ಕಾರವಾರ, ಫೆ.21: ಮಕ್ಕಳಿಗೆ ಶಿಕ್ಷಣ ಮೂಲಭೂತ ಹಕ್ಕು. ಮಕ್ಕಳಿಗೆ ಕೇವಲ ಹಕ್ಕುಗಳನ್ನು ನೀಡಿದರೆ ಸಾಲದು, ಅದನ್ನು ಪಡೆಯಲು ಅಗತ್ಯವಾದ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಿದಾಗ ಮಾತ್ರ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಪಡೆದುಕೊಳ್ಳಲು ಸಾರಿಗೆ ವ್ಯವಸ್ಥೆ ಬಹುಮುಖ್ಯ ಪಾತ್ರವಹಿಸುತ್ತದೆ. ಆದರೆ ಇತ್ತೀಚೆಗೆ ಸಾರಿಗೆ ಸಂಬಂಧಿತ ಸಮಸ್ಯೆಗಳನ್ನು ಮಕ್ಕಳು ಎದುರಿಸುತ್ತಿದ್ದು ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿ ಸ್ನೇಹಿ ಸಾರಿಗೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ಅವರು ಇತ್ತಿಚೆಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರವಾರ ಹಾಗೂ ಶಿರಸಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಶಾಲಾ ಕಾಲೇಜುಗಳ ಸಮಯವನ್ನು ತಿಳಿದುಕೊಂಡು ಸದರಿ ಸಮಯಕ್ಕೆ ಸಾರಿಗೆಗಳನ್ನು ಕಾರ್ಯಚರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಯಾವುದೇ ಸಾರಿಗೆ ಸಂಬಂಧಿತ ವಿಷಯಕ್ಕೆ ಮನವಿಗಳು ಬಂದರೆ ತಡಮಾಡದೆ ಸದರಿ ಮನವಿಯನ್ನು ಪರೀಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಹೆಚ್ಚಿಗೆ ಸೇರುವ ಜಂಕ್ಷನ್ಗಳಲ್ಲಿ ಸಾರಿಗೆ ಸೇವೆಗಳ ಮೇಲ್ವಿಚಾರಣೆಗೆ ಸಂಚಾರ ನಿಯಂತ್ರಕರು ಅಥವಾ ಮೇಲ್ವಿಚಾರಕರನ್ನು ತಪ್ಪದೇ ನಿಯೋಜಿಸಿ ಸುಗಮ ಕಾರ್ಯಚಾರಣೆ ಬಗ್ಗೆ ನಿಗಾ ವಹಿಸಬೇಕು, ತಮ್ಮ ವಿಭಾಗದ ಎಲ್ಲಾ ಚಾಲನಾ ಸಿಬ್ಬಂಧಿಗಳಿಗೆ ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣಿಸಲು ಅನುವಾಗಲು ನಿಗದಿತ ಬಸ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಿ ಅವರನ್ನು ಹತ್ತಿಸಿ ಇಳಿಸಿಕೊಂಡು ಮುಂದೆ ಹೋಗುವುದರ ಜೊತೆಗೆ ವಿದ್ಯಾರ್ಥಿಗಳ ಜೊತೆಗೆ ಸೌಜನ್ಯಯುತವಾಗಿ ವರ್ತಿಸುವಂತೆ ತಿಳುವಳಿಕೆ ನೀಡಬೇಕು ಹಾಗೂ ಬಾಲಾ ನ್ಯಾಯ ಕಾಯಿದೆ ಮತು ಪೋಕ್ಸೋ ಕಾಯಿದೆ ಬಗ್ಗೆ ತರಬೇತಿ ನೀಡಬೇಕು, ಅಲ್ಲದೆ ಅತಿ ಹೆಚ್ಚಿನ ವಿದ್ಯಾರ್ಥಿಗಳು ನಿಂತು ಪ್ರಯಾಣಿಸುವ ಸರತಿಗಳ ಬಗ್ಗೆ ವಿಭಾಗ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಹೆಚ್ಚುವರಿ ಸರತಿಗಳನ್ನು ಅಳವಡಿಸುವ ಅವಶ್ಯಕತೆ ಬಗ್ಗೆ ಪರೀಶೀಲಿಸಿ ಕ್ರಮವಹಿಸಬೇಕು ಎಂದರು.
ಪ್ರತೀ ಬಸ್ ನಿಲ್ದಾಣದಲ್ಲಿ ಹಾಗೂ ಬಸ್ಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು. ಅಗತ್ಯವಿದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಕಾರವನ್ನು ಪಡೆದು ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳ ಸ್ನೇಹಿಯಾದ ಸಾರಿಗೆ ಸೇವೆಯನ್ನು ನೀಡಬೇಕೆಂದರು.
ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ, ಎಲ್ಲಾ ತಾಲೂಕಿನ ಸಾರಿಗೆ ಘಟಕ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಗಳು ಮತ್ತು ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳು ಹಾಜರಿದ್ದರು.