ಮಾರ್ಗಸೂಚಿ ಪ್ರಕಾರ ಕೈಗಾರಿಕೆಗಳ ಆರಂಭಕ್ಕೆ ಅವಕಾಶ: ಸಚಿವ ಸುರೇಶ್ ಅಂಗಡಿ
ಬೆಳಗಾವಿ, ಏ.29,ಎರಡನೇ ಹಂತದ ಲಾಕ್ಡೌನ್ ಮುಗಿಯುವ ಮೇ 3 ರ ಬಳಿಕ ಕೇಂದ್ರ ಸರ್ಕಾರ ಕೈಗೊಳ್ಳಲಿರುವ ತೀರ್ಮಾನ ಹಾಗೂ ಮಾರ್ಗಸೂಚಿ ಆಧರಿಸಿ ಕೈಗಾರಿಕೆಗಳನ್ನು ಆರಂಭಿಸಲು ಅನುವು ಮಾಡಿಕೊಡಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ ನೀಡಿದ್ದಾರೆ.ನಗರದ ಉದ್ಯಮಭಾಗದ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ಬುಧವಾರ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮೇ 3ಕ್ಕೆ ಲಾಕ್ಡೌನ್ ಮುಗಿದ ಬಳಿಕ ನಮಗೆ ಕೈಗಾರಿಕೆಗಳನ್ನು ಆರಂಭಿಸಲು ಅವಕಾಶ ನೀಡಬೇಕು ಎಂದು ಕೈಗಾರಿಕೋದ್ಯಮಿಗಳು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಅವರು, ಮುಂಬರುವ ದಿನಗಳಲ್ಲಿ ಕಾರ್ಮಿಕರು-ಕೈಗಾರಿಕೋದ್ಯಮಿಗಳು ಮತ್ತು ಉತ್ಪಾದನೆ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಉಂಟಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಮಾತನಾಡಿದ ಕೈಗಾರಿಕೋದ್ಯಮಿಗಳು, ಕೊರೊನಾ ಭೀತಿಯಿಂದ ಕಾರ್ಮಿಕರು ತಮ್ಮ ತಮ್ಮ ಊರು ಹಾಗೂ ರಾಜ್ಯಗಳಿಗೆ ಹಿಂದಿರುಗುತ್ತಿದ್ದಾರೆ. ಒಮ್ಮೆ ಹೀಗೆ ಕಾರ್ಮಿಕರು ಹೋದರೆ ನಂತರದ ದಿನಗಳಲ್ಲಿ ತಕ್ಷಣವೇ ಕೈಗಾರಿಕೆ ಪುನರಾರಂಭಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕೈಗಾರಿಕೆ ಆರಂಭಿಸಲು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಸರ್ಕಾರದ ಮಾರ್ಗಸೂಚಿ ಪ್ರಕಾರ ಕೈಗಾರಿಕೆಗಳನ್ನು ಆರಂಭಿಸಲು ತಾವು ಸಿದ್ಧರಿದ್ದು, ಕಾರ್ಮಿಕರಿಗೆ ಪಾಸ್ ಮತ್ತು ಉದ್ಯಮಕ್ಕೆ ಅಗತ್ಯವಿರುವ ಕಚ್ಚಾ ವಸ್ತುಗಳನ್ನು ಪೂರೈಸಬೇಕು ಎಂದು ಕೋರಿದರು.
ಸೋಂಕು ಪತ್ತೆಯಾಗಿರುವ ಪ್ರದೇಶದಿಂದ ಕೈಗಾರಿಕೆಗಳು ದೂರದಲ್ಲಿವೆ. ಆದ್ದರಿಂದ ಕೈಗಾರಿಕೆಗಳು ಹಾಗೂ ಕಾರ್ಮಿಕ ಹಿತದೃಷ್ಟಿಯಿಂದ ಕೈಗಾರಿಕೆ ಆರಂಭಿಸಲು ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು.
ಕಾರ್ಮಿಕರ ಆರೋಗ್ಯ, ಊಟ-ವಸತಿ ಮತ್ತು ಇತರೆ ಮೂಲಸೌಕರ್ಯಗಳನ್ನು ಒದಗಿಸುವುದು ಆಯಾ ಕೈಗಾರಿಕೋದ್ಯಮಿಗಳ ಹೊಣೆಯಾಗಿರಲಿದೆ ಎಂದು ವಿವರಿಸಿದರು. ಶಾಸಕರಾದ ಅಭಯ್ ಪಾಟೀಲ್, ಅನಿಲ ಬೆನಕೆ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಜಿಲ್ಲಾ ಕೊವಿಡ್-19 ನೋಡಲ್ ಅಧಿಕಾರಿ ರಾಜೇಂದ್ರ ಚೋಳನ್, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 