ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿ: ಶಾಸಕ ಶಿವಣ್ಣನವರ**

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿ: ಶಾಸಕ ಶಿವಣ್ಣನವರ**  Provide on-the-spot solutions to people's problems: MLA Shivannanavar

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿ: ಶಾಸಕ ಶಿವಣ್ಣನವರ**  

  ಬ್ಯಾಡಗಿ  12:   ಪ್ರಜಾಸೇವಾ ಕಾರ್ಯಕ್ರಮವು ಕೇವಲ ಉದ್ಘಾಟನೆ, ಭಾಷಣ ಹಾಗೂ ಅಧಿಕಾರಿಗಳ ಸಭೆಗೆ ಸೀಮಿತವಾಗದೆ, ಜನರ ಸಮಸ್ಯೆಗಳಿಗೆ ನೇರ ಪರಿಹಾರ ಒದಗಿಸುವ ನೈಜ ವೇದಿಕೆಯಾಗಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಅಧಿಕಾರಿಗಳಿಗೆ ಸೂಚಿಸಿದರು.  

ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯದಂತೆ ಹೋಬಳಿ ಹಾಗೂ ತಾಲೂಕು ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರು ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವ ಪರಿಸ್ಥಿತಿ ನಿವಾರಣೆಯಾಗಬೇಕು ಎಂದರು.  

ಜನರ ಅಹವಾಲುಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬೇಕು. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಡತಗಳ ವಿಲೇವಾರಿಗಿಂತ ಜನರ ಸಮಸ್ಯೆಗಳ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.  

ಕಂದಾಯ ಇಲಾಖೆಯಲ್ಲಿ ರೈತರಿಗೆ ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ರೈತರನ್ನು ಪದೇಪದೇ ಕಚೇರಿಗೆ ಅಲೆದಾಡಿಸಬಾರದು. ಅಧಿಕಾರಿಗಳು ನಿಷ್ಠೆಯಿಂದ ಸೇವೆ ಸಲ್ಲಿಸಿದರೆ ಸಾರ್ವಜನಿಕರಿಗೆ ಸಮಸ್ಯೆಗಳು ಎದುರಾಗುವುದಿಲ್ಲ ಎಂದರು.  

ರೈತರು ಸಾಲ ಮಾಡಿ ಜಮೀನಿನಲ್ಲಿ ಬೆಳೆ ಬೆಳೆಯುತ್ತಿದ್ದರೂ ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಜಿಲ್ಲೆಯ ಬರ ಪರಿಸ್ಥಿತಿಯನ್ನು ಪರಿಗಣಿಸಿ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ರೈತರ ಬೆಳೆಗಳಿಗೆ ಅನುಕೂಲವಾಗುವಂತೆ ಹೆಸ್ಕಾಂ ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ಸೂಚಿಸಲಾಗಿದೆ ಎಂದು ಶಾಸಕ ಶಿವಣ್ಣನವರ ತಿಳಿಸಿದರು.  

ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ** ಮಾತನಾಡಿ, ಸರ್ಕಾರಿ ಸೇವೆ ಪಡೆಯಲು ಜನರು ಅಧಿಕಾರಿಗಳ ಹಿಂದೆ ಅಲೆದಾಡುವ ಪರಿಸ್ಥಿತಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮಾತನಾಡುವುದು ಸಾಧನೆಯಲ್ಲ, ಮಾಡಿ ತೋರಿಸುವುದೇ ಸಾಧನೆ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.  

ಪ್ರಜಾಸೇವಾ ಆಂದೋಲನದಲ್ಲಿ ತಾಲೂಕಿನ 28 ಇಲಾಖೆಗಳ ವ್ಯಾಪ್ತಿಯಿಂದ ಒಟ್ಟು **90 ಅರ್ಜಿಗಳು** ಸಲ್ಲಿಕೆಯಾಗಿದ್ದು, **33 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು. 57 ಅರ್ಜಿಗಳು ಬಾಕಿ ಉಳಿದಿವೆ.**  

ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉಪ ಕಾರ್ಯದರ್ಶಿ ಪುನೀತ್, ಎಸಿ ಕಲ್ಯಾಣಿ ಕಾಂಬಳೆ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಚಂದ್ರಶೇಖರ್ ಪಾಟೀಲ್, ಪ್ರಭಾಕರ್ ಎಂ.ಎಸ್‌., ಆಶು ಮುನಾಫ್, ರೇಖಾ ಡೊಳ್ಳಿನವರ, ಇಒ ಮಲ್ಲಿಕಾರ್ಜುನ ಕೆ.ಎಂ., ತಾಲೂಕು ಅಧ್ಯಕ್ಷ ದಾನಪ್ಪ ಚೂರಿ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.