ಜೀವಸಂಕುಲದ ಉಳಿವಿಗೆ ಗಿಡ ನೆಡಿ: ಸಂತೋಷ ಬಂಡೆ

ಜೀವಸಂಕುಲದ ಉಳಿವಿಗೆ ಗಿಡ ನೆಡಿ:  ಸಂತೋಷ ಬಂಡೆ  Plant trees for the survival of life forms: Santosh Bande

ಲೋಕದರ್ಶನ ವರದಿ 

ಇಂಡಿ 28 : ಗಿಡ ನೆಡಿ ಪರಿಸರ ಉಳಿಸಿ ಇದು ಭೂಮಿಯ ಮೇಲಿನ ಜೀವಸಂಕುಲದ ಉಳಿವಿಗೆ ಇರುವ ಏಕೈಕ ದಾರಿ. ಪ್ರತಿಯೊಬ್ಬರು ಗಿಡ ಬೆಳೆಸಿ, ಆರೈಕೆ ಮಾಡುವದು ಬಹು ಮುಖ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು. ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ವಿಶ್ವ ಪರಿಸರ ಸಂರಕ್ಷಣಾ ದಿನ ಮತ್ತು ಇಕೋ ಕ್ಲಬ್ ಅಡಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು. ವಿದ್ಯಾರ್ಥಿಗಳು ಹೆಚ್ಚು ಸಸಿನೆಟ್ಟು ಬೆಳೆಸುವ ಮೂಲಕ ನೆಲ-ಜಲ ಸಂರಕ್ಷಣೆ, ಜೀವ-ವೈವಿಧ್ಯ ಹಾಗೂ ನೀರಿನ ಸಂರಕ್ಷಣೆಯಂತಹ ಪರಿಸರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ನಮ್ಮೆಲ್ಲರ ಬದುಕಿಗೆ ಆಧಾರವಾಗಿರುವ ಪರಿಸರದ ರಕ್ಷಣೆಯ ಬಗ್ಗೆ ಮಕ್ಕಳಿಗೆ ತಿಳಿಹೇಳುವ ಮೂಲಕ ಅವರಲ್ಲಿ ಪರಿಸರ ಪ್ರೇಮ ಬೆಳೆಸುವ ಕಾರ್ಯಕ್ಕೆ ನಾವೆಲ್ಲರೂ ಮುಂದಾಗಬೇಕಿದೆ ಎಂದು ಹೇಳಿದರು. ಮುಖ್ಯ ಶಿಕ್ಷಕ ಕೆ ಐ ಮಕಾನದರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲಕಾಲಕ್ಕೆ ಮಳೆ ಬೆಳೆ ಆಗಬೇಕಿದ್ದರೆ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳಬೇಕು. ನಮ್ಮೆಲ್ಲರ ಉಸಿರಾದ ಪರಿಸರದ ಬಗ್ಗೆ ತಾತ್ಸಾರ ಮಾಡಬಾರದು. ಪ್ರತಿಯೊಂದು ಮನೆಯ ಮುಂದೆ ಗಿಡ ನೆಟ್ಟು ಬೆಳೆಸುವ ಪ್ರವೃತ್ತಿಯನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.