ಸಫಾಯಿ, ಪೌರಕಾರ್ಮಿಕರ ಪ್ರಗತಿ ಪರೀಶೀಲನಾ ಸಭೆ: ಮೂಲಭೂತ ಸೌಲಭ್ಯ ಒದಗಿಸಿ: ಚಂದ್ರಕಲಾ

ಸಫಾಯಿ, ಪೌರಕಾರ್ಮಿಕರ ಪ್ರಗತಿ ಪರೀಶೀಲನಾ ಸಭೆ: ಮೂಲಭೂತ ಸೌಲಭ್ಯ ಒದಗಿಸಿ: ಚಂದ್ರಕಲಾ Safai, civic workers' progress review meeting: Provide basic facilities: Chandrakala

ಬಳ್ಳಾರಿ 25: ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳು ಮತ್ತು ಪೌರಕಾರ್ಮಿಕರಿಗೆ ದೊರಕಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಬೇಕು ಹಾಗೂ ಅವರಲ್ಲಿ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಅವರು ಹೇಳಿದರು. 

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಏರಿ​‍್ಡಸಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಏಜೆನ್ಸಿಗಳು ಪೌರಕಾರ್ಮಿಕರಿಗೆ ಅಗತ್ಯವಾದ ಸಮವಸ್ತ್ರ, ಗಮ್ ಬೂಟ್, ಕೈಗವಸು, ಮಾಸ್ಕ್‌ ಮತ್ತು ಇತರೆ ಸುರಕ್ಷಣಾ ಪರಿಕರಗಳನ್ನು ಸಮರ​‍್ಕವಾಗಿ ನೀಡಬೇಕು. ಆರೋಗ್ಯ ನೀರೀಕ್ಷಕರು ಮತ್ತು ಮೇಸ್ತ್ರಿಗಳು ಸುರಕ್ಷತಾ ಪರಿಕರಗಳನ್ನು ಧರಿಸುವಂತೆ ಪ್ರೇರೇಪಿಸಬೇಕು ಹಾಗೂ ಏಜೆನ್ಸಿಗಳು ಮತ್ತು ಪೌರಸಂಸ್ಥೆಗಳು ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಇಲ್ಲವಾದಲ್ಲಿ ಅನೇಕ ಆರೋಗ್ಯದ ಸಮಸ್ಯೆಗಳು ಉಂಟಾಗಿ ಗಂಭೀರವಾಗಿ ಪರಿಣಿಮಿಸುತ್ತವೆ ಎಂದು ಎಚ್ಚರಿಕೆ ನೀಡಿದರು. 

ಪಿಎಫ್, ಇಎಸ್‌ಐ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪೌರಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ದೊರಕುವ ಸೌಲಭ್ಯಗಳ ಕುರಿತು ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು. 

ನವೆಂಬರ್ 07 ರಂದು ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನದ ಅಂಗವಾಗಿ ಎಸೆಸೆಲ್ಸಿ, ಪಿಯುಸಿ, ಉನ್ನತ ಶಿಕ್ಷಣ ಪಡೆದ ಪೌರಕಾರ್ಮಿಕರ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಬೇಕು ಎಂದು ಹೇಳಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಪೌರಕಾರ್ಮಿಕರ ಸಭೆ ಕರೆದು ಅವರ ಸಮಸ್ಯೆಗಳನ್ನು ಆಲಿಸಬೇಕೆಂದರು. 

ಈ ಸಂದರ್ಭದಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ವಿಭಾಗದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸದಸ್ಯ ಕಂದಕೂರು ರಾಮುಡು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿಶಿಕಾಂತ್ ಶಿವಪುರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಾಘವೇಂದ್ರ ಗುರು ಸೇರಿದಂತೆ ವಿವಿಧ ನಗರಸಭೆ, ಪುರಸಭೆ ಮತ್ತು ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಪೌರಕಾರ್ಮಿಕರು ಉಪಸ್ತಿತರಿದ್ದರು.