ವಿಜಯಪುರ ಜಿಲ್ಲೆಗೆ ಪೂರ್ಣ ಪ್ರಮಾಣ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯವಿರಲಿ: ಅರವಿಂದ ಕುಲಕರ್ಣಿ

ವಿಜಯಪುರ ಜಿಲ್ಲೆಗೆ ಪೂರ್ಣ ಪ್ರಮಾಣ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯವಿರಲಿ: ಅರವಿಂದ ಕುಲಕರ್ಣಿ Vijayapura district should have a full-fledged government medical college: Arvind Kulkarni

ವಿಜಯಪುರ 26: ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ   ರಾಜ್ಯ ಘಟಕದ ವತಿಯಿಂದ  ಜಿಲ್ಲಾಧಿಕಾರಿ ಆನಂದ ಕೆ. ಅವರ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. 

ಈ ಸಂರ್ದಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಪ್ರಸ್ತುತ ನಡೆದಿರುವ ಮುಂಗಾರು ಅಧಿವೇಶನದಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಇರಬೇಕೆಂಬ ಉದ್ದೇಶದಿಂದ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಪ್ರಾರಂಭಿಸಿದ್ದು ಅದರಂತೆ ಈಗ ನಡೆದಿರುವ ಅಧಿವೇಶನದಲ್ಲಿ 4 ಜಿಲ್ಲೆಗಳಾದ ಕೊಪ್ಪಳ, ಬಾಗಲಕೋಟ. ವಿಜಯಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಮುಂದಾಗಿದೆ. ಬಾಗಲಕೋಟ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಸಂಪೂರ್ಣ ಸರ್ಕಾರದ ಸ್ವಾಮ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಆದರೆ ವಿಜಯಪುರ ಹಾಗೂ ತುಮಕೂರು ಈ ಎರಡು ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಮಹಾವಿದ್ಯಾಲಯ ನಡೆಸಲು ಸರ್ಕಾರ ಮುಂದಾಗಿದೆ. ಈ ನಿರ್ಣಯಕ್ಕೆ ಅಖಂಡ ಕರ್ನಾಟಕ ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ. ವೈದ್ಯಕೀಯ ಮಹಾವಿದ್ಯಾಲಯ ಸಂಪೂರ್ಣ ಸರ್ಕಾರದ ಅಧೀನದಲ್ಲಿದ್ದರೆ ಬಡ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇದರಲ್ಲಿ ಖಾಸಗಿ ವೈದ್ಯಕೀಯ 'ಶಿಕ್ಷಣ ಮಹಾವಿದ್ಯಾಲಯದೊಂದಿಗೆ ಜೋಡಿಸಿದರೆ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ತೊಂದರೆಯಾಗುತ್ತದೆ. ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿಯವರು ತಮ್ಮ ಮನಸ್ಸಿಗೆ ಬಂದಂತೆ ಡೊನೇಶನ್ ಪಡೆಯುತ್ತಾರೆ. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದುಬಾರಿ ಡೊನೆಲೈನ್ ಕೊಟ್ಟು ಶಿಕ್ಷಣ ಕಲಿಯಲು ಆಗುವದಿಲ್ಲ. ಇದರಿಂದ ವೈದ್ಯಕೀಯ ಶಿಕ್ಷಣ ಕಲಿಯಬೇಕೆಂಬ ಆಶಾಭಾವದಲ್ಲಿರುವ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯವನ್ನು ಖಾಸಗಿ ಅವರೊಂದಿಗೆ ಜೋಡಿಸಿಕೊಳ್ಳುವದು ಸರ್ಕಾರದ ಹಿಂದಿನ ಉದ್ದೇಶವಾದರೂ ಏನು?. ಇದರಲ್ಲಿ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದವರ ಪ್ರಡ್ಯಂತರ ಅಡಗಿದ್ದು ಮಹಾವಿದ್ಯಾಲಯಗಳನ್ನು ಸಂಪೂರ್ಣ ಸರ್ಕಾರವೇ ಮಾಡಿದರೆ ಖಾಸಗಿ ಸರ್ಕಾರಿ ವೈದ್ಯಕೀಯ ನಿಯಂತ್ರಣ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಹಿನ್ನಡೆಯಾಗುತ್ತದೆ ಎಂಬ ಭ್ರಾಂತಿ ಖಾಸಗಿಯವರಿಗೆ ಕಾಡುತ್ತಿದೆ. ಅದು ಏನೆ ಇದ್ದರು ಯಾವುದೇ ಕಾರಣಕ್ಕೂ ಖಾಸಗಿಯವರೊಂದಿಗೆ ಜಂಟಿಯಾಗಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಸ್ಥಾಪಿಸುವು ಬೇಡ. ಬಡ ವಿದ್ಯಾರ್ಥಿಗಳ ಅನುಕೂಲ ದೃಷ್ಟಿಯಿಂದ ಸಂಪೂರ್ಣ ಸರ್ಕಾರದ ಅಧೀನದಲ್ಲಿಯೇ ನಡೆಸಿಕೊಂಡು ಹೋಗಬೇಕು. ಒಂದು ವೇಳೆ ಖಾಸಗಿ ಸಹಭಾಗಿತ್ವದಲ್ಲಿ ನಡೆಸಿದ್ದೆ ಆದರೆ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. 

ಈ ಸಂರ್ದಭದಲ್ಲಿ ರೈತ ಮುಖಂಡರಾದ ಲಂಕೇಶ ತಳವಾರ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಳಾಧ್ಯಕ್ಷ ವಿಜಯ ಪೂಜೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.