ರಾಜ್ಯದ ವಿವಿಧ 9 ವಿವಿಗಳನ್ನು ಮುಚ್ಚುವ ಎಸ್‌ಎಫ್‌ಐ- ಡಿವೈಎಫ್‌ಐ ಸಂಘಟನೆಗಳು ಆಗ್ರಹ

SFI-DYFI organizations demand closure of 9 different universities of the state

ಹಾವೇರಿ 17: ಕಳೆದ ಎರಡು ವರ್ಷಗಳ ಹಿಂದೆ ಆರಂಭಗೊಂಡ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ 9 ವಿವಿಗಳನ್ನು ಮುಚ್ಚುವ ಬಗ್ಗೆ ಸಂಪುಟ ಉಪ ಸಮಿತಿ ತೀರ್ಮಾನಿಸಿರುವುದು ಆತಂಕಕಾರಿ ನಡೆಯಾಗಿದೆ. ರಾಜ್ಯ ಸರಕಾರ ವಿವಿ ಮುಚ್ಚುವ ತೀರ್ಮಾನವನ್ನು ರದ್ದುಪಡಿಸಿ ಯಥಾ ಸ್ಥಿತಿಯಲ್ಲಿ  ವಿ.ವಿ ಮುಂದುವರೆಸಬೇಕೆಂದು ಎಸ್‌ಎಫ್‌ಐ- ಡಿವೈಎಫ್‌ಐ ಸಂಘಟನೆಗಳು ಆಗ್ರಹಿಸಿವೆ. 

ಈ ಕುರಿತು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಕಳೆದ ಎರಡು ವರ್ಷದಿಂದ ಯಾವುದೇ ಅನುದಾನವಿಲ್ಲದಿದ್ದರೂ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ರಾಜ್ಯ ಸರಕಾರ ಮುಂದಾಗಿರುವುದು ಯಾವುದೇ ರೀತಿಯಲ್ಲಿ ಸಮರ್ಥನೀಯವಲ್ಲ.ಕಳೆದ ಎರಡು ವರ್ಷಗಳು ಯಾವುದೇ ಅನುದಾನವಿಲ್ಲದೆ ಸಂಕಷ್ಟಮಯ ಪರಿಸ್ಥಿತಿಯಲ್ಲಿಯೂ ಕೂಡ ಹಾವೇರಿ ವಿಶ್ವ ವಿದ್ಯಾಲಯವು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಅಲ್ಲದೆ ಹಲವು ಪ್ರಮುಖ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಮುನ್ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾಲಯಕ್ಕೆ ಪೂರ್ಣಕಾಲಿಕ ಉಪನ್ಯಾಸಕರು, ಬೋದಕೇತರ ಸಿಬ್ಬಂದಿ ನೇಮಕ, ಅನುದಾನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರಕಾರ ಒದಗಿಸಬೇಕಿತ್ತು.

ವಿಶ್ವ ವಿದ್ಯಾಲಯಗಳನ್ನು ಬಲಿಷ್ಠಪಡಿಸುವ ಬದಲು ವಿ.ವಿ ಗಳನ್ನು ಮುಚ್ಚುವ ತೀರ್ಮಾನವು ಹಾವೇರಿ ಜಿಲ್ಲೆಯ ಬಡ ಹಾಗೂ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ವಂಚಿಸುವುದಾಗಿದೆ. ಹಾಗಾಗಿ ಸಂಪುಟ ಸಮಿತಿ ತೆಗೆದುಕೊಂಡಿರುವ ನಿರ್ಧಾರವನ್ನು ಯಾವುದೇ ಕಾರಣ ನೀಡದೇ ಕೂಡಲೇ ಹಿಂಪಡೆಯಬೇಕು.ಜಿಲ್ಲೆಯ ಜನರ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾವೇರಿ ವಿವಿ ಮುಚ್ಚದಂತೆ ಜಿಲ್ಲೆಯ ಎಲ್ಲ ಶಾಸಕರು ಮೌನವಹಿಸದೇ ಕೂಡಲೇ ಈ ವಿಷಯದಲ್ಲಿ ಮಧ್ಯೆಪ್ರವೇಶಿಸಿ ಸಂಪುಟ ಉಪಸಮಿತಿಯ ತೀರ್ಮಾನ ಹಿಂಪಡೆಯಲು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಒತ್ತಡ ಹೇರಬೇಕೆಂದು ಆಗ್ರಹಿಸಿವೆ.ಹಾವೇರಿ ಜಿಲ್ಲೆಗೆ ವಿಶ್ವವಿದ್ಯಾಲಯ ಅತ್ಯವಶ್ಯವಾಗಿದ್ದು ಈ ಬಗ್ಗೆ ಸಂಪುಟ ಸಮಿತಿಯ ತೀರ್ಮಾನವನ್ನು ಹಿಂಪಡೆಯಬೇಕು ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವಿಶ್ವವಿದ್ಯಾಲಯ ಬೆಳವಣಿಗೆ ಹೊಂದಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ವಿಶ್ವ ವಿದ್ಯಾಲಯದ ಉಳಿವಿಗಾಗಿ ತೀವ್ರತೆರನಾದ ಪ್ರತಿಭಟನೆ ನಡೆಸಲು ಮುಂದಾಗುವುದಾಗಿ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ,ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಹಿರಿಯ ಸಾಹಿತಿಗಳಾದ ಸತೀಶ ಕುಲಕರ್ಣಿ,ಪರಿಮಳ ಜೈನ್ ತಿಳಿಸಿದ್ದಾರೆ.