಿಕೆಪಿಎಸ್ ಅಧ್ಯಕ್ಷ ವಿಠ್ಠಲ ರಾಚಗೌಡರ, ಗುರಬಸು ತೇವರಮನಿ, ಅಪ್ಪಾಸಾಬ ಮದಬಾವಿ, ನಾಗರಾಜ ಘೂಳಪ್ಪನವರ, ಅಲಗೌಡ ಮುದಗೌಡ, ಮಹಾಂತೇಶ ಘೂಳಪ್ಪನವರ, ಮಹಾಂತೇಶ ಪಾಟೀಲ, ರವಿ ಸಾಂತಿ, ಶ್ರೀಶೈಲ ಹಲ್ಯಾಳ, ಈಶ್ವರ ಮುಜಗೋಣಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.