ಸಾರ್ವತ್ರಿಕ ಆರೋಗ್ಯ ಸರ್ವರಿಗೂ ಸಮಪಾಲು-ಸಿ.ಎಸ್.ಶಿವನಗೌಡ್ರ
Universal health is equal for all - C.S. Sivan Gowda
ಗದಗ 16: ಸಮಾಜದ ಕಟ್ಟಕಡೆಯವ ವ್ಯಕ್ತಿಗೂ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು ಲಭ್ಯವಾಗುವಂತೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾ.ಸಂ.ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಐ.ಇ.ಸಿ.ವಿಭಾಗ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರಿ್ಡಸಲಾಗಿದ್ದ “ಅಂತರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ವಿಮಾ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ತೀವ್ರತರದ ಕಾಯಿಲೆಗಳು ಬಂದಾಗ ಉದಾಸೀನ ಮಾಡುವ ಜನರಿದ್ದಾರೆ. ತೀವ್ರತರದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ಆಶಾ ಕಾರ್ಯಕರ್ತೆಯರು ತಿಳುವಳಿಕೆ ನೀಡಬೇಕು. ಆಶಾ ಕಾರ್ಯಕರ್ತೆಯರು ಸಾರ್ವಜನಿಕರ ಆರೋಗ್ಯ ರಕ್ಷಣೆ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಆರೋಗ್ಯ ಇಲಾಖೆಯಿಂದ ಜಾರಿಯಾಗಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸಬೇಕು. ಆರೋಗ್ಯ ಪಡೆಯುವ ಹಕ್ಕು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿದೆ. ಈ ಹಕ್ಕು ಉಲ್ಲಂಘನೆಯಾಗಬಾರದು. ಕಾನೂನು ಸೇವಾ ಪ್ರಾಧಿಕಾರವು ಆರೋಗ್ಯ ಇಲಾಖೆಯೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬಡಜನರು ಸೇರಿದಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ಅರಿವು ಮೂಡಿಸಬೇಕು. ಯೋಜನೆಗಳ ಸೌಲಭ್ಯ ಅವರಿಗೆ ತಲುಪುವಂತಾಗಬೇಕೆಂದು ಸಿ.ಎಸ್.ಶಿವನಗೌಡ್ರ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ಕೈಗೆಟಕುವ ಬೆಲೆಯಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು ಲಭ್ಯವಾಗಬೇಕು ಎಂಬ ಉದ್ದೇಶದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ಇಲಾಖೆಯಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಆರೋಗ್ಯ ಇಲಾಖೆಯ ಯೋಜನೆಗಳ ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಶ್ರಮಿಸುತ್ತಿದೆ. ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಯೋಜನೆ ಹಾಗೂ ಚಿಕಿತ್ಸೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಎನ್.ವಿ.ಬಿ.ಡಿ.ಸಿ.ಅಧಿಕಾರಿ ಡಾ. ಎಚ್.ಎಲ್.ಗಿರಡ್ಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತ ದೇಶ ತಾಂತ್ರಿಕವಾಗಿ ಮುಂದುವರೆದಿದೆ. ಆದರೂ ಸಹಿತ ಕೆಲವೊಂದು ಸ್ಲಂ ಪ್ರದೇಶದಲ್ಲಿನ ಜನರು ತಮ್ಮ ಆರೋಗ್ಯ ರಕ್ಷಣೆಗಾಗಿ ಶ್ರಮ ಪಡುತ್ತಿದ್ದಾರೆ. ಅಂತಹ ಬಡಜನರಿಗೂ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಆರೋಗ್ಯ ಸೇವೆ ದೊರಕಿಸಬೇಕೆಂದು ಪ್ರಯತ್ನಿಸುತ್ತಿದೆ ಎಂದು ತಿಳಿಸಿದ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪಾತ್ರ, ಆರೋಗ್ಯ ಇಲಾಖೆಯ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಕುರಿತು ಸವಿಸ್ತಾರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್.ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ವಿವರವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ಕೆ.ಭಜಂತ್ರಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಅರುಂಧತಿ ಕುಲಕರ್ಣಿ ,ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು. ಶಾಂತಾ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ ಸರ್ವರಿಗೂ ಸ್ವಾಗತಿಸಿದರು. ಡಿ.ವೈ.ಎಚ್.ಇ.ಓ ಪುಷ್ಪಾ ಪಾಟೀಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 