ವಸತಿ ನಿಲಯಗಳಲ್ಲಿನ ಮಕ್ಕಳ ಒತ್ತಡ ನಿವಾರಣೆ, ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಿ ಹಾಸ್ಟೆಲ್ ಮೆಂಟರ್‌-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆ : ಜಿಲ್ಲಾಧಿಕಾರಿ ಡಾ.ಆನಂದ ಕೆ.

 ವಸತಿ ನಿಲಯಗಳಲ್ಲಿನ ಮಕ್ಕಳ ಒತ್ತಡ ನಿವಾರಣೆ, ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಿ    ಹಾಸ್ಟೆಲ್ ಮೆಂಟರ್‌-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆ : ಜಿಲ್ಲಾಧಿಕಾರಿ ಡಾ.ಆನಂದ ಕೆ. Take steps to reduce stress and increase self-confidence of children in hostels Guidelines meeting

ಲೋಕದರ್ಶನ ವರದಿ 

ವಸತಿ ನಿಲಯಗಳಲ್ಲಿನ ಮಕ್ಕಳ ಒತ್ತಡ ನಿವಾರಣೆ, ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಿ  

ಹಾಸ್ಟೆಲ್ ಮೆಂಟರ್‌-ವಾರ್ಡನ್‌ಗಳಿಗೆ ಮಾರ್ಗದರ್ಶನ ಸಭೆ : ಜಿಲ್ಲಾಧಿಕಾರಿ ಡಾ.ಆನಂದ ಕೆ. 

ವಿಜಯಪುರ 11: ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಪರೀಕ್ಷಾ ಒತ್ತಡವನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ವಸತಿ ನಿಲಯಗಳ ವಾರ್ಡನ್‌ಗಳು ಹಾಗೂ ಹಾಸ್ಟೆಲ್ ಮೆಂಟರ್‌ಗಳು ಮಕ್ಕಳಿಗೆ ಮುಕ್ತವಾದ ವಾತಾವರಣ ಕಲ್ಪಿಸಿ, ಮಕ್ಕಳೊಂದಿಗೆ ಬೆರೆತು, ಸಮಸ್ಯೆಗಳನ್ನು ಆಲಿಸಿ-ಚರ್ಚಿಸಿ, ಪರಿಹರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.   

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಹಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ರವರಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ. ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆಯಲು ತಮ್ಮ ಕುಟುಂಬದಿಂದ ದೂರವಾಗಿರುತ್ತಾರೆ. ವಾರಕ್ಕೊಮ್ಮೆಯಾದರೂ ಒಂದು ಅವರೊಂದಿಗೆ ಊಟ ಮಾಡುವ ಮೂಲಕ ಅವರೊಂದಿಗೆ ಬೆರೆತು, ಕುಟುಂಬದಿಂದ ದೂರವಿರುವ ಭಾವನೆ ಹೋಗಲಾಡಿಲು ಪ್ರಯತ್ನಿಸಬೇಕು. ವಸತಿ ನಿಲಯಗಳಲ್ಲಿ ಉತ್ತಮವಾದ ಮುಕ್ತ ವಾತಾವರಣ ನಿರ್ಮಿಸಬೇಕು. ಅವರೊಂದಿಗೆ ಚರ್ಚಿಸಬೇಕು. ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡಿದಾಗ ಮಾತ್ರ ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ.  ಈ ನಿಟ್ಟಿನಲ್ಲಿ ಅಧಿಕಾರಿಗಳು  ತಮ್ಮ ಆಸಕ್ತ ವಿಷಯಗಳ ಕುರಿತು ಮಕ್ಕಳಿಗೆ ಬೋಧನೆ ಮಾಡಬೇಕು.  ವಿಚಾರಗಳು ತಮ್ಮಲ್ಲಿರುವ ಅನುಭವ ಜ್ಞಾನವನ್ನು ಹಂಚಿಕೊಳ್ಳಬೇಕು. ವಸತಿ ನಿಲಯಗಳಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ  ಮಕ್ಕಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.  

ವಸತಿ ನಿಲಯಗಳಲ್ಲಿ ಅವಶ್ಯಕವಿರುವ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಬೇಕು. ಸಾಧಾರಣವಾಗಿ ಮಕ್ಕಳಲ್ಲಿ ಚರ್ಮರೋಗ ಸಮಸ್ಯೆ ಉಂಟಾಗುತ್ತದೆ. ಇದನ್ನು ಸಂಬಂಧಿಸಿದ ಹಾಸ್ಟೆಲ್ ವಾರ್ಡನ್, ಮೆಂಟರ್‌ಗಳು ಅವಲೋಕಿಸಬೇಕು. ವಾರಕ್ಕೊಮ್ಮೆ ವೈದ್ಯರನ್ನು ಹಾಸ್ಟೇಲ್‌ಗೆ ಕರೆಸಿ ತಪಾಸಣೆ ನಡೆಸಬೇಕು. ರಕ್ತಹೀನತೆ ತಪಾಸಣೆ ನಡೆಸಬೇಕು. ಆಗಾಗ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ವೈದ್ಯಕೀಯ ತಪಾಸಣೆ ನಡೆಸಬೇಕು. ಯೋಗ, ವ್ಯಾಯಾಮಗಳಂತಹ ದೈಹಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.  ಸುಸಜ್ಜಿತವಾದ ಗ್ರಂಥಾಲಯ ಇರುವಂತೆ ನೋಡಿಕೊಳ್ಳಬೇಕು. ಕಂಪ್ಯೂಟರ್ ತರಬೇತಿ ಸೇರಿದಂತೆ  ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ವಸತಿ ನಿಲಯಗಳ ವಿದ್ಯಾರ್ಥಿಗಳ ಬೆಳವಣಿಗೆ ಹಾಗೂ ಜೀವನ ಮಟ್ಟ ಸುಧಾರಿಸಲು ಪ್ರೇರೆಪಿಸಬೇಕು ಎಂದು ಅವರು ಹೇಳಿದರು. 

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ,  ಕುಟುಂಬದಿಂದ ದೂರ ಬಂದು, ಹಾಸ್ಟೆಲ್‌ನಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಂದಿರುವ ಮಕ್ಕಳ ಪೋಷಕರಾಗಿ ಹಾಸ್ಟೆಲ್ ವಾರ್ಡನ್‌ಗಳು ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಹಾಸ್ಟೆಲ್‌ಗಳಲ್ಲಿನ ಕೊಠಡಿಗಳ ಸ್ವಚ್ಛತೆ, ಶುಚಿತ್ವ ಶೌಚಾಲಯ, ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಪುಸ್ತಕಗಳು ಸ್ಪರ್ಧಾತ್ಮ, ಪುಸ್ತಕಗಳು,  ಉತ್ತಮ ಪೌಷ್ಠಿಕಾಂಶವುಳ್ಳ ಮೆನು ಪ್ರಕಾರ ಆಹಾರ ಒದಗಿಸುವುದು ಬಹುಮುಖ್ಯ ಜವಾಬ್ದಾರಿಯಾಗಿದೆ. ಇದನ್ನರಿತುಕೊಂಡು ಕಾರ್ಯನಿರ್ವಹಿಸಬೇಕು. ಮಿಷನ್ ವಿಜಯಪುರದಡಿ ವೆಬ್ ಕಾಸ್ಟಿಂಗ್ ಮೂಲಕ ಸಂಜೆ ಕ್ಲಾಸ್ ಗಳು ನಡೆಯುತ್ತಿದ್ದು,  ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಂತೆ ನಿಗಾ ವಹಿಸಬೇಕು ಎಂದು ಅವರು ಹೇಳಿದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ವಸತಿ ನಿಲಯಗಳಲ್ಲಿರುವ ಮಕ್ಕಳೊಂದಿಗೆ ಸಂಬಂಧಿಸಿದ ಹಾಸ್ಟೆಲ್ ವಾರ್ಡನ್‌ಗಳು ಬೆರೆತು, ಮುಕ್ತವಾಗಿ ಮಾತನಾಡಿ, ವಿಷಯಗಳನ್ನು ಹಂಚಿಕೊಂಡಾಗ ಅವರ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ. ಅವರಲ್ಲಿನ ಸಮಸ್ಯೆ ಅರ್ಥ ಮಾಡಿಕೊಂಡು ಪರಿಹಾರ ಕಲ್ಪಿಸಲು ಮುಂದಾಗಬೇಕು. ಮಕ್ಕಳಿಗೆ ಓದಿನ ವಾತಾವರಣ ಕಲ್ಪಿಸಬೇಕು.  ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು, ಶೈಕ್ಷಣಿಕ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದೆ. ಇದರ ಸದ್ವಿನಿಯೋಗ ಪಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಅವರು ಹೇಳಿದರು.  

ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನ ಅಗತ್ಯವಿದೆ. ಈ ನಿಟ್ಟಿನಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಭವಿಷ್ಯಕ್ಕೆ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ತಿಳುವಳಿಕೆ ಮೂಡಿಸಬೇಕು. ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಾಸ್ಟೆಲ್ ಜವಾಬ್ದಾರಿ ಹೊಂದಿರುವ ವಾರ್ಡನ್‌ಗಳು, ಮೆಂಟರ್‌ಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಮೂಲಕ ಮಾದರಿಯಾಗಬೇಕು. ನೂರು ವಿದ್ಯಾರ್ಥಿಗಳು ಸುಧಾರಿಸಿದಾಗ, ಬೆಳವಣಿಗೆ ಹೊಂದಿದಾಗ ನೂರು ಕುಟುಂಬಗಳು ಬೆಳವಣಿಗೆ ಹೊಂದುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.  

ಡಿ.ಎ.ಮೂಲಿಮನಿ ಉಪನ್ಯಾಸ ನೀಡಿದರು. ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಡಾ.ನಾಗರಾಜ್, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಆಹಾರ ಸುರಕ್ಷತಾ ಅಧಿಕಾರಿ ಬಿರಾದಾರ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಸಮಾಜ ಕಲ್ಯಾಣ ಇಲಾಖೆ ಮಹೇಶ ಪೋತದಾರ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.