ಫೆ.28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯು ಪರೀಕ್ಷೆ
Second PU exam from Feb. 28 to March 17
ವಿಜಯನಗರ (ಹೊಸಪೇಟೆ ) ಫೆ.19: ಇದೇ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ವತಿಯಿಂದ ಅಗತ್ಯ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾಹಿತಿ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾಹಿತಿ ನೀಡಿದರು. ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದರ ಜತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಭದ್ರತೆಯಲ್ಲಿಯೇ ಪ್ರಶ್ನೆಪತ್ರಿಕೆಗಳು ಕೇಂದ್ರಗಳಿಗೆ ತಲುಪಲಿವೆ. ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ಕೇಂದ್ರಗಳಲ್ಲಿ ಉತ್ತಮ ವಾತಾವರಣ, ಕುಡಿಯುವ ನೀರು, ಶೌಚಾಲಯ ಸೇರಿ ಅಗತ್ಯ ಮೂಲಭೂತ ಸೌಕರ್ಯ ಮತ್ತು ಕುಳಿತುಕೊಳ್ಳಲು ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದ ಅವರು.
ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಮುಖ್ಯಸ್ಥರು ಹೊರತುಪಡಿಸಿ ಉಳಿದವರಿಗೆ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ನಿಗಧಿತ ಸಮಯಕ್ಕಿಂತ ಮುಂಚೆ ಹಾಜರಿರಬೇಕು. ಮಕ್ಕಳಿಗೆ ಸಮಸ್ಯೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಲಾಯಿತು. ಕಳೆದ ಬಾರಿಗಿಂತಲೂ ಹೆಚ್ಚಿನ ಫಲಿತಾಂಶ ನೀಡುವ ಸಲುವಾಗಿ ಸಂಜೆ ಪರಿಹಾರ ಬೋಧನೆ ನಡೆಸಲಾಗಿದೆ. ಇಲಾಖೆ ವತಿಯಿಂದ 2 ಪೂರ್ವ ಸಿದ್ದತಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶದೊಂದಿಗೆ 15 ರೊಳಗೆ ಸ್ಥಾನ ಪಡೆಯುವ ನೀರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ವಿಶ್ವಾಸ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಭಯ ಭೀತರಾಗದೆ, ಧೈರ್ಯವಾಗಿ ಎದುರಿಸಬೇಕು. ಪರೀಕ್ಷೆ ಎಂಬುದು ಹಬ್ಬವಿದ್ದಂತೆ ಖುಷಿಯಿಂದ ಬರೆಯಲು ಕಿವಿ ಮಾತು ಹೇಳಿದರು.
23 ಪರೀಕ್ಷಾ ಕೇಂದ್ರಗಳಲ್ಲಿ 14801 ವಿದ್ಯಾರ್ಥಿಗಳು ಪರೀಕ್ಷೆಗೆ: ಜಿಲ್ಲೆಯ ಹೊಸಪೇಟೆ ತಾಲ್ಲೂಕಿನಲ್ಲಿ 7, ಹಗರಿಬೊಮ್ಮನಹಳ್ಳಿ 3, ಹೂವಿನಹಡಗಲಿ 3, ಹರಪನಹಳ್ಳಿ 5, ಕೂಡ್ಲಿಗಿ 2, ಕೊಟ್ಟೂರು 3 ಸೇರಿ ಒಟ್ಟು 23 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಫೆಬ್ರವರಿ 28 ರಿಂದ ಜರುಗಲಿರುವ ಪರೀಕ್ಷೆ-1ರಲ್ಲಿ 7235 ಬಾಲಕಿಯರು, 5143 ಬಾಲಕರು ಸೇರಿ ಒಟ್ಟು 14801 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ ಹೊಸದಾಗಿ 12378, ಪುನರಾವರ್ತಿತರಾಗಿ 1915, ಖಾಸಗಿಯವರು 500 ಹಾಗೂ ವಿಷಯಾಧಾರಿತ ಅಂಕಗಳನ್ನು ಹೆಚ್ಚಿಸಿಕೊಳ್ಳುವ ದೃಷ್ಠಿಯಿಂದ ಮೊತ್ತೊಮ್ಮೆ 8 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ: ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿ, ಕಂಪ್ಯೂಟರ್ ಕೇಂದ್ರಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಡಿಡಿಪಿಯು ನಾಗರಾಜ್ ಹವಾಲ್ದಾರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 