3ನೇ ದಿನಕ್ಕೂ ಕಾಲಿಟ್ಟ ಮಾಸ್ತಿಹೊಳಿ ರೈತರ ಅಹೋರಾತ್ರಿ ಧರಣಿ

3ನೇ ದಿನಕ್ಕೂ ಕಾಲಿಟ್ಟ ಮಾಸ್ತಿಹೊಳಿ ರೈತರ ಅಹೋರಾತ್ರಿ ಧರಣಿ  Mastiholi farmers' day-night protest enters third day.

ಬೆಳಗಾವಿ, ಜು.16: ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ನ್ಯಾಯಸಮ್ಮತ ಪರಿಹಾರ ನೀಡುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೂ ಮುಂದುವರಿದಿದೆ.  

ಕರ್ನಾಟಕ ನೀರಾವರಿ ನಿಗಮದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆಗೆ ಸರ್ಕಾರ ಹಾಗೂ ಅಧಿಕಾರಿಗಳಿಂದ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ರೈತರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.  

ಕಚೇರಿ ಆವರಣದಲ್ಲೇ ಸಾಂಸ್ಕೃತಿಕ ಪ್ರತಿಭಟನೆ ಪ್ರತಿಭಟನಾ ಸ್ಥಳದಲ್ಲೇ ರೈತರು ಭಜನೆ, ಜನಪದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ನಾಟಕ ಪ್ರದರ್ಶನಗಳನ್ನೂ ಆಯೋಜಿಸಿದರು.  

ಅಧಿಕಾರಿಗಳ ವಿರುದ್ಧ ಅಸಮಾಧಾನ  

ಪ್ರತಿಭಟನೆ ನಡೆಯುತ್ತಿದ್ದರೂ ನೀರಾವರಿ ನಿಗಮದ ಅಧಿಕಾರಿಗಳು ಕಚೇರಿಗೆ ಆಗಮಿಸದೇ ದೂರ ಉಳಿದಿರುವುದಾಗಿ ರೈತರು ಆರೋಪಿಸಿದರು. ರೈತರ ಸಮಸ್ಯೆಗೆ ಸ್ಪಂದಿಸದೆ ತಪ್ಪು ದಾಖಲೆಗಳನ್ನು ಸೃಷ್ಟಿಸಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.  

ಹೋರಾಟ ತೀವ್ರಗೊಳಿಸುವ ಎಚ್ಚರಿಕೆ "ನಾವು ಶಾಂತಿಯುತವಾಗಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ. ಬಲವಂತವಾಗಿ ಧರಣಿ ತೆರವುಗೊಳಿಸಲು ಯತ್ನಿಸಿದರೆ ಸುತ್ತಮುತ್ತಲಿನ ಗ್ರಾಮಗಳ ರೈತರೂ ಹೋರಾಟಕ್ಕೆ ಸೇರೆ​‍್ಡಯಾಗಲಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡರೆ ಅದರ ಹೊಣೆ ಅಧಿಕಾರಿಗಳದ್ದೇ" ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.  

ಸಚಿವರ ಆದೇಶ ಪಾಲನೆಯಾಗಿಲ್ಲ ಎಂಬ ಆರೋಪ ಸಚಿವರ ಸೂಚನೆಯಂತೆ ತಪ್ಪು ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದ್ದರೂ ಅಧಿಕಾರಿಗಳು ಅದನ್ನು ಪಾಲಿಸಿಲ್ಲ ಎಂದು ರೈತ ಮುಖಂಡ ಬಾಳೇಶ ಮಾವನೂರು ಆರೋಪಿಸಿದರು.  ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಕಚೇರಿ ಆವರಣದಲ್ಲೇ ರಾತ್ರಿ-ಹಗಲು ತಂಗಿ ತಮ್ಮ ಬೇಡಿಕೆ ಈಡೇರುವವರೆಗೆ ಧರಣಿ ಮುಂದುವರಿಸುವುದಾಗಿ ತಿಳಿಸಿದ್ದಾರೆ.