ಬುಡಕಟ್ಟು ಸಮುದಾಯಗಳನ್ನು ಸಬಲೀಕರಣಗೊಳಿಸಲು ಅಧಿಕಾರಿಗಳು ಶ್ರಮವಹಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬುಡಕಟ್ಟು ಸಮುದಾಯಗಳನ್ನು ಸಬಲೀಕರಣಗೊಳಿಸಲು ಅಧಿಕಾರಿಗಳು ಶ್ರಮವಹಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ Officials should work hard to empower tribal communities:DC Prashant Kumar Mishra

ಬಳ್ಳಾರಿ  12: ಜಿಲ್ಲೆಯಲ್ಲಿನ ಬುಡಕಟ್ಟು ಸಮುದಾಯಗಳನ್ನು ಸಬಲೀಕರಣಗೊಳಿಸಿ, ಅವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. 

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಮಾಸ್ಟರ್ ತರಬೇತುದಾರರಿಗೆ ಮಂಗಳವಾರ ಆಯೋಜಿಸಿದ್ದ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ “ಆದಿ ಕರ್ಮಯೋಗಿ ಅಭಿಯಾನ” ಎಂಬ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. 

ಬುಡಕಟ್ಟು ಪ್ರದೇಶದಲ್ಲಿ ಕೆಲಸ ನಿರ್ವಹಿಸುವ ಜನರಿಗೆ ತ್ವರಿತಗತಿಯಲ್ಲಿ ಅವರ ಬೇಡಿಕೆಗಳಿಗೆ ಸ್ಪಂದಿಸಿ, ಉತ್ತಮ ಆಡಳಿತ ನೀಡಬೇಕು. ಇದರಿಂದ ಸಮಾಜ ಪರಿವರ್ತನೆಯ ಜತೆಗೆ ದೇಶದ ಅಭಿವೃದ್ಧಿ ಸಹ ಸಾಧ್ಯವಾಗುತ್ತದೆ ಎಂದರು. 

ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಆದಿ ಕರ್ಮಯೋಗಿ ಕೇವಲ ಒಂದು ಕಾರ್ಯಕ್ರಮವಲ್ಲ ಇದು ದೇಶದ ಬುಡಕಟ್ಟು ಸಮಾಜಕ್ಕೆ ಸಂಬಂಧಿಸಿದ ಹೊಸ ಚಿಂತನೆಯಾಗಿದೆ. ವಿವಿಧ ಯೋಜನೆಗಳನ್ನು ತಲುಪಿಸುವುದು ಮತ್ತು ಜನರ ಕೌಶಲ್ಯಗಳನ್ನು ಉತ್ತೇಜಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು. 

ರಾಜ್ಯ ಸರ್ಕಾರವು ಅವರಿಗೆ ಸೌಲಭ್ಯ ತಲುಪಿಸಲು ತರಬೇತಿ ಕೇಂದ್ರಗಳು ಮತ್ತು ಪಂಚಾಯತ್ ಮಟ್ಟದ ಸೌಲಭ್ಯಗಳ ಮೂಲಕ ಈ ಅಭಿಯಾನಕ್ಕೆ ಸಹಾಯ ಮಾಡುತ್ತದೆ. ಸ್ಥಳೀಯ ಕಾರ್ಮಿಕರಿಗೆ ತರಬೇತಿ ನೀಡುವ ಮೂಲಕ ಗ್ರಾಮ ಮಟ್ಟದಲ್ಲಿ ಸೌಲಭ್ಯ ತಲುಪಿಸಲು ಅಧಿಕಾರಿಗಳು ಆಸಕ್ತಿ ವಹಿಸಬೇಕು ಎಂದರು. 

ಬುಡಕಟ್ಟು ನಾಗರಿಕರಿಗೆ ಅಗತ್ಯ ಸೇವೆಗಳನ್ನು ನೇರವಾಗಿ ಮತ್ತು ಪರಿಣಾಮಕಾರಿಯಾಗಿ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ಅಭಿಯಾನದ ಉದ್ದೇಶವಾಗಿದ್ದು, ಮೂಲಭೂತ ಸೌಲಭ್ಯಗಳು ಹಾಗೂ ಸರ್ಕಾರಿ ಯೋಜನೆಗಳನ್ನು ಹಳ್ಳಿಗಳಿಗೆ ಕೊಂಡೊಯ್ಯುವಲ್ಲಿ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ಹೇಳಿದರು. 

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು ಅವರು ಪ್ರಾಸ್ತವಿಕವಾಗಿ ಮಾತನಾಡಿ,   ಕೇಂದ್ರ ಸರ್ಕಾರದ ಆಶಯದಂತೆ ಪರಿಶಿಷ್ಟ ಪಂಗಡದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಎಲ್ಲಾ ಅಗತ್ಯ ಮೂಲಸೌಲಭ್ಯಗಳಾದ ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರಸ್ತೆ, ಇತರೆ ಸೌಲಭ್ಯಗಳನ್ನು ಆಯ್ಕೆಯಾದ ಗ್ರಾಮಗಳಲ್ಲಿ ಅಭಿವೃದ್ಧಿಪಡಿಸಿ ಪರಿಶಿಷ್ಟ ವರ್ಗದ ಜನರ ಶ್ರೇಯೋಭಿವೃದ್ಧಿ ಮಾಡುವುದು ಈ ಆದಿ ಕರ್ಮಯೋಗಿ ಅಭಿಯಾಮದ ಉದ್ದೇಶವಾಗಿದೆ ಎಂದು ಹೇಳಿದರು. 

ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಾಗಿರುವ ಬಳ್ಳಾರಿ ತಾಲ್ಲೂಕಿನ 10 ಗ್ರಾಮಗಳು, ಕಂಪ್ಲಿ ತಾಲ್ಲೂಕಿನ 21 ಗ್ರಾಮಗಳು, ಕುರುಗೋಡು ತಾಲ್ಲೂಕಿನ 03 ಗ್ರಾಮಗಳು, ಸಂಡೂರು ತಾಲ್ಲೂಕಿನ 20 ಗ್ರಾಮಗಳು, ಸಿರುಗುಪ್ಪ ತಾಲ್ಲೂಕಿನ 05 ಗ್ರಾಮಗಳ ಸೇರಿ ಒಟ್ಟು 59 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಈ ಗ್ರಾಮಗಳಲ್ಲಿ ಈಗಾಗಲೇ ಜನಭಾಗೀಧಾರಿ ಕಾರ್ಯಕ್ರಮ ಯೋಜನೆಯ ಬಗ್ಗೆ ಪ್ರಚಾರ ಮಾಡಲಾಗಿದೆ ಎಂದರು. 

ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ತರಬೇತುದಾರರಿಗೆ ತರಬೇತಿಯನ್ನು ನೀಡಲಾಗಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮೂರು ದಿನಗಳ ಕಾಲ ತರಬೇತಿಯನ್ನು ನೀಡಿ, ಅಧಿಕಾರಿಗಳು ಆದಿ ಕರ್ಮಯೋಗಿಗಳಾಗಿ ಧರ್ತಿ ಆಭಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಪ್ರಾದೇಶಿಕ ವಿಭಾಗದ ಉಪ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.