ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಪಿಡಿಓಗೆ ಮಾನೆ ಸೂಚನೆ

ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಪಿಡಿಓಗೆ ಮಾನೆ ಸೂಚನೆ  Mane instructs PDO to take action to prevent water problems in summer

ಲೋಕದರ್ಶನ ವರದಿ 

ಹಾನಗಲ್ 21: ತಾಲೂಕಿನಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಶುಕ್ರವಾರ ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಶಾಸಕ ಶ್ರೀನಿವಾಸ ಮಾನೆ ತಾಲೂಕ ಪಂಚಾಯಿತಿ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿದರು. 

  ಸಭೆಯಲ್ಲಿ ಶಾಸಕ ಮಾನೆ ಮಾತನಾಡಿ ಬೇಸಿಗೆ ಸಮಯದಲ್ಲಿ ನೀರಿನ ಸಮಸ್ಯೆ ಸಾಮಾನ್ಯವಾಗಿದ್ದರೂ, ಈ ಬಾರಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅವಶ್ಯವಿದ್ದಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಲು ಗ್ರಾಪಂ ನಿಧಿ 1 ರಲ್ಲಿ ಅಥವಾ 15 ನೇ ಹಣಕಾಸು ಯೋಜನೆಯಲ್ಲಿ ಲಭ್ಯ ಅನುದಾನ ಬಳಸಿಕೊಳ್ಳಬೇಕು. ನೀರಿನ ಸಮಸ್ಯೆ ಪರಿಹರಿಸುವುದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಹಂತದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ಸೂಚಿಸುವಂತೆ ತಿಳಿಸಿದರು. 

  ಕೆಲವು ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಿದ್ದು ಪೈಪಲೈನ್ ಸಂಪರ್ಕ ನೀಡದೇ ಹಾಗೆಯೇ ಬಿಡಲಾಗಿದೆ. ಅವಶ್ಯವಿದ್ದಲ್ಲಿ ಪೈಪ್‌ಲೈನ್ ಅಳವಡಿಸಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ನೀರಿನ ಅಲಭ್ಯತೆ ಇರುವ ಗ್ರಾಮಗಳ ಪಟ್ಟಿ ಮೊದಲೇ ಸಿದ್ಧಪಡಿಸಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವುದಕ್ಕೂ ಸನ್ನದ್ಧರಾಗಬೇಕು. ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆ ಬಾವಿ ಪಡೆಯುವಂತೆ ಸೂಚಿಸಿದರು. 

  ಬೇಸಿಗೆ ಅವಧಿಯಲ್ಲಿ ಜನ, ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಸುಗಮವಾಗಿ ಕುಡಿಯುವ ನೀರು ಲಭ್ಯವಾಗುವಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ತಾಪಂ ಇಒ ಡಾ.ಗೀರೀಶ ರೆಡ್ಡೇರ, ಯೋಜನಾಧಿಕಾರಿ ಚಂದ್ರಶೇಖರ ಸೂಡಂಬಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಚಂದ್ರಶೇಖರ ನೆಗಳೂರ, ಸಹಾಯಕ ಅಭಿಯಂತರರಾದ ಷಣ್ಮುಖಪ್ಪ, ಆಕಾಶ ಇದ್ದರು.