ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗಕ್ಕೆ ಅಧಿಕಾರಿಗಳ ಭೇಟಿ: ಆರೋಗ್ಯ ಜಾಗೃತಿ ಮೂಡಿಸಿದ ಅಧಿಕಾರಿಗಳು

ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗಕ್ಕೆ ಅಧಿಕಾರಿಗಳ ಭೇಟಿ: ಆರೋಗ್ಯ ಜಾಗೃತಿ ಮೂಡಿಸಿದ ಅಧಿಕಾರಿಗಳು Officials visit Maternal and Child Health Department; raise health awareness

   ಬಳ್ಳಾರಿ 07: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್‌. ಬಸರೆಡ್ಡಿ, ಬಳ್ಳಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಆರ್‌. ಅಬ್ದುಲ್ಲಾ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ. ಪೂಜಾರ್ ಅವರು ಮಂಗಳವಾರ ಜಂಟಿಯಾಗಿ ಭೇಟಿ ನೀಡಿ ಪರೀಶೀಲನೆ ನಡೆಸಿದರು.  ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿದ್ದ ತಾಯಂದಿರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು, ಗರ್ಭಿಣಿಯರು, ಬಾಣಂತಿಯರು ಹಾಗೂ ನವಜಾತ ಶಿಶುಗಳ ಆರೈಕೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ವಹಿಸುವಂತೆ ಸಲಹೆ ನೀಡಿದರು.  

ಗರ್ಭಾವಸ್ಥೆ ಮತ್ತು ಹೆರಿಗೆಯ ನಂತರ ತಾಯಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಮಗುವಿನ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಆದ್ದರಿಂದ ತಾಯಂದಿರು ಪ್ರೋಟೀನ್, ಕ್ಯಾಲ್ಸಿಯಂ, ಕಬ್ಬಿಣಾಂಶ ಹಾಗೂ ಫೋಲಿಕ್ ಆಮ್ಲ ಹೆಚ್ಚಿರುವ ಹಸಿರು ತರಕಾರಿ, ಹಾಲು, ಮೊಟ್ಟೆ, ಧಾನ್ಯಗಳು ಮತ್ತು ಹಣ್ಣುಗಳನ್ನು ಹೆಚ್ಚು ಸೇವಿಸಬೇಕು. ಪ್ರತಿದಿನ 2 ರಿಂದ 3 ಲೀಟರ್ ನೀರು ಕುಡಿಯಬೇಕು. ಕನಿಷ್ಠ 7 ರಿಂದ 9 ಗಂಟೆಗಳ ಉತ್ತಮ ನಿದ್ರೆ ಪಡೆಯಬೇಕು ಎಂದು ತಿಳಿಸಿದರು.  ವೈದ್ಯರ ಸಲಹೆಯಿಲ್ಲದೆ ಯಾವುದೇ ಓಷಧಿಗಳನ್ನು ಸೇವಿಸಬಾರದು. ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಬೇಕು ಎಂದು ಎಚ್ಚರಿಸಿದರು.