ಕಾರವಾರ 14: ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ಎಲ್ಲಾ ಸೇವೆಗಳನ್ನು ಮತ್ತು ವಿಮಾ ಯೋಜನೆಗಳನ್ನು ಸಾರ್ವಜನಿಕರಿಗೆ ಗರಿಷ್ಠ ಸಂಖ್ಯೆಯಲ್ಲಿ ಒದಗಿಸುವಂತೆ ಜಿಲ್ಲೆಯ ಎಲ್ಲಾ ಗ್ರಾಮ ಒನ್ ಕೇಂದ್ರಗಳ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಗ್ರಾಮ ಒನ್ ಕೇಂದ್ರಗಳಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬ್ರಾಂಡಿಂಗ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಅಂಚೆ ಇಲಾಖೆಯು ಈ ಹಿಂದಿನಂತೆ ಅಂಚೆ ಪತ್ರಗಳ ವಿತರಣೆಗೆ ಮಾತ್ರ ಸೀಮಿತವಾಗಿರದೇ, ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಸೇವೆಗಳನ್ನು ತ್ವರಿತಗತಿಯಲ್ಲಿ ಒದಗಿಸುತ್ತಿದೆ. ರಿಸರ್ವ್ ಬ್ಯಾಂಕ್ ಮೂಲಕ ಸಾರ್ವನಿಕರಿಗೆ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ಅನುಮತಿ ಪಡೆದಿದ್ದು, ಗ್ರಾಹಕರಿಗೆ ಅತ್ಯಂತ ವಿಶ್ವಾಸಾರ್ಹ ಸೇವೆಗಳನ್ನು ನೀಡುತ್ತಿದೆ, ಗ್ರಾಮ ಒನ್ ಮೂಲಕ ಈ ಸೇವೆಗಳನ್ನು ಇನ್ನಷ್ಟು ವಿಸ್ತರಿಸಲು ಈಗಾಗಲೇ ಒಪ್ಪಂದ ಮಾಡಿಕೊಂಡಿದೆ ಎಂದರು.
ರಾಜ್ಯ ಸರ್ಕಾರದ ವಿವಿಧ ಸೇವೆಗಳನ್ನು ಗ್ರಾಮೀಣ ಮಟ್ಟದಲ್ಲಿ ಒದಗಿಸುತ್ತಿರುವ ಗ್ರಾಮ ಒನ್ ಕೇಂದ್ರಗಳಿಗೆ ಗ್ರಾಮೀಣ ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತಿದ್ದು, ಅವರಿಗೆ ಅಂಚೆ ಇಲಾಖೆಯ ಬ್ಯಾಂಕ್ ಖಾತೆಗೆ ನೋಂದಣಿ, ಅತ್ಯಂತ ಕಡಿಮೆ ವೆಚ್ಚದ ಉತ್ತಮ ವಿಮಾ ಸೇವೆಗಳು, ಅಂಚೆ ಬ್ಯಾಂಕಿಂಗ್ ಸೇವೆಗಳು, ಸಾಲ ವಿತರಣೆ ಮುಂತಾದ ಯೋಜನೆಗಳ ಸೌಲಭ್ಯಗಳ ಕುರಿತು ಮಾಹಿತಿ ನೀಡುವಂತೆ ಮತ್ತು ಈ ಯೋಜನೆಗಳಿಗೆ ನೋಂದಣಿ ಮಾಡುವಂತೆ ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಸರ್ಕಾರದ ವಿವಿಧ ಯೋಜನೆಗಳ ಮೊತ್ತವನ್ನು ಫಲಾನುಭವಿಗಳಿಗೆ ಡಿಬಿಟಿ ಮೂಲಕ ಪಾವತಿ ಮಾಡಲಾಗುತ್ತಿದ್ದು, ಫಲಾನುಭವಿಗಳು ಪೋಸ್ಟ್ ಬ್ಯಾಂಕ್ ಖಾತೆಗಳನ್ನು ಶೂನ್ಯ ಆರಂಭಿಕ ಠೇವಣಿಯೊಂದಿಗೆ ಕೇವಲ 5 ನಿಮಿಷಗಳ ಒಳಗೆ ತಮ್ಮ ಡಿಬಿಟಿ ಖಾತೆಗಳನ್ನು ತೆರೆಯಬಹುದಾಗಿದೆ ಎಂದರು.ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ಎಲ್ಲಾ ಸೇವೆಗಳನ್ನು ಒದಗಿಸುತ್ತಿರುವ ಕುರಿತಂತೆ ಪ್ರತೀ ತಿಂಗಳು ಪರೀಶೀಲನೆ ನಡೆಸಲಾಗುವುದು ಎಂದ ಅಪರ ಜಿಲ್ಲಾಧಿಕಾರಿಗಳು ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಈ ಸೇವೆಗಳು ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಗ್ರಾಮ ಒನ್ ಕೇಂದ್ರಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ಪ್ರಾದೇಶಿಕ ಮುಖ್ಯಸ್ಥ ಜಗದೀಶ್ ಚಿಕ್ಕನರಗುಂದ ಮಾತನಾಡಿ, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಬ್ಯಾಂಕ್ ಆಗಿ ಗುರುತಿಸಿಕೊಂಡಿದ್ದು, ದೇಶದ ಪ್ರತೀ ಕುಗ್ರಾಮದಲ್ಲೂ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆ ಒದಗಿಸುವ ಉದ್ದೇಶ ಹೊಂದಿದ್ದು, ಈ ಬ್ಯಾಂಕ್ಗಳಲ್ಲಿ ಸಾಲ ಸೌಲಭ್ಯ ಕೂಡಾ ಪಡೆಯಬಹುದಾಗಿದೆ ಎಂದರು. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ವಲಯ ಅಧಿಕಾರಿ ಶಿಲ್ಪಾ ಮಾತನಾಡಿ, ಸಾರ್ವಜನಿಕರಿಗೆ ಪೋಸ್ಟ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಕೇಂದ್ರಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ಮತ್ತು ತರಬೇತಿಯನ್ನು ನೀಡಲಾಗುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ತರಬೇತಿ ನೀಡಲಾಗುವುದು ಎಂದರು.
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಉತ್ತರ ಕನ್ನಡ ಜಿಲ್ಲೆಯ ಹಿರಿಯ ಮೇನೇಜರ್ ಜೋಸ್ ಕುಮಾರ್ ಮಾತನಾಡಿ, ದೇಶದಲ್ಲಿ ಕೇವಲ 7 ವರ್ಷದಲ್ಲಿ 9.5 ಕೋಟಿಗೂ ಅಧಿಕ ಮಂದಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನಲ್ಲಿ ಖಾತೆ ತೆರೆದಿದ್ದು, ಈ ಖಾತೆಗಳಿಗೆ ಸರ್ಕಾರದ ವಿವಿಧ ಯೋಜನೆಗಳ 36 ಸಾವಿರ ಕೋಟಿ ರೂ ಗಳಿಗೆ ಆಧಿಕ ಮೊತ್ತವನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ. ಅತ್ಯಂತ ಕಡಿಮೆ ವೆಚ್ಚದ ವಿಮಾ ಯೋಜನೆಗಳ ಮೂಲಕ ಹಲವು ಮಂದಿಗೆ ತ್ವರಿತಗತಿಯಲ್ಲಿ ನೆರವು ಒದಗಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಮತ್ತು ಗ್ರಾಮ ಒನ್ ಕೇಂದ್ರದ ಬ್ರಾಂಡಿಂಗ್ ಬಿಡುಗಡೆ ಮತ್ತು ನೋಂದಣಿ ಪತ್ರ ಹಾಗೂ ಗುರುತಿನ ಚೀಟಿ ಹಂಚಿಕೆ ಮಾಡಲಾಯಿತು. ಗ್ರಾಮ ಒನ್ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಅತೀ ಹೆಚ್ಚು ಸರಕಾರಿ ಸೇವೆಗಳನ್ನು ಒದಗಿಸಿದ ಕೇಂದ್ರಗಳನ್ನು ಅಭಿನಂದಿಸಲಾಯಿತು.ಜಿಲ್ಲೆಯ ಎಲ್ಲಾ ಗ್ರಾಮ ಒನ್ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.