ಅಸಂಘಟಿತ ವಲಯದ ಕಾರ್ಮಿಕರನ್ನು ಪಿಂಚಣಿ ಯೋಜನೆಗೆ ನೋಂದಣಿ ಮಾಡಿ: ಜಿಲ್ಲಾಧಿಕಾರಿ

ಅಸಂಘಟಿತ ವಲಯದ ಕಾರ್ಮಿಕರನ್ನು ಪಿಂಚಣಿ ಯೋಜನೆಗೆ ನೋಂದಣಿ ಮಾಡಿ: ಜಿಲ್ಲಾಧಿಕಾರಿ Register unorganized sector workers for pension scheme: District Collector

ಕಾರವಾರ, ಫೆ.7: ಜಿಲ್ಲೆಯಲ್ಲಿನ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನ ಮಂತ್ರಿ ಮಾನ್‌ಹಿಧನ್ ವಂತಿಗೆ ಆಧಾರಿತ ಪಿಂಚಣಿ ಯೋಜನೆಗೆ ನೋಂದಣಿ ಮಾಡುವ ಸಂದರ್ಭದಲ್ಲಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿಸಿ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. 

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಹಿಧನ್ ಯೋಜನೆಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಿ ಈ ಯೋಜನೆ ವ್ಯಾಪ್ತಿಗೊಳಪಡಿಸಬೇಕು ಹಾಗೂ ಯೋಜನೆಯ ಕುರಿತು ಕಾರ್ಮಿಕರಲ್ಲಿ ಅರಿವು ಮಾಡಿಸಬೇಕು ಎಂದ ಅವರು, ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಯೋಜನೆಯ ಬಗ್ಗೆ ಫಲಾನುಭವಿಗಳಿಗೆ ಸಂಪೂರ್ಣ ಮಾಹಿತಿ ಒದಗಿಸಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಮಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.  

ಜಿಲ್ಲೆಯಲ್ಲಿನ ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಅಕ್ಷರ ದಾಸೋಹ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಸ್ಥರು, ಮನರೇಗಾ ಕೂಲಿ ಕಾರ್ಮಿಕರು,ಮನೆ ಕೆಲಸದವರು, ಅಗಸರು, ಕೈಮಗ್ಗ ಕಾರ್ಮಿಕರು ಸೇರಿದಂತೆ ಅಸಂಘಟಿತ ಅರ್ಹ ಕಾರ್ಮಿಕರನ್ನು ಗುರುತಿಸಿ, ಮಾರ್ಚ್‌ 15ರ ವರೆಗೆ ನಡೆಯುವ ವಿಶೇಷ ನೋಂದಣಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಬೇಕು ಎಂದರು. 

ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾತನಾಡಿ 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಎ.ಎಸ್‌.ಸಿ ಸೆಂಟರ್‌ಗಳಲ್ಲಿ ಆಧಾರ್ ಕಾರ್ಡ್‌, ಬ್ಯಾಂಕ್ ಖಾತೆ ಪ್ರತಿ ಸಲ್ಲಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.  

 ಸಭೆಯಲ್ಲಿ ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ, ಪೌರಾಯುಕ್ತ ಜಗದೀಶ ಹುಲಿಗಜ್ಜಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರತೀಕ ಶೆಟ್ಟಿ, ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರು ಮತ್ತಿತರರು ಇದ್ದರು.