ಸವದತ್ತಿ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಅಭಿಯಾನ ಯಶಸ್ವಿ

ಸವದತ್ತಿ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಅಭಿಯಾನ ಯಶಸ್ವಿ  Savadatti: Awareness campaign on electoral roll revision successful

ಸವದತ್ತಿ 06:  ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಹಾಗೂ ಮತದಾರರ ಪಟ್ಟಿಯನ್ನು ದೋಷರಹಿತಗೊಳಿಸುವ ನಿಟ್ಟಿನಲ್ಲಿ, ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಅಭಿಯಾನದ ಅಂಗವಾಗಿ ನಗರದ ರಾಮಾಪುರ ಸೈಟ್ ಪ್ರದೇಶದಲ್ಲಿ ಮನೆ ಮನೆಗೆ ಭೇಟಿ ನೀಡುವ ಜಾಗೃತಿ ಪಾದಯಾತ್ರೆಯನ್ನು ಯಶಸ್ವಿಯಾಗಿ ನಡೆಸಲಾಯಿತು.  ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗಡೆ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಮತದಾರರ ಪಟ್ಟಿ ಪರೀಶೀಲನೆ ಮತ್ತು ನವೀಕರಣಕ್ಕೆ ವಿಶೇಷ ಒತ್ತು ನೀಡಲಾಯಿತು. ಈ ಅಭಿಯಾನದ ಮುಖ್ಯ ಉದ್ದೇಶ, ಪಟ್ಟಿಯಲ್ಲಿ ಇರುವ ಎಲ್ಲಾ ಅರ್ಹ ಮತದಾರರ ಹೆಸರುಗಳನ್ನು ಸರಿಯಾಗಿ ದಾಖಲಿಸುವುದು ಹಾಗೂ ಯಾವುದೇ ದೋಷಗಳನ್ನು ಸರಿಪಡಿಸುವುದಾಗಿದೆ.  

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗಡೆ ಅವರು, ಮತದಾರರ ಪಟ್ಟಿಯು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ನಾಗರಿಕನು ತನ್ನ ಹೆಸರನ್ನು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯಾವುದೇ ತಿದ್ದುಪಡಿ ಅಥವಾ ಬದಲಾವಣೆಗಳಿದ್ದರೆ ತಕ್ಷಣವೇ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಲು ಸಾರ್ವಜನಿಕರಿಗೆ ಮನವಿ ಮಾಡಿದರು. ಪಾದಯಾತ್ರೆಯ ಮೂಲಕ ಮತದಾರರ ಮಾಹಿತಿ ಪರೀಶೀಲನೆ, ಹೊಸ ಮತದಾರರ ನೋಂದಣಿ, ಹೆಸರು ಬದಲಾವಣೆ ಹಾಗೂ ತಿದ್ದುಪಡಿ ಕುರಿತ ಅರಿವು ಮೂಡಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಕಂದಾಯ ನೀರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.