ತ್ಯಾಜ್ಯ ವಿಂಗಡಣೆ, ವಿಲೇವಾರಿ ಸೂಕ್ತ ರೀತಿಯಲ್ಲಿ ನಡೆಸಬೇಕು: ಸುಭಾಷ್ ಆಡಿ

ಬೆಳಗಾವಿ ಸೆ.09 : ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇ ಮಾಡುವಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಅತಿ ಮಹತ್ವದಾಗಿದೆ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲ ವಾರ್ಡುಗಳಲ್ಲಿ ಹಸಿ ಹಾಗೂ ಒಣ ಕಸ ವಿಂಗಡಣೆಗೆ ಕ್ರಮ ವಹಿಸಲು ಸೂಕ್ತ ರೂಪರೇಷೆಗಳನ್ನು ಸಿದ್ದಪಡಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಾದ ಸುಭಾಷ ಆಡಿ ಅವರು ಸೂಚಿಸಿದರು.   

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ (ಸೆ.09) ಜರುಗಿದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

ಜಿಲ್ಲೆಯಲ್ಲಿರುವ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಜನಸಂಖ್ಯೆ ಹಾಗೂ ಉತ್ಪಾದನೆಯಾಗುವ ತ್ಯಾಜ್ಯದ ಬಗ್ಗೆ ಸ್ಥಳೀಯ ಸಂಸ್ಥೆಗಳ ಮಾಹಿತಿ ಹೊಂದಿರಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಪ್ರತಿ ಮನೆಯಿಂದ ಹಸಿ ಹಾಗೂ ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾಗುವಂತೆ ತಿಳಿಸಿದರು.   

ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿನ ಮಾರ್ಗಸೂಚಿಗಳನ್ವಯ ಸಂಗ್ರಹವಾದ ತ್ಯಾಜ್ಯ ವಿಲೇವಾರಿಗೆ ಕ್ರಮವಹಿಸಬೇಕು. ಕಸ ವಿಲೇವಾರಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಎಲ್ಲ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು.   

ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವದು ಸಾರ್ವಜನಿಕರ ಜವಾಬ್ದಾರಿಯೂ ಆಗಿದ್ದು ಈ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ನೀಡುವ ಕಾರ್ಯ ಸ್ಥಳೀಯ ಸಂಸ್ಥೆಗಳಿಂದ ಆಗಬೇಕಾಗಿದೆ. ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ಸಂಗ್ರಹಣೆಗಾಗಿ ವೆಬ್‌ಸೈಟ್‌ಗಳನ್ನು ಸೃಜಿಸಿ ತಮ್ಮ ವ್ಯಾಪ್ತಿಯ ತ್ಯಾಜ್ಯ ವಿಲೇಗೆ ಮುಂದಾಗುವಂತೆ ತಿಳಿಸಿದರು.   

ವಿಶ್ವದಲ್ಲಿಯೇ ಅತಿ ಹೆಚ್ಚು ಪ್ಲಾಸ್ಟಿಕ ಉತ್ಪಾದನೆಯಲ್ಲಿ ದೇಶವು ಐದನೇ ಸ್ಥಾನದಲ್ಲಿದೆ. ಕೇಂದ್ರ ಸರಕಾರದಿಂದ ಪ್ಲಾಸ್ಟಿಕ ಬಳಕೆ ನಿಷೇದಿಸಿದ್ದರು ಸಹ ಇಂದು ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ ಬಳಕೆ ಆಗುತ್ತಿದೆ. ಪ್ಲಾಸ್ಟಿಕ ಬಳಕೆ ಆಗುತ್ತಿರುವ ಕುರಿತು ಅಧಿಕಾರಿಗಳು ನಿರಂತರವಾಗಿ ಅಂಗಡಿ, ಮಾರುಕಟ್ಟೆಗಳಲ್ಲಿ ತಪಾಸಣೆ ಜರುಗಿಸಿ ಪ್ಲಾಸ್ಟಿಕ ಬಳಕೆ ಅಥವಾ ಮಾರಾಟ ಮಾಡುತ್ತಿರುವದು ಕಂಡು ಬಂದಲ್ಲಿ ಅಂತಹ ಅಂಗಡಿ ಮುಂಗಟ್ಟುಗಳ ಪರವಾನಿಗೆಯನ್ನು ರದ್ದುಗೊಳಿಸಲು ಕ್ರಮವಹಿಸಬೇಕು.   

ಪ್ಲಾಸ್ಟಿಕ, ಈ-ವೇಸ್ಟಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇ ಮಾಡಬೇಕು. ಕಾಲೇಜು, ಕೈಗಾರಿಕೆ, ಹೊಟೇಲ್, ಮದುವೆ ಮಂಟಪಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕಾಲೇಜುಗಳಲ್ಲಿ ಗ್ರೀನ್ ಕ್ಯಾಂಪಸಗಳನ್ನಾಗಿಸಿ ಪ್ಲಾಸ್ಟಿಕ ನಿಷೇಧ ಮಾಡುವ ಕುರಿತು ಆಯಾ ಕಾಲೇಜು ಮುಖ್ಯಸ್ಥರನ್ನು ಉತ್ತೇಜಿಸಬೇಕು. ಅಲ್ಲದೇ ದೇವಸ್ಥಾನಗಳಲ್ಲಿಯೂ ತಿಳುವಳಿಕೆ ನೀಡಬೇಕು.   

ಕಟ್ಟಡ ತ್ಯಾಜ್ಯವನ್ನು ವಿಲೇ ಮಾಡಲು ಕಟ್ಟಡ ಮಾಲಿಕರಿಗೆ ತಿಳುವಳಿಕೆ ನೀಡಬೇಕು. ತ್ಯಾಜ್ಯ ವಿಲೆಗೆ ಸಂಸ್ಥೆಗಳಿಂದಲೇ ವಾಹನಗಳನ್ನು ಪೂರೈಸಬೆಕು. ಈ ವಾಹನದ ಬಾಡಿಗೆಯನ್ನು ಕಟ್ಟಡ ಮಾಲೀಕರಿಂದ ಭರಣಾ ಮಾಡಿಸಬೇಕು. ಕಟ್ಟಡ ನಿರ್ಮಾಣ ಅನುಮತಿ ನೀಡುವಾಗ ತ್ಯಾಜ್ಯ ವಿಲೇವಾರಿ ಕುರಿತು ಷರತ್ತುಗಳಲ್ಲಿ ನಮೂದಿಸಬೇಕು. ಷರತ್ತುಗಳನ್ನು ಉಲ್ಲಂಘಿಸಿದವರ ವಿರುದ್ಧ ದಂಡ ಹಾಕಲು ತಿಳಿಸಿದರು.   

ಒಂದು ನಗರವನ್ನು ಸುಂದರಾವಗಿಡಲು ವಾಹನ ನಿಲುಗಡೆ ಸ್ಥಳ, ಜಾಹೀರಾತುಗಳ ನಿಯಂತ್ರಣದ ಜೊತೆಗೆ ಬೇಕೆಂದರಲ್ಲಿ ತ್ಯಾಜ್ಯ ಸಂಗ್ರಹವಾಗದಂತೆ ನೋಡಿಕೊಳ್ಳುವದು ಬಹು ಮುಖ್ಯವಾಗಿದ್ದು ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಗಮನ ಹರಿಸಬೇಕು.   

ತ್ಯಾಜ್ಯ ವಿಲೇವಾರಿಯಲ್ಲಿ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಹೊರತಾಗಿ ಒಬ್ಬರ ಮೇಲೊಬ್ಬರು ಆಪಾದನೆ ಮಾಡದೇ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಸೂಚಿಸಿದರು. ಮರುಬಳಕೆ ಆಗ ಬಹುದಾಂತಹ ತ್ಯಾಜ್ಯದಿಂದ ಸ್ಥಳೀಯ ಸಂಸ್ಥೆಗಳು ಆದಾಯವನ್ನು ಗಳಿಸಬಹುದಾಗಿದ್ದು ಈ ಕುರಿತು ಸ್ಥಳೀಯ ಸಂಸ್ಥೆಗಳು ನಿಗಾವಹಿಸಬೇಕು.   

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಕಸ ವಿಲೇವಾರಿಗೆ ಬೇಕಾದಂತಹ ಜಾಗೆ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಮನೆ ಮನೆಗೆ ತೆರಳಿ ಕಸ ಸಂಗ್ರಹ ಸಂದರ್ಭದಲ್ಲಿ ಹಸಿ ಕಸ ಹಾಗೂ ಒಣ ಕಸ ವಿಂಗಡನೆಗೆ ಕ್ರಮ ವಹಿಸಲಾಗುತ್ತಿದೆ. ಶೀಘ್ರದಲ್ಲಿಯೇ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತ್ಯಾಜ್ಯ ವಿಂಗಡಣೆ ಹಾಗೂ ಸೂಕ್ತ ರೀತಿಯಲ್ಲಿ ವಿಲೇವಾರಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು ಎಂದರು.   

ಕಟ್ಟಡ ನಿರ್ಮಾಣ ತ್ಯಾಜ್ಯವನ್ನು ವಿಲೇ ಮಾಡಲು ಅನುಕೂಲವಾಗುವಂತೆ ಸ್ಥಳೀಯ ಸಂಸ್ಥೆಗಳಿಂದ ಆಪ್‌ಗಳನ್ನು ರಚಿಸಲು ಮುಖ್ಯಾಧಿಕಾರಿಗಳಿಗೆ ಸೂಚಿಸಿದರು. ಕಟ್ಟಡ ತ್ಯಾಜ್ಯ ವಿಲೆಗೆ ತಗಲುವ ವೆಚ್ಚವನ್ನು ಕಟ್ಟಡ ಮಾಲಿಕರಿಂದ ಪಡೆಯುವದರ ಮೂಲಕ ಸ್ಥಳೀಯ ಸಂಸ್ಥೆಗಳ ಆದಾಯವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದರು.  

ನಗರವನ್ನು ಸುಂದರವಾಗಿಡಲು ನಗರದಲ್ಲಿರುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇ ಮಾಡಲು ಕ್ರಮವಹಿಸಬೇಕು. ಮನೆಯಿಂದ ಸಂಗ್ರಹಿಸಲಾಗುವ ತ್ಯಾಜ್ಯ ವಿಂಗಡಣೆ ಹಾಗೂ ಸೂಕ್ತ ರೀತಿಯಲ್ಲಿ ವಿಂಗಡಣೆ ಮಾಡುವ ಕುರಿತು ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಚಾರ ಮಾಡಲು ತಿಳಿಸಿದರು.  

ಸಭೆಯಲ್ಲಿ ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಪೌರಾಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಮಲ್ಲಿಕಾರ್ಜುನ ಕಲಾದಗಿ, ಪ್ರಾದೇಶಿಕ ಪರಿಸರ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.