ಹಾವು ಕಚ್ಚಿದ ವ್ಯಕ್ತಿಯನ್ನು ತಡಮಾಡದೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಿರಿ: ಡಾ.ಮರಿಯಂಬಿ

ಹಾವು ಕಚ್ಚಿದ ವ್ಯಕ್ತಿಯನ್ನು ತಡಮಾಡದೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಿರಿ: ಡಾ.ಮರಿಯಂಬಿ   Take a snakebite victim to the nearest hospital without delay: Dr. Mariambi

‘ಹಾವು ಕಡಿತ’ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಸಲಹೆ  

ಬಳ್ಳಾರಿ,ಜು.18: ಹಾವು ಕಚ್ಚಿದ ಸಂದರ್ಭದಲ್ಲಿ ಹೆದರಬಾರದು. ಹಾವು ಕಚ್ಚಿದ ವ್ಯಕ್ತಿಯನ್ನು ಸಮಾಧಾನವಾಗಿರಿಸಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಬಂದು ಉಚಿತ ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿ ತಡೆಯಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ತಿಳಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಮೋಕ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ಬಳ್ಳಾರಿ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಗುರುವಾರ ಏರಿ​‍್ಡಸಿದ್ದ ಹಾವು ಕಡಿತ ಕುರಿತು ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. 

ಹಾವು ಕಚ್ಚಿದಾಗ ಎಲ್ಲರೂ ಗಾಬರಿಯಾಗುವುದು ಸಾಮಾನ್ಯ. ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್‌ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು. 

ಆ ಸಂದರ್ಭದಲ್ಲಿ ರೋಗಿಯ ಹಾವು ಕಚ್ಚಿರುವ ಭಾಗವು ಹೃದಯದ ಕೆಳಗೆ ಬರುವ ಹಾಗೆ ಇರುವಂತೆ ನೋಡಿಕೊಳ್ಳಬೇಕು. ರಕ್ತಪರಿಚಲನೆಗೆ ತಡೆಯಾಗುವಂತಹ ಕೈ ಗಡಿಯಾರ, ಬಳೆ, ಉಂಗುರ ಮುಂತಾದವುಗಳನ್ನು ತೆಗೆಯಬೇಕು. ಕಚ್ಚಿದ ಭಾಗ ಅಲುಗಾಡದಂತಿರಬೇಕು. ಮುಖ್ಯವಾಗಿ ಆಸ್ಪತ್ರೆಗೆ ಹೋಗುವಾಗ ವ್ಯಕ್ತಿಯ ರೋಗ ಲಕ್ಷಣಗಳಾದ ತೇಲುಗಣ್ಣು, ಕಣ್ಣುಮುಚ್ಚುವುದು, ನಾಲಿಗೆ ತೊದಲುವಿಕೆ, ನುಂಗಲು ಕಷ್ಟವಾಗುವುದು, ಉಸಿರಾಡಲು ಕಷ್ಟವಾಗುವುದನ್ನು ಗಮನಿಸಬೇಕು. ಇಲ್ಲವಾದಲ್ಲಿ ನರಮಂಡಲಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ ಎಂದರು. 

ಗಾಯದ ಜಾಗದಲ್ಲಿ ತೀವ್ರ ಉರಿ, ನೋವು ಹರಡುವಿಕೆ ಅಥವಾ ಊದುವಿಕೆ ಗಾಯದ ಸುತ್ತ ಬಣ್ಣಹೀನವಾಗುವುದು, ಕೆಳಬೆನ್ನಿನಲ್ಲಿ ನೋವು ಮುಂತಾದ ಲಕ್ಷಣಗಳು ಸಹ ಅಂಗಾಂಗಕ್ಕೆ ಹಾನಿ ಮಾಡುವ ವಿಷದ ಅಂಶವಾಗಿರುತ್ತದೆ. ಕೂಡಲೇ ಈ ಲಕ್ಷಣಗಳನ್ನು ರೋಗಿಯ ಜೊತೆಗಿರುವ ವ್ಯಕ್ತಿಗಳು ವೈದ್ಯರಿಗೆ ತಿಳಿಸಿದರೆ ವ್ಯಕ್ತಿಯ ಜೀವ ಕಾಪಾಡಲು ಸಾಧ್ಯವಾಗುವ ಚಿಕಿತ್ಸೆ ಒದಗಿಸಲು ಸಹಾಯಕವಾಗಲಿದೆ ಎಂದರು. 

ಮೋಕ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಭಾರತಿ ಅವರು ಮಾತನಾಡಿ, ಹಾವು ಕಚ್ಚಿದಾಗ ಕಚ್ಚಿದ ಜಾಗದ ಪಕ್ಕದಲ್ಲಿ ಬಟ್ಟೆ ಕಟ್ಟುವುದು, ಬ್ಲೇಡ್ ಅಥವಾ ಚಾಕುವಿನಿಂದ ಗಾಯ ಮಾಡುವುದು, ಗಾಯ ಸುಡುವುದು, ನಾಟಿ ಓಷಧಿ ನೀಡುವುದು ಮುಂತಾದವುಗಳನ್ನು ಮಾಡಬಾರದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಎನ್‌ಸಿಡಿ ಸಲಹೆಗಾರರಾದ ಡಾ.ಜಬೀನ್ ತಾಜ್, ಜಿಲ್ಲಾ ಸಾಂಕ್ರಾಮಿಕ ರೋಗ ತಜ್ಞರಾದ ಡಾ.ವಿಶಾಲಾಕ್ಷಿ, ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಡಾಟ ಮ್ಯಾನೇಜರ್ ಅಜಯ್, ಸಮುದಾಯ ಆರೋಗ್ಯಾಧಿಕಾರಿ ತ್ರಿಪುನ್ ಕುಮಾರ್, ಆರೋಗ್ಯ ನೀರೀಕ್ಷಣಾಧಿಕಾರಿ ಮಲ್ಲಿಗೌಡ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.