ಹುಬ್ಬಳ್ಳಿ 08 : ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಪ್ರತಿಪಕ್ಷ ಬಿಜೆಪಿ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈವರೆಗೆ ಸರ್ಕಾರ ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿವೆ. ಒಂದೆಡೆ ಬಿಜೆಪಿ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರೆ, ಇನ್ನೊಂದೆಡೆ ಬೇರೆ ರಾಜ್ಯಗಳಲ್ಲಿ ತಾವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ ಎಂದು ಲೇವಡಿ ಮಾಡಿದರು.
ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗಲಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗುವುದು. ಹಾಗೆಯೇ, ಸರ್ಕಾರ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.