ಶಿರಸಿಯಲ್ಲಿ ಬೃಹತ್ ಮಾನಸಿಕ ಆರೋಗ್ಯ ಅರಿವು ಕಾರ್ಯಾಗಾರ : ನ್ಯಾ.ಪರಮೇಶ್ವರ ಪ್ರಸನ್ನ

ಶಿರಸಿಯಲ್ಲಿ ಬೃಹತ್ ಮಾನಸಿಕ ಆರೋಗ್ಯ ಅರಿವು ಕಾರ್ಯಾಗಾರ : ನ್ಯಾ.ಪರಮೇಶ್ವರ ಪ್ರಸನ್ನ Massive mental health awareness workshop in Sirsi: Justice Parameshwara Prasanna

ಲೋಕದರ್ಶನ ವರದಿ 

ಕಾರವಾರ ಮಾ.25 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಏಪ್ರಿಲ್ 11 ರಂದು ಶಿರಸಿಯ ಎಂ.ಇ.ಎಸ್  ಕಾಮರ್ಸ್‌ ಕಾಲೇಜಿನಲ್ಲಿ  ಬೃಹತ್ ಮಾನಸಿಕ ಆರೋಗ್ಯ ಅರಿವು ಕಾರ್ಯಗಾರ ಆಯೋಜಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ನ್ಯಾಯಾಲಯದ ವೀಡಿಯೋ ಕಾನ್ಫರೆನ್ಸ್‌ ಕೊಟಢಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಬೃಹತ್ ಮಾನಸಿಕ ಆರೋಗ್ಯ ಅರಿವು ಕಾರ್ಯಗಾರದಲ್ಲಿ ಜಿಲ್ಲೆಯ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಇಲಾಖೆ , ವಕೀಲರುಗಳು , ಆರೋಗ್ಯ ಇಲಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ  ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು , ಕಾರ್ಯಗಾರದಲ್ಲಿ ಹೈಕೋರ್ಟ್‌ ನ್ಯಾಯಾಧೀಶರುಗಳು ಮತ್ತು  ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಭಾಗವಹಿಸಲಿದ್ದಾರೆ ಎಂದರು. 

ಕಾರ್ಯಗಾರದಲ್ಲಿ  ಮಾನಸಿಕ ಕಾಯಿಲೆ, ಲಕ್ಷಣಗಳು ಮತ್ತು ಚಿಕಿತ್ಸೆ,  ದುಶ್ಚಟಗಳು ಮತ್ತು ಚಿಕಿತ್ಸೆ, ಮಾನಸಿಕ ಆರೋಗ್ಯ ಆರೈಕೆ ಕಾಯಿದೆ 2017,  ಅಧಿಕಾರಿಗಳ ಪಾತ್ರ ಮತ್ತು ಜವಾಬ್ದಾರಿಗಳು, ಹದಿಹರೆಯ ಮತ್ತು ವಿವಾಹ ಲೈಂಗಿಕತೆ ವಿಷಯಗಳ ಕುರಿತಂತೆ ತಜ್ಞರಿಂದ ಉಪನ್ಯಾಸ ನಡೆಯಲಿದೆ ಎಂದರು. ಕಾರ್ಯಗಾರದ ಯಶಸ್ವಿಗಾಗಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾ ನ್ಯಾಯಾಧೀಶರು ನಿರ್ದೇಶನ ನೀಡಿದರು. 

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ.,  ವೀಡೀಯೋ ಕಾನ್ಸ್‌ರೆನ್ಸ್‌ ಮೂಲಕ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಸರ್ಕಾರಿ ಅಭಿಯೋಜಕಿ ತನುಜಾ ಬಿ ಹೊಸಪಟ್ನ, ಜಿ.ಪಂ. ಉಪ ಕಾರ್ಯದರ್ಶಿ  ಪ್ರಕಾಶ್ ಹಾಲಮ್ಮ ನವರ್,  ಕ್ರಿಮ್ಸ್‌ ನ ಮನೋರೋಗ ವಿಭಾಗದ  ಡಾ. ವಿಜಯ್, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣಾಧಿಕಾರಿ ರಾಘವೆಂದ್ರ ಭಟ್ ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಭಾಗವತ್, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.