ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಅರಿವು ಅಗತ್ಯ: ಇ.ವೆಂಕಟಯ್ಯ

ಬೆಳಗಾವಿ 01 : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಕಠಿಣವಾಗಿದ್ದು, ಗಂಭೀರ ಪರಿಣಾಮ ಬಿರುವಂತಹದಾಗಿದೆ. ಆದಕಾರಣ ದೂರಿಗೆ ಸಂಬಂಧಿಸಿ ವಾಸ್ತವಾಂಶಗಳನ್ನು ಪರ್ಯಾಲೋಚಿಸಿ ಈ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಹಾಗಾಗಿ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಅರಿವು ಪ್ರತಿ ಅಧಿಕಾರಿಗಳು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಎಸ್‌.ಸಿ.ಎಸ್‌.ಪಿ. ಹಾಗೂ ಟಿ.ಎಸ್‌.ಪಿ. ಸಲಹೆಗಾರರಾದ ನಿವೃತ್ತ ಐ.ಎ.ಎಸ್‌. ಅಧಿಕಾರಿ ಇ.ವೆಂಕಟಯ್ಯ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಸೆ.30) ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ ಅನುಷ್ಠಾನ ಕುರಿತು ಆಯೋಜಿಸಲಾದ ಅಧಿಕಾರಿಗಳ ಅರಿವು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ದೌರ್ಜನ್ಯ ಪ್ರಕರಣಗಳು ಸಾಮಾನ್ಯವಾಗಿ ತಡವಾಗಿ ಬೆಳಕಿಗೆ ಬರುತ್ತವೆ. ದೌರ್ಜನ್ಯ ಪ್ರಕರಣಗಳು ನಡೆದಾಗ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಆದರೆ ದೌರ್ಜನ್ಯ ಪ್ರಕರಣಗಳಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸುವುದರಿಂದ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶ ಇರುತ್ತದೆ. ಕೆಲವು ಪ್ರಕರಣಗಳಲ್ಲಿ ಆರೋಪಿ ವಿಚಾರಣಾಧೀನ ಕೈದಿಯಾಗಿರುತ್ತಾನೆ. ಅಂತಹ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ದೋಷಾರೋಪ ಪಟ್ಟಿ(ಚಾರ್ಜ್‌ಶೀಟ್) ಸಲ್ಲಿಸಬೇಕು ಎಂದು ಅವರು ತಿಳಿಸಿದರು. 

ಸಾರ್ವಜನಿಕರಿಂದ ದೂರು ಬಂದರೆ ದಾಖಲಿಸಿಕೊಂಡು ಕೂಡಲೇ ತನಿಖೆ ಕೈಗೊಳ್ಳಬೇಕು. ಒಂದುವೇಳೆ ದೌರ್ಜನ್ಯ ಪ್ರಕರಣದಲ್ಲಿ ಅಧಿಕಾರಿಗಳು ವಿಳಂಬ ತೋರಿದರೆ ಬೇಜವಾಬ್ದಾರಿ ಮತ್ತು ಕರ್ತವ್ಯ ಲೋಪವಾಗಲಿದೆ ಅಂತಹವರ ವಿರುದ್ಧ ಕ್ರಮವಾಗಬಹುದು ಎಂದು ಹೇಳಿದರು.ಪ್ರಕರಣಗಳ ತನಿಖೆ ಚುರುಕುಗೊಳಿಸಿ: 

ರಾಜ್ಯದಲ್ಲಿ ಪ್ರತಿ ವರ್ಷ ಅಂದಾಜು ಎರಡು ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಇದರಲ್ಲಿ 80 ಕ್ಕೂ ಅಧಿಕ ಕೊಲೆ, 200 ಅಧಿಕ ಅಧಿಕ ಅತ್ಯಾಚಾರ ಪ್ರಕರಣಗಳಿವೆ. ಕಾಯ್ದೆಯು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕೆಂದರೆ ಪ್ರಕರಣಗಳ ತನಿಖೆಗಳು ಚುರುಕಾಗಿ ಸಾಗಬೇಕು. ದೌರ್ಜನ್ಯ ತಡೆಗೆ ಎಲ್ಲ ಅಧಿಕಾರಿಗಳು ಕಾಯ್ದೆ ಪರಿಣಾಮಕಾರಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. 

ಸಮಾಜ ಕಲ್ಯಾಣ ಇಲಾಖೆಯಿಂದ ದೌರ್ಜನ್ಯ ಪ್ರಕರಣಗಳಲ್ಲಿ ಸಹ ಪರಿಹಾರ ವಿತರಣೆಯಲ್ಲಿ ವಿಳಂಬ ತೋರಬಾರದು. ಜಾತಿ ನಿಂದನೆ, ಧಾರ್ಮಿಕ ಕ್ಷೇತ್ರ, ದೇವಸ್ಥಾನ, ಪೂಜಾ ಸ್ಥಳಗಳಲ್ಲಿ ಪ್ರವೇಶ ನಿಬಂರ್ಧ, ಧಾರ್ಮಿಕ ಸೇವೆ ಮಾಡುವುದನ್ನು ತಡೆಯುವುದು. ಕೆರೆ, ಬಾವಿ, ಕೊಳವೆ ನೀರು ಬಳಕೆಗೆ ನಿಷೇಧ ಹೇರುವ ದೂರುಗಳು ಕಂಡು ಬಂದಲ್ಲಿ ತಕ್ಷಣವೇ ಅಂತಹವರ ವಿರುದ್ಧ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು.  

ದೇಶದ ಬೇರೆಬೇರೆ ರಾಜ್ಯಗಳಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆ ಅನುಷ್ಠಾನಕ್ಕೆ ವಿಶೇಷ ಪೊಲೀಸ್ ಠಾಣೆಗಳು ಕಾರ್ಯ ನಿರ್ವಹಿಸುತ್ತವೆ. ಮುಂದಿನ ದಿನಮಾನಗಳಲ್ಲಿ ಇಂತಹ ವಿಶೇಷ ಪೊಲೀಸ್ ಠಾಣೆಗಳು ನಮ್ಮ ರಾಜ್ಯದಲ್ಲಿ ಪ್ರಾರಂಭವಾಗಲಿವೆ. ಹಾಗಾಗಿ ಪ್ರತಿಯೊಬ್ಬರೂ ಕಾಯ್ದೆಯ ಅರಿವು ಪಡೆದುಕೊಳ್ಳಬೇಕು ಎಂದು ನಿವೃತ್ತ ಐ.ಎ.ಎಸ್‌. ಅಧಿಕಾರಿ ಇ.ವೆಂಕಟಯ್ಯ ಅವರು ಮಾಹಿತಿ ನೀಡಿದರು. 

ಮಾದರಿ ಜಿಲ್ಲೆಗೆ ಸಾರ್ವಜನಿಕರ ಸಹಕಾರ ಅಗತ್ಯ: 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ 130 ರಿಂದ 140 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಆದರೆ ಯಾವುದೇ ಪ್ರಕರಣಗಳಲ್ಲಿ ಆರೋಪ ಸಾಬೀತಾಗಿ ಶಿಕ್ಷೆ ಆಗಿರುವುದಿಲ್ಲ. ಹೀಗಾಗಿ ತನಿಖೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಇನ್ನಷ್ಟು ಇಂತಹ ಅರಿವು ಕಾರ್ಯಗಾರಗಳು ಆಯೋಜಿಸುವ ಅವಶ್ಯಕತೆಯಿದೆ ಎಂದು ಹೇಳಿದರು. 

ಇಂತಹ ಪ್ರಕರಣಗಳು ಕೇವಲ ಅಧಿಕಾರಿಗಳಿಂದ ಮಾತ್ರ ನಿಯಂತ್ರಣಕ್ಕೆ ಬರುವುದಿಲ್ಲ. ಹಾಗಾಗಿ ಸಾರ್ವಜನಿಕರು ಇದಕ್ಕೆ ಪೂರಕವಾಗಿ ಸ್ಪಂದಿಸಬೇಕು. ಬೆಳಗಾವಿ ಜಿಲ್ಲೆ ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿದೆ. ಮುಂದಿನ ದಿನಗಳಲ್ಲಿ ದೌರ್ಜನ್ಯ ಪ್ರಕರಣಗಳ ನಿಯಂತ್ರಣದ ಮೂಲಕ ನಮ್ಮ ಜಿಲ್ಲೆ ಮಾದರಿಯಾಗಬೇಕು ಡಾ. ಭೀಮಾಶಂಕರ ಗುಳೇದ ಅವರು ಹೇಳಿದರು.ಇಂತಹ ಪ್ರಕರಣಗಳಲ್ಲಿ ಪೊಲೀಸರು ಕೂಡ ಸಾಮಾನ್ಯವಾಗಿ ಎಫ್‌ಐಆರ್ ದಾಖಲಿಸಲು ಹಿಂದೇಟು ಹಾಕುತ್ತಾರೆ. ಒಂದುವೇಳೆ ದೂರು ಬಂದರೆ ಎಫ್‌ಐಆರ್ ದಾಖಲಿಸುವ ಮುನ್ನ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಬೇಕು. ಹಾಗಾಗಿ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಅರಿವು ಎಲ್ಲ ಅಧಿಕಾರಿಗಳಿಗೆ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ ಅವರು ತಿಳಿಸಿದರು. 

ಸರ್ಕಾರಿ ಅಭಿಯೋಜಕರಾದ ಆರ್‌.ಜಿ ದೇವರೆಡ್ಡಿ, ಬೆಳಗಾವಿ ನಿವೃತ್ತ ಸರ್ಕಾರಿ ಅಭಿಯೋಜಕ ಎಂ.ಎಲ್ ಕುಲಕರ್ಣಿ ಅವರು, ದೌರ್ಜನ್ಯ ನಿಯಂತ್ರಣ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಸವಾಲುಗಳು, ಅಸ್ಪ್ರಶ್ಯತೆ ನಿವಾರಣೆಯಲ್ಲಿ ಅಧಿಕಾರಿಗಳ ಪಾತ್ರ ಹಾಗೂ ಸರ್ವ ಸಮುದಾಯಗಳ ಜವಾಬ್ದಾರಿ, ಜಿಲ್ಲೆಯಲ್ಲಿ ಪ್ರಸ್ತುತ ದೌರ್ಜನ್ಯ ನಿಯಂತ್ರಣ ಪ್ರಕರಣಗಳ ಕುರಿತು ಸ್ಥಿತಿಗತಿ ಕುರಿತು ಮಾಹಿತಿ ನೀಡಿದರು. 

ಕರಪತ್ರ ಬಿಡುಗಡೆ: 

ಇದಕ್ಕೂ ಮುಂಚೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು ಬಳಿಕ ನಿವೃತ್ತ ಐ.ಎ.ಎಸ್‌. ಅಧಿಕಾರಿ ಇ.ವೆಂಕಟಯ್ಯ ಅವರು ದೌರ್ಜನ್ಯ ಪ್ರತಿಬಂಧ ಅಧಿನಿಯಮ-1989, ನಾಗರಿಕ ಹಕ್ಕು ಸಂರಕ್ಷಣಾ   ಅಧಿನಿಯಮ-1955, ಮ್ಯಾನ್ಯುವಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಅಧಿನಿಯಮ-2013 ಮಾಹಿತಿಯಿರುವ ಮಾನವ ಕುಲಂ ತಾನೊಂದೆ ವಲಂ ಎಂಬ ಕರಪತ್ರ ಬಿಡುಗಡೆ ಮಾಡಿದರು. 

ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ದೌರ್ಜನ್ಯ ನಿಯಂತ್ರಣ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಕರೆಪ್ಪಗುಡೆನ್ನವ, ಬಸವರಾಜ ಆಯಟ್ಟಿ, ಉಪವಿಭಾಗಿಯ ನಾಮ ನಿರ್ದೇಶಿತ ಸದಸ್ಯರು, ಎಲ್ಲ ತಹಶೀಲ್ದಾರಗಳು, ಪೊಲೀಸ್ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳು ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.