ಸಂಡೂರು ಸಂಕಲ್ಪ ಸಮರಾ​‍್ಣ ಸಮಾವೇಶ-2 ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಎಸ್‌.ಲಾಡ್ ಭರವಸೆ

ಸಂಡೂರು ಸಂಕಲ್ಪ ಸಮರಾ​‍್ಣ ಸಮಾವೇಶ-2 ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಎಸ್‌.ಲಾಡ್ ಭರವಸೆ Minister Santosh S. Lad's promise at the Sandur Sankalp Samaran Conference-2 program

ಲೋಕದರ್ಶನ ವರದಿ  

                                               ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ 

       ಬಳ್ಳಾರಿ 26:  ಸುಪ್ರೀಂ ಕೋರ್ಟ್‌ ಮಾರ್ಗಸೂಚಿಯಂತೆ, ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ  ಸಚಿವ ಸಂತೋಷ್ ಎಸ್‌.ಲಾಡ್ ಅವರು ಹೇಳಿದರು. ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಭಾನುವಾರ ಏರಿ​‍್ಡಸಿದ್ದ ಸಂಡೂರು ಸಂಕಲ್ಪ ಸಮರಾ​‍್ಣ ಸಮಾವೇಶ-2 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರ ಏಳಿಗೆಗೆ ಬದ್ಧವಾಗಿದ್ದು, ಅಂಬೇಡ್ಕರ್ ಸಹಾಯಹಸ್ತ ಕಾರ್ಯಕ್ರಮದ ಮೂಲಕ ವಿವಿಧ ಅಸಂಘಟಿತ ವಲಯಗಳ ಜನರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು.  

ಅಮೆಜಾನ್, ಜೊಮ್ಯಾಟೊ, ಸ್ವಿಗ್ಗಿ ಮುಂತಾದ ಆನ್‌ಲೈನ್ ಕಂಪನಿಗಳಲ್ಲಿ ಕೆಲಸ ಮಾಡುವ ಡೆಲಿವರಿ ಬಾಯ್‌ಗಳ ಹಿತರಕ್ಷಣೆಗಾಗಿ ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಿಗ್ ವರ್ಕರ್ಸ್‌ ಬಿಲ್ ಕಾನೂನು ತರಲಾಗಿದೆ. ಚಾಲಕರು ಮತ್ತು ಕ್ಲೀನರ್‌ಗಳ ಹಿತದೃಷ್ಟಿಯಿಂದ ಸ್ಮಾರ್ಟ್‌ ಕಾರ್ಡ್‌ ವಿತರಿಸುವ ಟ್ರಾನ್ಸ್‌ಪೋರ್ಟ್‌ ಬಿಲ್ ಯೋಜನೆ ಜಾರಿಯಲ್ಲಿದೆ. ಅದರಂತೆ ಚಿತ್ರರಂಗದ ಕಾರ್ಮಿಕರು ಹಾಗೂ ಮನೆಗೆಲಸ ಮಾಡುವ ಮಹಿಳೆಯರ ಸಾಮಾಜಿಕ ಭದ್ರತೆಗಾಗಿ ಸಿನಿ ಬಿಲ್ ಮತ್ತು ಡೊಮೆಸ್ಟಿಕ್ ಬಿಲ್ ನಂತಹ ಹೊಸ ಕಾನೂನುಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ಇಡೀ ದೇಶದಲ್ಲೇ ಇಂತಹ ಬೃಹತ್ ಜನಪರ ಯೋಜನೆಗಳು ಎಲ್ಲಿಯೂ ಇಲ್ಲ. ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ ಸುಮಾರು 60,000 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಇದು ಸುಮಾರು 3 ಲಕ್ಷ ಕೋಟಿ ರೂಪಾಯಿಗಳಾಗುತ್ತದೆ ಎಂದು ತಿಳಿಸಿದರು. 

ನಾವು ನಮ್ಮ ಮಕ್ಕಳಿಗೆ ಸ್ಥಳೀಯ ಮಾತ್ರವಲ್ಲದೆ, ಬೇರೆ ಬೇರೆ ಕಡೆಗಳಲ್ಲಿ ಉದ್ಯೋಗ ಅವಕಾಶಗಳನ್ನು ಹುಡುಕಬೇಕು. ಸ್ಥಳೀಯರಿಗೆ ಉದ್ಯೋಗ ಕೊಡಿಸುವಲ್ಲಿ ನಾವು ನಮ್ಮ ಪ್ರಯತ್ನವನ್ನು ಮುಂದುವರಿಸುತ್ತೇವೆ. ಅಗತ್ಯವಾದಲ್ಲಿ ಈ ಭಾಗದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವರು ಹೇಳಿದರು. ಸಂಡೂರು ವಿಧಾನಸಭೆ ಕ್ಷೇತ್ರದ ಶಾಸಕರಾದ ಈ.ಅನ್ನಪೂರ್ಣ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಡೂರು ತಾಲ್ಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ತಾಲೂಕಿನ ಒಟ್ಟು 175 ಶಾಲೆಗಳ ಪೈಕಿ 65 ಶಾಲೆಗಳನ್ನು ‘ಮಾದರಿ ಶಾಲೆ'ಗಳನ್ನಾಗಿ ರೂಪಿಸಲಾಗಿದೆ. ಉಳಿದ 110 ಶಾಲೆಗಳ ಅಭಿವೃದ್ಧಿಗಾಗಿ ಈಗಾಗಲೇ ರೂಪರೇಷೆಗಳನ್ನು ಸಿದ್ಧಪಡಿಸಲಾಗಿದೆ. ಅಂಗನವಾಡಿಯಿಂದ ಸ್ನಾತಕೋತ್ತರ ಪದವಿಯವರೆಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.  

ತಾಳೂರು ಗ್ರಾಮದ ಶಾಲೆಯನ್ನು ಪಿಯು ಕಾಲೇಜಿಗೆ ಮೇಲ್ದರ್ಜೆಗೇರಿಸಲಾಗಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ತರಗತಿಗಳು ಆರಂಭವಾಗಿವೆ. ಮುಂದಿನ ವರ್ಷದಿಂದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ‘ಮೈನಿಂಗ್ ಡಿಪ್ಲೊಮಾ' ಕಾಲೇಜು ಹಾಗೂ ಸಂಡೂರಿನಲ್ಲಿ ಹೊಸದಾಗಿ ನಸಿಂರ್ಗ್ ಕಾಲೇಜು ಪ್ರಾರಂಭವಾಗಲಿದೆ. ಶೈಕ್ಷಣಿಕ ಸುಧಾರಣೆಯ ಫಲವಾಗಿ ಸಂಡೂರು ತಾಲೂಕು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು. 

ತಾಲ್ಲೂಕಿನ ಸುಶೀಲಾನಗರ, ದರೋಜಿ, ಯಶವಂತನಗರ ಮತ್ತು ಕುರೆಕುಪ್ಪ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ತೋರಣಗಲ್ಲು ಮತ್ತು ಚೋರನೂರು ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ತಾಲೂಕಿನ ಎಲ್ಲಾ ಹಳ್ಳಿಗಳಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ದಾರಿ ಮಾಡಿಕೊಡಲಾಗಿದೆ ಎಂದರು. ಸಂಡೂರಿನ ಅಭಿವೃದ್ಧಿಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ತುಕಾರಾಮ್ ಸಹಕಾರವಿದೆ. ಸಂಡೂರನ್ನು ‘ಹಿಂದುಳಿದ ತಾಲೂಕು' ಎಂಬ ಹಣೆಪಟ್ಟಿಯಿಂದ ಮುಕ್ತಗೊಳಿಸಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಸಂಕಲ್ಪವನ್ನು ಹೊಂದಲಾಗಿದೆ ಎಂದು ಒತ್ತಿ ಹೇಳಿದರು. 

ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಮಾತನಾಡಿ, ಎರಡನೇ ಸಂಡೂರು ಸಂಕಲ್ಪ ಸಮರಾ​‍್ಣ ಸಮಾವೇಶ ಈ ಕಾರ್ಯಕ್ರಮವು ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ವ್ಯವಸ್ಥೆ ಮತ್ತು ಕಳೆದ ಎರಡು ದಶಕಗಳಲ್ಲಿ ಸಂಡೂರು ತಾಲ್ಲೂಕಿನಲ್ಲಿ ನಡೆದ ಅಭಿವೃದ್ಧಿ ಪಥವನ್ನು ಬಿಂಬಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು. ಸಂಡೂರಿನ ಸರ್ವತೋಮುಖ ಅಭಿವೃದ್ಧಿಗೆ 2004ರಲ್ಲಿಯೇ ಅಡಿಪಾಯ ಹಾಕಲಾಯಿತು. 2004ರಲ್ಲಿ ಮೊದಲ ಬಾರಿಗೆ ಶಾಸಕರಾದ ನಂತರ, ಸಂಡೂರಿನ ಮೂಲಭೂತ ಸೌಕರ್ಯಗಳಾದ ಶಿಕ್ಷಣ, ಆರೋಗ್ಯ, ರಸ್ತೆ ಮತ್ತು ನೀರಾವರಿ ಕ್ಷೇತ್ರಗಳಿಗೆ ಹೊಸ ಚೈತನ್ಯ ನೀಡಿದರು. ಕ್ಷೇತ್ರದ ಅಭಿವೃದ್ಧಿಯನ್ನು ‘ನಂದಾದೀಪ’ ಮತ್ತು ‘ನಾಂದಿ’ಯಂತೆ ಮುಂದುವರಿಸಿಕೊಂಡು ಬರಲಾಗುತ್ತಿದೆ. ಶಾಸಕರಾದ ಅನ್ನಪೂರ್ಣ ಅವರು ಸಹ ಇದೇ ಹಾದಿಯಲ್ಲಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. 

ಆರೋಗ್ಯ ಸೇವೆಗಳು ತಲುಪಿಸಲು ಕ್ಲಿನಿಕ್ ಆನ್ ವೀಲ್ಸ್‌ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಎನ್ನಬಹುದಾದ ರೀತಿಯಲ್ಲಿ, 13 ಸಂಚಾರಿ ವಾಹನಗಳ ಮೂಲಕ ಜನರ ಮನೆಬಾಗಿಲಿಗೆ ಚಿಕಿತ್ಸೆ ನೀಡಲಾಗುತ್ತಿದೆ. 2020 ರಿಂದ ಈವರೆಗೆ ಸುಮಾರು 8,30,000 ಜನರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗಿದೆ. ವಾರ್ಷಿಕವಾಗಿ ಸರಾಸರಿ 1.60 ಲಕ್ಷ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.  

ಈ ಭಾಗದ ಕೋಡಾಲು, ಭುಜಂಗನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು 76 ಕೋಟಿ ರೂ. ವೆಚ್ಚದ ಯೋಜನೆ ಜಾರಿಯಲ್ಲಿದೆ. ತೋರಣಗಲ್ಲು ಮತ್ತು ದರೋಜಿ ಭಾಗದ ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ನೀರು ತರಲು 125 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯುತ್ತಿದೆ. ಬನ್ನಹಟ್ಟಿ ಮತ್ತು ವಿಠಲಾಪುರ ಭಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮತ್ತು ಕೆರೆ ತುಂಬಿಸುವ ಯೋಜನೆಗಳಿಗಾಗಿ ಒಟ್ಟು 250 ಕೋಟಿ ರೂ. ವ್ಯಯಿಸಲಾಗಿದೆ. ನಾರಾಯಣಪುರ - ರಾಜಾಪುರ ರಸ್ತೆ ಸುಮಾರು 32 ಕೋಟಿ ರೂ. ವೆಚ್ಚದಲ್ಲಿ ಈ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ವಡ್ಡು ಬೈಪಾಸ್ ರಸ್ತೆ ರೈಲ್ವೆ ಗೇಟ್ ಸಮಸ್ಯೆ ನಿವಾರಿಸಲು 65 ಕೋಟಿ ರೂ. ವೆಚ್ಚದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಚಿತ್ರಣ ಬಿಚ್ಚಿಟ್ಟರು. 

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಡಿ ಸಂಡೂರು ತಾಲೂಕಿಗೆ ಮಾತ್ರ ಸುಮಾರು 660 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತಿದೆ. ನಂಜುಂಡಪ್ಪ ವರದಿ ಮತ್ತು ಗೋಪಾಲ್ ಗೌಡರ ಸಮಿತಿಯ ಆಶಯದಂತೆ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಸಂಡೂರನ್ನು ಮೊದಲ ಸ್ಥಾನಕ್ಕೆ ತರುವ ಸಂಕಲ್ಪ ಮಾಡಲಾಗಿದೆ ಎಂದರು. 

ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಅ.ಶಿಂಧಿಹಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಸಂಘಟಿತ ವಲಯದ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರವು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಸಚಿವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಕಲ್ಯಾಣ ಮಂಡಳಿಯು ಕಾರ್ಮಿಕರ ಕನಸುಗಳಿಗೆ ಆಸರೆಯಾಗಿ ನಿಂತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮೋಟಾರ್ ಸಾರಿಗೆ ಮತ್ತು ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಯಿತು ಹಾಗೂ ಸಂಡೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೊಳಿಸಲಾಯಿತು. ಫಲಾನುಭವಿಗಳಿಗೆ ಸೌಲಭ್ಯ ಹಂಚಿಕೆ ಮತ್ತು ವಿವಿಧ ಸಾಧಕರಿಗೆ ಸನ್ಮಾನಿಸಲಾಯಿತು.