ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಅನುದಾನ ಸಂಪೂರ್ಣ, ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಾಕೀತು

ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಅನುದಾನ ಸಂಪೂರ್ಣ, ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಾಕೀತು SCSP, TSP project funds are complete, Deputy Commissioner Prashant Kumar Mishra urges for effective

ಬಳ್ಳಾರಿ 18: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸವಾಂರ್ಗೀಣ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಇಲಾಖೆಗಳಿಗೆ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಶೇ.100ರಷ್ಟು ಸಾಧನೆ ಮಾಡಬೇಕು. ಈ ದಿಸೆಯಲ್ಲಿ ಆಯಾ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ 2013ರನ್ವಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ 2024-25ನೇ ಸಾಲಿನ ಮಾರ್ಚ್‌-2025 ಮತ್ತು ಜೂನ್‌-2025 ಅಂತ್ಯದವರೆಗಿನ ಪ್ರಗತಿಯ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆಗಳಡಿ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಆಯಾ ಉದ್ದೇಶಗಳಿಗೆ ಮಾತ್ರವೇ ಬಳಕೆ ಮಾಡಬೇಕು ಎಂದರು.ಈಗಾಗಲೇ ಮೊದಲ ತ್ರೈಮಾಸಿಕಕ್ಕೆ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಕೈಗೆತ್ತಿಕೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಮಾಡಿ ನಂತರ ಕಾರ್ಯರೂಪಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಎಲ್ಲಾ ಇಲಾಖೆಗಳು, ನಿಗಮಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಷ್ಟ ವರ್ಗದವರ ಅಭಿವೃದ್ಧಿಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿ ಗುರಿ ನಿಗದಿಪಡಿಸಿದೆ. ಆದರೂ ಕಳೆದ ಮಾರ್ಚ್‌-2025 ಮಾಹೆಯ ಅನುದಾನ ಮಾತ್ರ ಸಂಪೂರ್ಣ ಬಳಕೆ ಮಾಡಿಲ್ಲ ಏಕೆ? ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಪ್ರಶ್ನಿಸಿದರು.ಹಿಂದಿನ ಸಾಲಿನ ಬಾಕಿ ಉಳಿದ ಮೊತ್ತದ ಪರಿಷ್ಕೃತ ಮಾಹಿತಿ ನೀಡಬೇಕು ಮತ್ತು ಬಾಕಿ ಉಳಿದ ಬಿಲ್ ಗಳನ್ನು ಇತ್ಯರ್ಥ ಮಾಡಬೇಕು. ಅನುದಾನ ಬಳಕೆ ಮಾಡದ  ಇಲಾಖೆಗಳ ಅಧಿಕಾರಿಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಧಿನಿಯಮದಡಿ ನೋಟೀಸ್ ನೀಡಿ, ಶಿಸ್ತುಕ್ರಮ ಜರುಗಿಸಲು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು. 

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರದಿಂದ ಒದಗಿಸಿದ ಅನುದಾನವನ್ನು ಸಮರ​‍್ಕವಾಗಿ ಬಳಸಿ, ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ ಎಂದರು.ಕೈ ಮಗ್ಗ ಮತ್ತು ಜವಳಿ ಇಲಾಖೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ಬಿಡುಗಡೆಯಾಗಿದ್ದರೂ ಏಕೆ ಖರ್ಚು ಮಾಡಿಲ್ಲ? ಎಂದು ಇಲಾಖೆಯ ಮುಖ್ಯಸ್ಥರಿಗೆ ಪ್ರಶ್ನಿಸಿದಾಗ, ಇದಕ್ಕೆ ಇಲಾಖೆಯ ಉಪನಿರ್ದೇಶಕರು ಕೈ ಮಗ್ಗ ಮತ್ತು ಜವಳಿ ಇಲಾಖೆಯ ಯೋಜನೆಗಳ ಸೌಲಭ್ಯಗಳಿಗೆ ಸಮುದಾಯದವರು ಆಸಕ್ತಿ ತೋರಿಸುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು.ಬಳಿಕ ಜಿಲ್ಲಾಧಿಕಾರಿಯವರು ಮಾತನಾಡಿ, ಫಲಾನುಭವಿಗಳು ಆಸಕ್ತಿ ತೋರಿಸದೇ ಇದ್ದಲ್ಲಿ ವಾಸ್ತವ ಕುರಿತು ಕೇಂದ್ರ ಕಚೇರಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೆ ಪತ್ರ ಬರಬೇಕು.  ಆಯಾ ಇಲಾಖೆಗಳಿಗೆ ನಿಗದಿಪಡಿಸಿದ ಅನುದಾನವನ್ನು ಆಯಾ ಇಲಾಖೆಗಳ ಮುಖ್ಯಸ್ಥರೇ ಖರ್ಚು ಮಾಡುವ ಜವಾಬ್ದಾರಿ ಹೊಂದಬೇಕು. ಇಲ್ಲದಿದ್ದರೇ ಅಧಿಕಾರಿಗಳೇ ನೇರ ಹೊಣೆಯಾಗುತ್ತೀರಿ ಎಂದು ತಿಳಿಸಿದರು.ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಸಕೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಾಘವೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.