ಕಲಿಸಲು ಜಿಲ್ಲಾಡಳಿತದ ನೇತೃತ್ವದಲ್ಲಿ ಮಾ. 4 ರಂದು ಯುವ ಚೇತನ ಕಾರ್ಯಾಗಾರ
ಧಾರವಾಡ ಮಾರ್ಚ್ 03: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ವಿಶೇಷ ಆಸಕ್ತಿ ಮತ್ತು ಕಾಳಜಿಯಿಂದ ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಓದುತ್ತಿರುವ ಪದವಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಆಸಕ್ತಿಗೆ ಅನುಗುಣವಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲು ಧಾರವಾಡ ಜಿಲ್ಲೆಯ ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿ ಯುವ ಚೇತನ ಎಂಬ ವಿಶೇಷ ಕಾರ್ಯಕ್ರಮವನ್ನು ಮಾರ್ಚ 2025 ರಿಂದ ಆರಂಭಿಸಲಾಗುತ್ತಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಯುವ ಚೇತನ ಕಾರ್ಯಕ್ರಮದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತಾ ಕಾರ್ಯಾಗಾರಗಳ ಸರಣಿಯ ಉದ್ಘಾಟನೆಯು ನಾಳೆ ಮಾರ್ಚ 4 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೆ.ಸಿ.ಡಿ ಆವರಣದಲ್ಲಿರುವ ಸೃಜನಾ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿಷಯ ತಜ್ಞರಾದ ಪ್ರದೀಪ ಆಚಾರ್ಯ ಹಾಗೂ ಗುರುರಾಜ ಬುಲಬುಲೆ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಯುವ ಚೇತನ ಕಾರ್ಯಕ್ರಮದಲ್ಲಿ ಪ್ರತಿ ತಿಂಗಳು ತಜ್ಞರಿಂದ ವಿಶೇಷ ಉಪನ್ಯಾಸಗಳನ್ನು ಸಂಘಟಿಸಲಾಗುತ್ತದೆ. ವಸತಿ ನಿಲಯಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ವಿವಿಧ ಪರೀಕ್ಷೆಗಳ ಸಿದ್ಧತೆ ಕಲಿಸುವುದು. ಮತ್ತು ಪರೀಕ್ಷೆಗಳಿಗೆ ಪೂರಕವಾದ ವಿಷಯಗಳನ್ನು ಮನನ ಮಾಡುವುದು ಹಾಗೂ ಜಿಲ್ಲೆಯಲ್ಲಿರುವ ಐ.ಎ.ಎಸ್., ಐ.ಪಿ.ಎಸ್. ಮತ್ತು ಕೆ.ಎ.ಎಸ್. ಸೇರಿದಂತೆ ವಿವಿಧ ಕೇಡರ್ಗಳ ಅಧಿಕಾರಿಗಳಿಂದ ಉಪನ್ಯಾಸ ನೀಡುವ ಗುರಿಯನ್ನು ಹೊಂದಲಾಗಿದೆ.
ಯುವ ಚೇತನ ಮೊದಲ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ತಮ್ಮ ಅನುಭವ ಹಾಗೂ ಅಧ್ಯಯನ ವಿಧಾನವನ್ನು ವಿದ್ಯಾರ್ಥಿಗಳಿಗೆ ವಿವರಿಸಲಿದ್ದಾರೆ. ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಓದುವ ಮತ್ತು ವಿಷಯ ಮನನ ಮಾಡಿಕೊಳ್ಳುವ ಕಲೆಯನ್ನು ಕಲಿಸುವ ಸದುದ್ದೇಶ ಹೊಂದಲಾಗಿದೆ.