2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ
State Level Talent Fountain and Kalotsava Program for the year 2025-26
ಲೋಕದರ್ಶನ ವರದಿ
2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ
ಯಾವುದೇ ಅವ್ಯವಸ್ಥೆ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಮಾಡಿ: ಡಾ.ಸುರೇಶ ಬಿ.ಇಟ್ನಾಳ
ಕೊಪ್ಪಳ 04: ಇದೇ ಫೆಬ್ರವರಿ 7 ಮತ್ತು 8 ರಂದು ಕಾರಟಗಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ನೂರಾರು ಮಕ್ಕಳು ಭಾಗವಹಿಸಲಿದ್ದು, ಅವರಿಗೆ ಯಾವುದೇ ವಿಷಯಗಳಲ್ಲಿ ಅವ್ಯವಸ್ಥೆ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಅನುಕೂಲ ಮಾಡಿಕೊಡಿ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಹೇಳಿದರು.
ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಲಾಗಿರುವ 2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರಟಗಿಯ ಕೆ.ಪಿ.ಎಸ್ ಪ್ರೌಢಶಾಲೆ ವಿಭಾಗದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಂದ 1295 ವಿದ್ಯಾರ್ಥಿಗಳು ಆಗಮಿಸಲಿದ್ದಾರೆ. ರೈಲು ಹಾಗೂ ಬಸ್ಗಳ ಮೂಲಕ ಆಗಮಿಸುವ ವಿದ್ಯಾರ್ಥಿಗಳು, ಶಿಕ್ಷಕರಿಗೆ ಕಾರಟಗಿ ಹಾಗೂ ಕಾರ್ಯಕ್ರಮದ ವೇದಿಕೆ, ವಸತಿ ನಿಲಯಗಳನ್ನು ತಲುಪಲು ಅನುಕೂಲವಾಗುಂತೆ ಹೆಲ್ಪ್ಡೆಸ್ಕ್ ಸ್ಥಾಪಿಸಿ, ಮಾರ್ಗಸೂಚಕಗಳನ್ನು ಒದಗಿಸಿ. ವಿದ್ಯಾರ್ಥಿಗಳು ತಂಗುವ ವಸತಿ ನಿಲಯಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಬಿಸೀನೀರಿನ ವ್ಯವಸ್ಥೆ ಕಲ್ಪಿಸಿ. ಗುಣಮಟ್ಟದ ಹಾಗೂ ಶುದ್ಧ ಆಹಾರವನ್ನು ಒದಗಿಸಿ. ವಸತಿ ನಿಲಯಗಳಿಂದ ಕಾರ್ಯಕ್ರಮ ಸ್ಥಳ ಹಾಗೂ ಊಟದ ಸ್ಥಳಕ್ಕೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಿ. ಬಸ್ಗಳು ಸುವ್ಯವಸ್ಥೆಯಲ್ಲಿರಬೇಕು. ಸಾರಿಗೆ ಅಧಿಕಾರಿಗಳು ಬಸ್ಗಳನ್ನು ಪರೀಶೀಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ವಿದ್ಯಾರ್ಥಿಗಳು ತಂಗುವ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು. ಬಸ್ಗಳಲ್ಲಿ, ವಸತಿ ನಿಲಯಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್ ಕಡ್ಡಾಯ ಇರಬೇಕು. ಕಾರ್ಯಕ್ರಮ ಸ್ಥಳಗಳಲ್ಲಿ ವೈದ್ಯರ ತಂಡವನ್ನು ಆರೋಗ್ಯ ಇಲಾಖೆಯಿಂದ ಒದಗಿಸಬೇಕು. ಸ್ಥಳೀಯ ಸಂಸ್ಥೆಗಳು ಕಾರ್ಯಕ್ರಮ ಸ್ಥಳದ ಸ್ವಚ್ಛತೆ, ಶೌಚಾಲಯಗಳ ಸ್ಥಾಪನೆಗೆ ಕ್ರಮ ವಹಿಸಬೇಕು. ಕಡ್ಡಾಯವಾಗಿ ಶಿಷ್ಠಾಚಾರ ಪಾಲಿಸಬೇಕು. ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯಿಂದ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ವರ್ಣಿತ್ ನೇಗಿ ಮಾತನಾಡಿ, ಯಾವ ಶಾಲೆಯಲ್ಲಿ ಯಾವ ಸ್ಪರ್ಧೆ ನಡೆಯಲಿದೆ ಎಂಬ ಮಾಹಿತಿಯನ್ನು ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಒದಗಿಸಬೇಕು. ಇದರಿಂದ ಅನಗತ್ಯ ಗೊಂದಲ ತಪ್ಪುತ್ತದೆ. ವಿದ್ಯಾರ್ಥಿಗಳಿಗೆ ನೀಡುವ ಊಟ, ಉಪಹಾರ ಸುರಕ್ಷಿತ ಹಾಗೂ ಶುದ್ಧವಾಗಿರಬೇಕು. ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಅವರು ಕಾರ್ಯಕ್ರಮದ ಕುರಿತು ವಿವರಗಳನ್ನು ನೀಡಿದರು.
ಸಭೆಯಲ್ಲಿ ಕಾರಟಗಿ ತಹಶೀಲ್ದಾರ ಕುಮಾರಸ್ವಾಮಿ, ಇಒ ಲಕ್ಷ್ಮೀದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ, ಜಿಲ್ಲಾ ದೈಹಿಕ ಶಿಕ್ಷಣ ಪರೀವೀಕ್ಷಕ ಎ.ಬಸವರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 