ಶೀಘ್ರ ಜಿಪಂ, ತಾಪಂ ಚುನಾವಣೆಗೆ ರೈತ ಭಾರತ ಪಕ್ಷ ಆಗ್ರಹ

ಶೀಘ್ರ ಜಿಪಂ, ತಾಪಂ ಚುನಾವಣೆಗೆ ರೈತ ಭಾರತ ಪಕ್ಷ ಆಗ್ರಹ Raitha Bharat Party demands early Zilla Parishad and TPA elections

ವಿಜಯಪುರ 22: ಜಿಲ್ಲಾ ಪಂಚಾಯತಿ ಮತ್ತು ಹಾಗೂ ತಾಲೂಕಾ  ಪಂಚಾಯತಿಗಳಿಗೆ ಚುನಾವಣೆ ನಡೆಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ರೈತ ಭಾರತ ಪಕ್ಷದ ವತಿಯಿಂದ ರಾಷ್ಟ್ರಪತಿಗಳು, ರಾಜ್ಯಪಾಲರು, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ಹಾಗೂ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಶುಕ್ರವಾರ ಮನವಿ ಸಲ್ಲಿಸಿದರು. 

ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕಾ  ಪಂಚಾಯತಿ ಚುನಾವಣೆಗಳನ್ನು ನಡೆಸದೆ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ವಿನಾಃ ಕಾರಣ ಕಾಲ ಹರಣ ಮಾಡಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಆಡಳಿತವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ ಇದು ಅವರ ದುರುದ್ದೇಶಪೂರಿತ ನಡೆಯಾಗಿದೆ ಎಂದು ಆರೋಪಿಸಿದ ಅವರು, ಕೂಡಲೇ ಚುನಾವಣಾ ಆಯೋಗ ಜಿಲ್ಲಾ ಪಂಚಾಯತಿ ಮತ್ತು ತಾಲೂಕಾ ಪಂಚಾಯತಿ ಚುನಾವಣೆಗಳನ್ನು ನಡೆಸುವ ಮೂಲಕ ಸ್ಥಳೀಯ ಆಡಳಿತದಲ್ಲಿ ಪಾರದರ್ಶಕತೆ ತರಬೇಕು ಎಂದು ಆಗ್ರಹಿಸಿದರು. 

ಕರ್ನಾಟಕ ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಗಳನ್ನು ನಡೆಸದೆ ಇರುವುದರಿಂದ ಸ್ಥಳೀಯ ಆಡಳಿತವು ಪಾರದರ್ಶಕತೆ ಕಳೆದುಕೊಂಡಿದೆ. ಇದರಿಂದ ಸಾರ್ವಜನಿಕರಿಗೆ ಸ್ಥಳೀಯ ಆಡಳಿತದಿಂದ ಸಿಗಬೇಕಾದ ಸರ್ಕಾರಿ ಸೌಲಭ್ಯಗಳು ದೊರೆಯದೆ ತೀವ್ರ ತೊಂದರೆ ಉಂಟಾಗಿದೆ ಎಂದು ಹೇಳಿದ ಅವರು, ಸದರಿ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ಮೀಸಲಾತಿ ನೆಪವೊಡ್ಡಿ ವಿನಾಕಾರಣ ಮುಂದೂಡುತ್ತ ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಮೀಸಲಾತಿ ನೆಪವೊಡ್ಡಿ ಚುನಾವಣೆಗಳನ್ನು ಮುಂದೂಡದೆ ಈಗ ಇರುವ ಮೀಸಲಾತಿ ಆಧಾರದಲ್ಲಿ ಚುನಾವಣೆಗಳನ್ನು ನಡೆಸಬೇಕು. ಜೊತೆಗೆ ಅವಧಿ ಮುಗಿಯುವ ಮೊದಲೇ ಚುನಾವಣೆ ಘೋಷಿಸಿ ದೇಶದ ಸ್ಥಳೀಯ ಸಂಸ್ಥೆಗಳಿಗೆ ಕಾಲ-ಕಾಲಕ್ಕೆ ಚುನಾವಣೆ ಪ್ರಕ್ರಿಯೆಗಳನ್ನು ನಡೆಸುವ ಸೂಕ್ತ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. 

ಪಕ್ಷದ ಮುಖಂಡ ಆರ್‌. ಎನ್‌. ನಾಗಶೆಟ್ಟಿ, ಕೃಷ್ಣಾ ಢಗೆ, ಲಕ್ಷ್ಮಣ ಹಿಪ್ಪರಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.